ಕುಶಾಲನಗರ ಆ.24 NEWS DESK : ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯ ವತಿಯಿಂದ ಕೂಡುಮಂಗಳೂರು ಗ್ರಾ.ಪಂ, ಕೂಡ್ಲೂರು ದೇವಾಲಯ ಸಮಿತಿ ಹಾಗೂ ವಿವಿಧ ಸಮಿತಿಗಳ ಆಶ್ರಯದಲ್ಲಿ ವಿದ್ಯಾರ್ಥಿಗಳ ಮೂರನೇ ವರ್ಷದ ಜನಪದಶೈಲಿಯ ಗ್ರಾಮೀಣ ಕೆಸರುಗದ್ದೆ ಕ್ರೀಡಾಕೂಟ ಸಂಭ್ರಮದಿಂದ ನಡೆಯಿತು. ಶಾಲೆಯ ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನಾ (ಎನ್.ಎಸ್.ಎಸ್.), ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕುಶಾಲನಗರ ಸ್ಥಳೀಯ ಸಂಸ್ಥೆ, ಶಾಲಾ ವಿದ್ಯಾರ್ಥಿ ಸಂಘ, ಎಸ್.ಡಿ.ಎಂ.ಸಿ., ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ಗ್ರಾಮದ ಬಸವೇಶ್ವರ ಸಮಿತಿ, ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸುಂಟಿಕೊಪ್ಪ ಜೆ.ಸಿ.ಐ.ಸಂಸ್ಥೆ ಹಾಗೂ ಕುಶಾಲನಗರ ಕಾವೇರಿ ಜೆ.ಸಿ.ಐ.ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ 78ನೇ ಸ್ವಾತಂತ್ರ್ಯೋತ್ಸವ-2024 : ಗೋ ಗ್ರೀನ್ ಅಭಿಯಾನದ ಅಂಗವಾಗಿ ಕೂಡ್ಲೂರು ಗ್ರಾಮದ ಪ್ರಗತಿಪರ ರೈತ ಕೆ.ಎಸ್.ರಾಜಾಚಾರಿ ಅವರ ಗದ್ದೆಯಲ್ಲಿ ನಡೆದ ಗ್ರಾಮೀಣ ಕೆಸರು ಗದ್ದೆ ಕ್ರೀಡಾಕೂಟವು ಗ್ರಾಮಸ್ಥರ ಗಮನ ಸೆಳೆಯಿತು. ಕ್ರೀಡಾಕೂಟದಲ್ಲಿ ಶಾಲಾ ವಿದ್ಯಾರ್ಥಿಗಳು ಕೆಸರು ಗದ್ದೆಯಲ್ಲಿ ಮಿಂದೆದ್ದು, ಕುಣಿದು ಕುಪ್ಪಳಿಸಿದರು. ಮಕ್ಕಳ ಓಟದ ಸ್ಪರ್ಧೆ, ಹಗ್ಗ ಜಗ್ಗಾಟ, ವಾಲಿಬಾಲ್, ಥ್ರೋಬಾಲ್ ಪಂದ್ಯಾವಳಿ, ಬೊಗಸೆಯಿಂದ ಲೋಟಕ್ಕೆ ಸ್ಪರ್ಧೆ ಸೇರಿದಂತೆ ಇನ್ನಿತರ ಕ್ರೀಡಾ ಸ್ಪರ್ಧೆಗಳಲ್ಲಿ ಮಕ್ಕಳು ತಮ್ಮನ್ನು ತೊಡಗಿಸಿಕೊಂಡರು. ಗದ್ದೆಯಲ್ಲಿ ಕೆಸರು ಮೆದ್ದಿಕೊಂಡು ಹಗ್ಗ ಜಗ್ಗಾಟದಲ್ಲಿ ತೊಡಗಿದ್ದ ವಿದ್ಯಾರ್ಥಿಗಳು ತಮ್ಮ ತಂಡವು ಗೆಲ್ಲಬೇಕೆಂಬ ಹರಸಾಹಸದಿಂದ ತಮ್ಮ ಬಲವನ್ನು ಪ್ರದರ್ಶಿಸುತ್ತಿದ್ದುದು ಕಂಡುಬಂತು. ಮಕ್ಕಳೊಂದಿಗೆ ಕೆಸರುಗದ್ದೆಗೆ ಇಳಿದ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ನ ಜಿಲ್ಲಾ ಸಂಚಾಲಕ ಟಿ.ಜಿ.ಪ್ರೇಮಕುಮಾರ್, ಕೆಸರು ಗದ್ದೆ ಕ್ರೀಡೆಯ ಮಹತ್ವದ ಕುರಿತು ಮಾಹಿತಿ ನೀಡಿದರು. ಜನಪದ ಶೈಲಿಯ ಗ್ರಾಮೀಣ ಕೆಸರು ಗದ್ದೆ ಕ್ರೀಡಾಕೂಟವನ್ನು ವಿದ್ಯಾರ್ಥಿಗಳಲ್ಲಿ ರೈತರ ಕೃಷಿ ಬದುಕಿನೊಂದಿಗೆ ರೈತರ ಜೀವನದ ಕಷ್ಟಸುಖಗಳನ್ನು ಅರ್ಥ ಮಾಡಿಕೊಳ್ಳುವ ದಿಸೆಯಲ್ಲಿ ಸಂಘಟಿಸಲಾಗಿದೆ. ಈ ಕ್ರೀಡಾಕೂಟದ ಸಂಘಟನೆಗೆ ಕೂಡ್ಲೂರು ಗ್ರಾಮದ ಜನತೆ, ದೇವಾಲಯ ಸಮಿತಿಯವರು ಮತ್ತು ಜೆ.ಸಿ.ಐ.ಸಂಸ್ಥೆ, ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ ಎಂದು ಪ್ರೇಮಕುಮಾರ್ ಹೇಳಿದರು. ಕೃಷಿ ಪ್ರಧಾನವಾದ ಕೊಡಗಿನಲ್ಲಿ ಮಳೆಗಾಲದಲ್ಲಿ ಕೆಸರು ಗದ್ದೆ ಕ್ರೀಡಾಕೂಟಗಳು ಬಲು ಜನಪ್ರಿಯವಾಗಿವೆ. ಭತ್ತದ ಗದ್ದೆ ನಾಟಿ ಸಂದರ್ಭದಲ್ಲಿ ರೈತಾಪಿ ಜನರು ಒಂದೆಡೆ ಸೇರಿ ಸಹಬಾಳ್ವೆ ಹಾಗೂ ಮನೋರಂಜನೆಗಾಗಿ ನಡೆಸಿಕೊಂಡು ಬರುತ್ತಿರುವ ಕೆಸರು ಗದ್ದೆ ಕ್ರೀಡೆಯು ಜನಜನಿತವಾಗಿದ್ದು ಜನಪ್ರಿಯತೆ ಗಳಿಸಿದೆ ಎಂದರು. ಕೆಸರು ಗದ್ದೆ ನಮ್ಮ ಮಣ್ಣಿನ ರೈತರ ಬದುಕಿನ ಸಂಕೇತ. ಕೆಸರು ಗದ್ದೆ ಕ್ರೀಡಾ ಕೂಟದಿಂದ ಗ್ರಾಮೀಣ ಸೊಗಡು, ಸಂಸ್ಕೃತಿ ಮತ್ತು ಭವ್ಯ ಪರಂಪರೆಯ ಅನಾವರಣ ಸಾಧ್ಯ. ಸಂಸ್ಕೃತಿಯಲ್ಲಿ ಮಣ್ಣಿಗೆ ಬಹಳಷ್ಟು ಮಹತ್ವವಿದೆ. ಮನುಷ್ಯನಿಗೂ ಮಣ್ಣಿಗೂ ಅವಿನಾಭಾವ ಸಂಬಂಧವಿದೆ ಎಂದು ಟಿ.ಜಿ.ಪ್ರೇಮಕುಮಾರ್ ಹೇಳಿದರು. ಎಸ್.ಡಿ.ಎಂ.ಸಿ.ಅಧ್ಯಕ್ಷ ಎ.ಎಂ.ಜವರಯ್ಯ ಮಾತನಾಡಿ, ನಮ್ಮ ಶಾಲಾ ಶಿಕ್ಷಕರ ತಂಡದ ಪ್ರೇರೇಪಣೆ ಹಾಗೂ ಗ್ರಾಮಸ್ಥರ ಸಹಕಾರದಿಂದ ಇಂತಹ ಕ್ರೀಡಾಕೂಟ ಸಂಘಟಿಸುವ ಮೂಲಕ ಮಕ್ಕಳಿಗೆ ಕೃಷಿ ಪಾಠದ ಮಹತ್ವ ತಿಳಿಸುತ್ತಿರುವುದು ಶ್ಲಾಘನೀಯ ಎಂದರು. ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಕೂಡ್ಲೂರು ಗ್ರಾಮದ ಪ್ರಗತಿಪರ ರೈತ ಕೆ.ಎಸ್.ರಾಜಾಚಾರಿ ಮಾತನಾಡಿ, ಪೂರ್ವಜರ ಕಾಲದಿಂದ ಬಂದಿರುವ ಇಂತಹ ದೇಸಿ ಕ್ರೀಡೆಗಳನ್ನು ಪರಿಚಯಿಸುವ ಕಾರ್ಯವನ್ನು ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ ವಿಶೇಷ ಆಸಕ್ತಿ ವಹಿಸಿ ತಮ್ಮ ಶಿಕ್ಷಕರ ತಂಡದೊಂದಿಗೆ 3 ನೇ ವರ್ಷದಲ್ಲಿ ಸಂಘಟಿಸಿರುವುದು ಬಹಳ ಸಂತಸ ತಂದಿದೆ. ಇಂತಹ ಕ್ರೀಡೆಗಳು ವಿದ್ಯಾರ್ಥಿಗಳಿಗೆ ಕೃಷಿ ಪರಿಚಯ ಮಾಡಿಕೊಡಲು ಸಹಕಾರಿಯಾಗಿವೆ ಎಂದರು. ನಮ್ಮ ಸಂಸ್ಕೃತಿಯಲ್ಲಿ ಮಣ್ಣಿಗೆ ಬಹಳಷ್ಟು ಮಹತ್ವವಿದೆ. ಮನುಷ್ಯನಿಗೂ ಮಣ್ಣಿಗೂ ಅವಿನಾಭಾವ ಸಂಬಂಧವಿದೆ. ಮಣ್ಣಿನಿಂದ ದೇಹ, ದೇಹದಿಂದ ಮಣ್ಣಿಗೆ ಎಂದು ಪುರಂದರ ದಾಸರು ಹೇಳಿದ್ದಾರೆ. ಗದ್ದೆಯ ಕೆಸರಿಗೆ ರೋಗನಿರೋಧಕ ಶಕ್ತಿ ಇದೆ. ಕೆಸರಿನಲ್ಲಿ ನಿರ್ಮಲವಾಗಿ ಅರಳುವ ತಾವರೆಯಂತೆ ನಾವು ಬದುಕಬೇಕು ಎಂದು ರಾಜಾಚಾರಿ ಅಭಿಪ್ರಾಯಪಟ್ಟರು. ಕುಶಾಲನಗರ ಕಾವೇರಿ ಜೆ.ಸಿ.ಐ.ಸಂಸ್ಥೆಯ ಅಧ್ಯಕ್ಷ ಬಿ.ಜಗದೀಶ್ ಮಾತನಾಡಿ, ಕೆಸರು ಗದ್ದೆಯಲ್ಲಿ ಮಕ್ಕಳು ಸಂಭ್ರಮದಿಂದ ಪಾಲ್ಗೊಂಡು ಕೃಷಿಯ ಅನುಭವ ಪಡೆಯುತ್ತಿರುವುದು ಹೆಮ್ಮೆಯ ಸಂಗತಿ. ದೇಸಿ ಕ್ರೀಡೆ ಉಳಿಸಿ-ಬೆಳೆಸುವ ಉದ್ದೇಶ ನಮ್ಮದು ಎಂದರು.
ಗ್ರಾಮೀಣ ಸೊಗಡಿನ ಕೆಸರುಗದ್ದೆ ಕ್ರೀಡಾಕೂಟಕ್ಕೆ ಮತ್ತಷ್ಟು ಉತ್ತೇಜನ ನೀಡಬೇಕಿದೆ. ಕೆಸರುಗದ್ದೆ ಕ್ರೀಡೆಯಂತಹ ದೇಶೀಯ-ಗ್ರಾಮೀಣ ಕ್ರೀಡಾಕೂಟಗಳಿಗೆ ಇನ್ನಷ್ಟು ಉತ್ತೇಜನ ನೀಡುವುದು ಅತ್ಯಗತ್ಯವಾಗಿದೆ ಎಂದು ಜಗದೀಶ್ ಹೇಳಿದರು. ತಾಲ್ಲೂಕು ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಎಂ.ಟಿ.ದಯಾನಂದ ಪ್ರಕಾಶ್ ಮಾತನಾಡಿ, ಇಂತಹ ಕ್ರೀಡಾಕೂಟಗಳು ವಿದ್ಯಾರ್ಥಿಗಳಿಗೆ ಕೃಷಿ ಅನುಭವ ನೀಡುತ್ತವೆ ಎಂದರು. ಗದ್ದೆಯಲ್ಲಿ ಮಕ್ಕಳೊಂದಿಗೆ ತೊಡಗಿಸಿಕೊಂಡಿದ್ದ ಜಿಲ್ಲಾ ಗೈಡ್ಸ್ ಸಂಸ್ಥೆಯ ಕ್ಯಾಪ್ಟನ್ ಸಿ.ಎಂ.ಸುಲೋಚನಾ ಮಾತನಾಡಿ, ಆಧುನಿಕ ಯುಗದಲ್ಲಿ ನಶಿಸುತ್ತಿರುವ ದೇಸಿ ಕ್ರೀಡೆಗಳನ್ನು ಉಳಿಸಿ-ಬೆಳೆಸಬೇಕಾಗಿದೆ ಎಂದು ಹೇಳಿದರು. ಕ್ರೀಡಾಕೂಟದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಎ.ಎಂ.ಜವರಯ್ಯ, ಸದಸ್ಯರಾದ ಶೃತಿ, ಲಕ್ಷ್ಮಿ, ಕುಶಾಲನಗರ ಕಾವೇರಿ ಜೆ.ಸಿ.ಐ.ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಎಂ.ಜೆ.ರಜನೀಕಾಂತ್ ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಎಂ.ಟಿ.ದಯಾನಂದ ಪ್ರಕಾಶ್, ಬಿ.ಎನ್.ಸುಜಾತ, ಬಿ.ಡಿ.ರಮ್ಯ, ಎಸ್.ಎಂ.ಗೀತಾ, , ಅನ್ಸಿಲಾ ರೇಖಾ, ಕೆ.ಟಿ.ಸೌಮ್ಯ, ಕೃಷಿಕ ಕೆ.ಆರ್ ನಾಗರಾಜು, ಕೆ.ಎನ್. ಕುಶಾಲ್, ಇತರರು ಇದ್ದರು.
ಕೆಸರುಗದ್ದೆ ಕ್ರೀಡಾಕೂಟದಲ್ಲಿ ಮಕ್ಕಳಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಟಿ.ಸೌಮ್ಯ ಕ್ರೀಡೆ ನಡೆಸಿಕೊಟ್ಟರು. ಗದ್ದೆಯಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳು ಕಣ್ಮನ ಸೆಳೆದವು. ಒಂದೆಡೆ ಗೆಲ್ಲುವ ತವಕ, ಇನ್ನೊಂದೆಡೆ ಕೆಸರಿನ ಗದ್ದೆಯಲ್ಲಿ ಆಟದ ಸಂಭ್ರಮದಲ್ಲಿ ವಿದ್ಯಾರ್ಥಿಗಳು ಸಖತ್ ಎಂಜಾಯ್ ಮಾಡಿದರು. ಕೆಸರಿನ ಗದ್ದೆಗಳಲ್ಲಿ ಧುಮುಕಿ ಮೈ ಚಳಿ ಬಿಟ್ಟು ಎಲ್ಲರೂ ಉತ್ಸಾಹದಿಂದ ಪಾಲ್ಗೊಂಡಿದ್ದರು. ಓಟದ ಸ್ಪರ್ಧೆಯಲ್ಲಿ ಹಲವರು ಕೆಸರಿನಲ್ಲಿ ಬಿದ್ದರೂ ಎದ್ದು ಮತ್ತೆ ಓಡಿ ಗಮನ ಸೆಳೆದರು. ಜತೆಗೆ ಹಗ್ಗಜಗ್ಗಾಟವಂತೂ ಮೈನವಿರೇಳಿಸುವಂತಿತ್ತು.










