
ಮಡಿಕೇರಿ NEWS DESK ಸೆ.12 : ರಾಜ್ಯದ 31 ಜಿಲ್ಲೆಗಳಲ್ಲಿ ಮಾನವ ಸರಪಳಿ ಏರ್ಪಡಿಸುತ್ತಿದ್ದು, ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಲ್ಲಿ ಸಂಪಾಜೆಯಿಂದ ಶಿರಂಗಾಲ ಬಳಿಯ ಗಡಿ ಪ್ರದೇಶದವರೆಗೆ ಮಾನವ ಸರಪಳಿ ಏರ್ಪಡಿಸಬೇಕಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ. ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಮಾನವ ಸರಪಳಿ ರಚಿಸುವ ಸಂಬಂಧ ಶಾಲಾ-ಕಾಲೇಜಿನ ಮುಖ್ಯಸ್ಥರು, ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಎರಡನೇ ಸುತ್ತಿನ ಪೂರ್ವಭಾವಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು. ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸೆ.15 ರಂದು ಬೆಳಗ್ಗೆ 9 ರಿಂದ 10 ಗಂಟೆಯವರೆಗೆ ಮಾನವ ಸರಪಳಿ ಆಯೋಜಿಸಬೇಕಿದೆ. ಆ ನಿಟ್ಟಿನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಅಧಿಕಾರಿಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸ್ವಯಂ ಪ್ರೇರಣೆಯಿಂದ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಕೋರಿದರು. ಸರ್ಕಾರವು ಬೀದರ್ ಜಿಲ್ಲೆಯ ಬಸವ ಕಲ್ಯಾಣದಿಂದ ಚಾಮರಾಜನಗರದವರೆಗೆ ರಾಜ್ಯದ 31 ಜಿಲ್ಲೆಗಳಲ್ಲಿ ಮಾನವ ಸರಪಳಿ ಏರ್ಪಡಿಸುತ್ತಿದ್ದು, ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಲ್ಲಿ ಸಂಪಾಜೆಯಿಂದ ಶಿರಂಗಾಲ ಬಳಿಯ ಗಡಿ ಪ್ರದೇಶದವರೆಗೆ ಮಾನವ ಸರಪಳಿ ಏರ್ಪಡಿಸಬೇಕಿದೆ. ಆ ದಿಸೆಯಲ್ಲಿ ಆಯಾಯ ಗ್ರಾಮ, ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಸ್ಥಳೀಯವಾಗಿ ಎಲ್ಲರೂ ಪಾಲ್ಗೊಂಡು ಸಹಕರಿಸುವಂತೆ ಮನವಿ ಮಾಡಿದರು. ಭಾರತವು ವಿಶ್ವದಲ್ಲಿ ಬೃಹತ್ ಸಂವಿಧಾನವನ್ನು ಒಳಗೊಂಡಿದೆ. ಆ ನಿಟ್ಟಿನಲ್ಲಿ ಪ್ರಜಾಪ್ರಭುತ್ವದ ಮಹತ್ವ ಬಗ್ಗೆ ಮಾಹಿತಿ ನೀಡುವ ನಿಟ್ಟಿನಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದ್ದು, ಪ್ರತಿಯೊಬ್ಬರೂ ಭಾಗವಹಿಸುವಂತೆ ಕೋರಿದರು.
ಸೆಪ್ಟೆಂಬರ್, 15 ರಂದು ಬೆಳಗ್ಗೆ 9 ರಿಂದ 10 ಗಂಟೆವರೆಗೆ ಒಂದು ಗಂಟೆ ಕಾರ್ಯಕ್ರಮ ಇರಲಿದೆ. ಮಾನವ ಸರಪಳಿ ಸಂದರ್ಭದಲ್ಲಿ ಎಲ್ಲರ ಸುರಕ್ಷತೆ ಮತ್ತು ಸುಭದ್ರತೆ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು. ‘ಜಿಲ್ಲೆಯಲ್ಲಿ ಸಂಪಾಜೆಯಿAದ ಶಿರಂಗಾಲ ಬಳಿಯ ಗಡಿ ಪ್ರದೇಶದವರೆಗೆ ಸುಮಾರು 77 ಕಿ.ಮೀ. ಮಾನವ ಸರಪಳಿ/ ರಿಲೇ ನಡೆಯಲಿದೆ. ಆ ನಿಟ್ಟಿನಲ್ಲಿ ಪ್ರತೀ 100 ಮೀ.ಗೆ ಒಬ್ಬರಂತೆ ವಿಭಾಗಾಧಿಕಾರಿ, ಪ್ರತೀ ಒಂದು ಕಿ.ಮೀ.ಗೆ ಒಬ್ಬರಂತೆ ಪ್ರದೇಶ ಅಧಿಕಾರಿ, 3 ರಿಂದ 5 ಕಿ.ಮೀ.ವರೆಗೆ ಒಬ್ಬರಂತೆ ತಾಲ್ಲೂಕು ಮಟ್ಟದ ಅಧಿಕಾರಿ ಜೊತೆಗೆ ಮಾನವ ಸರಪಳಿಯಲ್ಲಿ ಭಾಗವಹಿಸುವವರ ಸುರಕ್ಷತೆಗೆ ಸಾಕಷ್ಟು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ ಎಂದು ವೆಂಕಟ್ ರಾಜಾ ತಿಳಿಸಿದರು.’ ಮಾನವ ಸರಪಳಿ ಸಂದರ್ಭದಲ್ಲಿ ಸಾರಿಗೆ ಸಂಚಾರದಲ್ಲಿ ಯಾವುದೇ ರೀತಿಯ ವ್ಯತ್ಯಯ ಇರುವುದಿಲ್ಲ. ಸುಗಮವಾಗಿ ಸಾರಿಗೆ ಸಂಚಾರ ನಡೆಯಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಪ್ರತಿಯೊಬ್ಬರೂ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಕೋರಿದರು. ಮಳೆ ಇರುವುದರಿಂದ ರೈನ್ಕೋಟ್ ಹಾಗೂ ಛತ್ರಿಯನ್ನು ತೆಗೆದುಕೊಂಡು ಬರಬೇಕು ಎಂದು ಜಿಲ್ಲಾಧಿಕಾರಿ ಅವರು ಇದೇ ಸಂದರ್ಭದಲ್ಲಿ ಸಲಹೆ ಮಾಡಿದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ಮಾಹಿತಿ ನೀಡಿ ಜಿಲ್ಲೆಯ ಸಂಪಾಜೆಯಿಂದ ಶಿರಂಗಾಲ ಗಡಿ ಪ್ರದೇಶದವರೆಗೆ 12 ಗ್ರಾಮ ಪಂಚಾಯಿತಿಗಳು, 1 ನಗರಸಭೆ, 1 ಪುರಸಭೆ ಬರಲಿದ್ದು, ಆಯಾಯ ವ್ಯಾಪ್ತಿಯಲ್ಲಿ ಜಿಲ್ಲಾ ಮಟ್ಟದ, ತಾಲ್ಲೂಕು ಮಟ್ಟದ, ಗ್ರಾಮ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಮಾನವ ಸರಪಳಿ/ರಿಲೇ ಸಂದರ್ಭದಲ್ಲಿ ಸುಮಾರು 30 ಸಾವಿರ ಜನರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಎಲ್ಲರೂ ಸೆಪ್ಟೆಂಬರ್ 15 ರಂದು ಬೆಳಗ್ಗೆ 8.30 ಗಂಟೆಗೆ ಆಗಮಿಸಬೇಕು ಎಂದು ಕೋರಿದರು. ವಿವಿಧ ಕಡೆಗಳಲ್ಲಿ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸುವಂತಾಗಬೇಕು. ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಎಲ್ಲರೂ ಆನ್ಲೈನ್ ಮೂಲಕ ಹೆಸರು ನೋಂದಾಯಿಸುವಂತೆ ಕೋರಿದರು. ಮಾನವ ಸರಪಳಿಯಲ್ಲಿ ನಾವಿನ್ಯತೆ ಕಾಪಾಡಿಕೊಳ್ಳುವುದು, ಅತೀ ಹೆಚ್ಚು ಗಿಡಗಳನ್ನು ನೆಡುವುದು, ಅತೀ ಹೆಚ್ಚು ಸರ್ಕಾರೇತರ ಸಂಸ್ಥೆಗಳು ಪಾಲ್ಗೊಳ್ಳುವಿಕೆ, ಅತೀ ಹೆಚ್ಚು ಖಾಸಗಿ ವಲಯ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಮಹತ್ವ ಕುರಿತು ಹೊರತಂದಿರುವ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಜಿ.ಪಂ.ಉಪ ಕಾರ್ಯದರ್ಶಿ ಎಸ್.ಧನರಾಜ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಾಲಾ- ಕಾಲೇಜಿನ ಮುಖ್ಯಸ್ಥರು, ತಾ.ಪಂ.ಇಒಗಳು ಇತರರು ಇದ್ದರು.









