
ಮಡಿಕೇರಿ NEWS DESK ಆ.23 : ಮಹಿಳೆಯರು ಶಿಕ್ಷಣದಿಂದ ವಂಚಿತರಾಗಬಾರದು, ಸಾಮಾಜಿಕ ಪಿಡುಗಿನಿಂದ ನೊಂದಿರುವ ಮಹಿಳೆಗೆ ನೆರವು ಮತ್ತು ಸೌಲಭ್ಯ ಕಲ್ಪಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಇವರ ಸಹಯೋಗದೊಂದಿಗೆ 2024-25 ನೇ ಸಾಲಿನ ಮಿಷನ್ ಶಕ್ತಿ ಯೋಜನೆಯಡಿ “ಬೇಟಿ ಪಡಾವೋ-ಬೇಟಿ ಬಚಾವೋ” ಜಿಲ್ಲಾ ಮಟ್ಟದ ಕಾರ್ಯಕ್ರಮದ ಪ್ರಯುಕ್ತ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರಿಗೆ “ವಿಶ್ವ ಮಾನವ ಕಳ್ಳ ಸಾಗಾಣಿಕೆ’ ತಡೆ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾನವ ಕಳ್ಳ ಸಾಗಾಣಿಕೆಯ ಸಮಸ್ಯೆ ಮಹಿಳೆಯರನ್ನು ಹೆಚ್ಚಾಗಿ ಕಾಡುತ್ತಿದೆ. ಸಾಮಾನ್ಯರಂತೆ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ, ಬೇರೆ ಬೇರೆ ಕೆಲಸ ಕಾರ್ಯಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಸಾಮಾಜಿಕ ಪಿಡುಗಿನಿಂದ ನೊಂದಿರುವ ಮಹಿಳೆಯರು ಕೆಲವು ಮಾರಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಇವರನ್ನು ಗುರುತಿಸಿ ಅವರಿಗೆ ನೆರವು ಮತ್ತು ಉತ್ತಮ ಸೌಲಭ್ಯವನ್ನು ಕಲ್ಪಿಸಬೇಕಾಗಿದೆ. ಪ್ರತಿಯೊಬ್ಬರು ಪರಸ್ಪರ ಸಹಕಾರ ಮನೋಭಾವದಿಂದ ಜೀವನ ಸಾಗಿಸುತ್ತ ಒಳಿತನ್ನು ಬಯಸಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ್ ಅವರು ಮನುಷ್ಯನೇ ಮನುಷ್ಯರನ್ನು ಕಳ್ಳ ಸಾಗಾಣಿಕೆ ಮಾಡುವುದು, ದುರುದ್ದೇಶಗಳಿಗೆ ಅವರನ್ನು ಮಾರಾಟ ಮಾಡುವುದು, ಬಲವಂತವಾಗಿ ದುಡಿಸಿಕೊಳ್ಳುವುದು, ಬಾಲ ಕಾರ್ಮಿಕ ಪದ್ಧತಿ, ಭಿಕ್ಷಾಟನೆ, ಹಿರಿಯ ಜೀವಗಳಿಂದ ಕೆಲಸ ಮಾಡಿಸುವುದು ಕಾನೂನಿನ ಪ್ರಕಾರ ತಪ್ಪು ಎಂದು ತಿಳಿಸಿದರು. ಬಾಲ ಕಾರ್ಮಿಕ ಸೊಸೈಟಿಯ ಯೋಜನಾ ನಿರ್ದೇಶಕÀ ಸಿರಾಜ್ ಅವರು ಮಾತನಾಡಿ ಬಾಲ ಕಾರ್ಮಿಕ ಪದ್ಧತಿಯನ್ನು ತಡೆಯಲು ಹಲವು ಕಾರ್ಯಕ್ರಮ ಆಯೋಜಿಸಿ ಕ್ರಿಯಾಯೋಜನೆ ರೂಪಿಸಲಾಗಿದೆ. ವಿಶೇಷ ತಂಡಗಳನ್ನು ರಚಿಸಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪಣತೊಟ್ಟಿದ್ದು, ಸಾರ್ವಜನಿಕರು ಈ ಕುರಿತು ಜಾಗೃತರಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಮಕ್ಕಳ ರಕ್ಷಣಾ ಘಟಕದ ಸಮಾಜ ಕಾರ್ಯಕರ್ತರಾದ ಕಿರಣ್, ಕಾರ್ಮಿಕ ಮಂಡಳಿಯ ಪ್ರಸನ್ನ ಅವರು ಹಾಜರಿದ್ದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಜಯಪ್ಪ ನಿರೂಪಿಸಿ, ಕೇಶಿನಿ ಎಸ್.ಆರ್ ಪ್ರಾರ್ಥಸಿ, ಸ್ವಾಗತಿಸಿದರು. ಇದೇ ಸಂದರ್ಭ ಮಾನವ ಕಳ್ಳ ಸಾಗಾಣಿಕೆ ವಿರುದ್ಧ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.











