ಮಡಿಕೇರಿ ಆ.8 NEWS DESK : ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಐ ಮತ್ತು ಎಂಎಲ್ ವಿಭಾಗದ ವತಿಯಿಂದ ಕಾರ್ಗಿಲ್ ವಿಜಯ ದಿವಸವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ನಿವೃತ್ತ ಮೇಜರ್ ಡಾ. ಕುಶ್ವಂತ್ ಕೋಳಿಬೈಲು ಅಮರ್ ಜವಾನ್ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ಇಂಜಿನಿಯರ್ಗಳು ರಕ್ಷಣಾ ಇಲಾಖೆಯಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತಾರೆ ಎಂದು ಇಸ್ರೇಲ್ ದೇಶದ ಉದಾಹರಣೆಯೊಂದಿಗೆ ವಿವರಿಸಿದರು. ಅಲ್ಲದೆ ಹೇಗೆ ರಕ್ಷಣಾ ಇಲಾಖೆಯು ನೂತನ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುತ್ತಿದೆ ಎಂಬುದನ್ನು ತಿಳಿಸಿದರು. ಇಂದಿನ ಯುವ ಇಂಜಿನಿಯರ್ ಗಳು ಕೃತಕ ಬುದ್ದಿಮತ್ತೆಯನ್ನು ಬಳಸಿ ಹೊಸ ಅವಿಷ್ಕಾರಗಳನ್ನು ನಡೆಸಿ ದೇಶದ ರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಬೇಕೆಂದು ಕಿವಿ ಮಾತನ್ನು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾಡಿದ ಕೊಡವ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ರಾಕೇಶ್ ಪೂವಯ್ಯ ಮಾತನಾಡಿ, ದೇಶದ ಭದ್ರತೆಗೆ ಸೈನಿಕರ ಪಾತ್ರವು ಬಹು ಮುಖ್ಯವಾಗಿದೆ. ರಕ್ಷಣಾ ವ್ಯವಸ್ಥೆಯಲ್ಲಿ ತಂತ್ರಜ್ಞಾನದ ಪಾತ್ರ, ವಿದ್ಯಾರ್ಥಿಗಳು ಕೃತಕ ಬುದ್ದಿಮತ್ತೆಯನ್ನು ಬಳಸಿ ದೇಶದ ರಕ್ಷಣಾ ವ್ಯವಸ್ಥೆಗೆ ಸಹಕಾರಿಯಾಗುವಂತೆ ತಾಂತ್ರಿಕ ಅನ್ವೇಶಣೆಗಳನ್ನು ಮಾಡಬೇಕೆಂದು ಸಲಹೆ ನೀಡಿದರು. ದೇಶದ ರಕ್ಷಣೆಯ ವಿಷಯ ಬಂದಾಗ ನಾವೆಲ್ಲರೂ ಒಗ್ಗೂಡಬೇಕು ಎಂದು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಬಸವರಾಜ ಮಾತನಾಡಿ, ದೇಶದ ಉನ್ನತಿಗೆ ರಕ್ಷಣಾ ವ್ಯವಸ್ಥೆ ಮತ್ತು ತಂತ್ರಜ್ಞಾನ ಎರಡು ಬಹು ಮುಖ್ಯ ಎಂದರು.
ಕಾರ್ಯಕ್ರಮದಲ್ಲಿ ಸಿ.ಐ.ಟಿ ಪ್ರಾಧ್ಯಾಪಕ ವೃಂದ, ಬೋಧಕೇತರ ವೃಂದದವರು ಹಾಗೂ ವಿವಿಧ ವಿಭಾಗದ ವಿದ್ಯಾರ್ಥಿಗಳು ಹಾಜರಿದ್ದರು. ಆರ್ಟಿಫಿಶಿಯಲ್ ಇಂಟೆಲಿಜನ್ಸ್ ಮತ್ತು ಮಶಿನ್ ಲರ್ನಿಂಗ್ ವಿಭಾಗದ ಮುಖ್ಯಸ್ಥ ಡಾ. ಬಿ.ಬಿ.ರಾಮಕೃಷ್ಣ ಸ್ವಾಗತಿಸಿದರು. ಪ್ರೊ. ಟಿ.ವಿ.ವಿಘ್ನೇಶ್ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ಎಐ ಮತ್ತು ಎಂಎಲ್ ವಿಭಾಗದ ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.










