ಮಡಿಕೇರಿ ಆ.26 NEWS DESK : ಸಿದ್ದಾಪುರದ ಕಾಫಿ ತೋಟಗಳು ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಆ.29 ರಂದು ಮೂರ್ನಾಡಿನಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಗುರುವಾರ ಬೆಳಿಗ್ಗೆ 10.30 ಗಂಟೆಗೆ ಮೂರ್ನಾಡು ಪಟ್ಟಣದಲ್ಲಿ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯ ಮಂಡಿಸಲಾಗುವುದು. ಆದಿಮಸಂಜಾತ ಕೊಡವರ ಭೂಮಿಯ ಹಕ್ಕನ್ನು ರಕ್ಷಿಸಲು ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ಹೋರಾಟ ಅನಿವಾರ್ಯವಾಗಿದೆ. “ಕೊಡವ ಲ್ಯಾಂಡ್” ಸ್ವಯಂ ನಿರ್ಣಯದ ಭೂರಾಜಕೀಯ ಸ್ವಾಯತ್ತತೆ ಘೋಷಣೆ ಮತ್ತು ಕೊಡವರಿಗೆ ಎಸ್ಟಿ ಟ್ಯಾಗ್ ನೀಡುವುದು ಅಗತ್ಯವಾಗಿದೆ. ಇದಕ್ಕಾಗಿ ವ್ಯಾಪಕ ಜನಜಾಗೃತಿ ಮತ್ತು ಜಿಲ್ಲೆಯಾದ್ಯಂತ ಶಾಂತಿಯುತ ಬೃಹತ್ ಮಾನವ ಸರಪಳಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಕೊಡವ ಲ್ಯಾಂಡ್ ಗೆ ಮಾರಕವಾಗಿರುವ ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ವಿಲ್ಲಾ, ಟೌನ್ ಶಿಪ್, ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಮಾಫಿಯಾಗಳಂತಹ ಬಂಡವಾಳಶಾಹಿಗಳಿಗೆ ನೆರವಾಗಬಲ್ಲ ಕಾನೂನುಗಳನ್ನು ರೂಪಿಸಿ ಕೊಡವರಿಗೆ ಮಾತೃಭೂಮಿಯಲ್ಲಿ ನೆಲೆ ಇಲ್ಲದಂತೆ ಮಾಡುವ ಹುನ್ನಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಮೂರ್ನಾಡಿನಲ್ಲಿ ನಡೆಯುವ ಮಾನವ ಸರಪಳಿ ಜನಜಾಗೃತಿ ಕಾರ್ಯಕ್ರಮದಲ್ಲಿ ಸರ್ವ ಕೊಡವರು ಪಾಲ್ಗೊಳ್ಳುವ ಮೂಲಕ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯ ವಿರುದ್ಧ ಸಿಎನ್ಸಿ ನಡೆಸುತ್ತಿರುವ ಹೋರಾಟಕ್ಕೆ ಕೈಜೋಡಿಸಬೇಕೆಂದು ಮನವಿ ಮಾಡಿದ್ದಾರೆ.









