ಮಡಿಕೇರಿ ಸೆ.18 NEWS DESK : ಪರಿಸರದ ಸ್ವಚ್ಛತೆಯನ್ನು ಕಾಪಾಡುವಲ್ಲಿ ಸಾರ್ವಜನಿಕರ ಸಹಭಾಗಿತ್ವ ಪ್ರಮುಖವಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗಿಡ ನೆಡುವ ಮೂಲಕ ಸ್ಚಚ್ಛತಾ ಹೀ ಸೇವಾ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿ ವರ್ಷದಂತೆ ಈ ವರ್ಷವೂ ಸಹ ಸ್ವಚ್ಛತಾಹೀ ಸೇವಾ ಪಾಕ್ಷಿಕವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅ.2 ರ ವರೆಗೂ ಈ ಕಾರ್ಯಕ್ರಮ ನಡೆಯಲಿದೆ. “ಸ್ವಭಾವ ಸ್ವಚ್ಛತೆ, ಸಂಸ್ಕಾರ ಸ್ವಚ್ಛತೆ” ಘೋಷ ವಾಕ್ಯದೊಂದಿಗೆ ಈ ಬಾರಿಯ ಸ್ವಚ್ಛತಾಹೀ ಸೇವಾ ಜಿಲ್ಲೆಯಾದ್ಯಂತ ನಡೆಯಲಿದೆ ಎಂದು ಅವರು ತಿಳಿಸಿದರು. ಕೊಡಗು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಮಾತನಾಡಿ, ಈ ಅಭಿಯಾನವೂ ಸ್ವಚ್ಛತೆಗಾಗಿ ಬೃಹತ್ ಪ್ರಮಾಣದಲ್ಲಿ ಸಾರ್ವಜನಿಕರ ಸಹಭಾಗಿತ್ವ ಮತ್ತು ಸಮುದಾಯದ ಭಾಗವಹಿಸುವಿಕೆಗೆ ಅನುಕೂಲ ಮಾಡಿಕೊಡುತ್ತದೆ ಎಂದರು. ಎಲ್ಲೆಂದರಲ್ಲಿ ಅಕ್ರಮವಾಗಿ ತ್ಯಾಜ್ಯ ಸುರಿಯುವ ಸ್ಥಳಗಳನ್ನು ಗುರುತಿಸಿ ಅಲ್ಲಿ ಸಮುದಾಯದ ಭಾಗವಹಿಸುವಿಕೆಯೊಂದಿಗೆ ಸ್ಥಳವನ್ನು ಸ್ವಚ್ಛ ಗೊಳಿಸಲಾಗುತ್ತದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತದೆ. ಜೊತೆಗೆ ಈ ರೀತಿಯಾಗಿ ಅಕ್ರಮವಾಗಿ ತ್ಯಾಜ್ಯ ಸುರಿಯುವವರಿಗೆ ದಂಡ ವಿಧಿಸಲಾಗುತ್ತದೆ ಎಂದು ಅವರು ತಿಳಿಸಿದರು. ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿ ಮತ್ತು ಜಿಲ್ಲಾ ಪಂಚಾಯರ್ ಉಪಕಾರ್ಯದರ್ಶಿ ಜಿ.ಧನರಾಜು ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸುವ ಉದ್ದೇಶದಿಂದ, ನಾನು ನಮ್ಮೆಲ್ಲರ ಆರೋಗ್ಯದ ಹಿತ ದೃಷ್ಟಿಯಿಂದ, ಒಮ್ಮೆ ಉಪಯೋಗಿಸುವ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸುತ್ತೇನೆ. ದಿನ ನಿತ್ಯ ಬಳಕೆಯಲ್ಲಿ ಪ್ಲಾಸ್ಟಿಕ್ ನ್ನು ಬಳಸದೇ ಪರಿಸರ ಸ್ನೇಹಿ ಕೈಚೀಲ ವಸ್ತುಗಳನ್ನು ಉಪಯೋಗಿಸುತ್ತೇನೆ. ನನ್ನ ಮನೆಯ ಕಸವನ್ನು ಹಸಿ ಮತ್ತು ಒಣ ಕಸವನ್ನಾಗಿ ವಿಂಗಡಿಸಿ, ವಿಲೇವಾರಿ ಮಾಡುತ್ತೇನೆ. ಎಲ್ಲೆಂದರಲ್ಲಿ ಕಸ ಬಿಸಾಡದಂತೆ ಜನರಲ್ಲಿ ಜಾಗೃತಿ ಮೂಡಿಸಿ ನಮ್ಮ ಗ್ರಾಮವನ್ನು ಸ್ವಚ್ಛ, ಸುಂದರವನ್ನಾಗಿಸಲು ಶ್ರಮಿಸುತ್ತೇನೆ. ನಮ್ಮ ಸುತ್ತ-ಮುತ್ತಲ ಪರಿಸರದಲ್ಲಿನ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿ ವಿಲೇವಾರಿ ಮಾಡಲು ಸಹಕರಿಸುತ್ತೇನೆ. ನನ್ನ ನೆರೆ ಹೊರೆಯವರಲ್ಲಿ ಪ್ಲಾಸ್ಟಿಕ್ ತ್ಯಾಜ್ಯದ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ, ‘ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಗ್ರಾಮಗಳನ್ನಾಗಿ ರೂಪಿಸಲು ಶ್ರಮಿಸುತ್ತೇನೆ. ಈ ಎಲ್ಲಾ ಕ್ರಮಗಳನ್ನು ಪಾಲಿಸುವಂತೆ ಇತರರನ್ನು ಪ್ರೇರೇಪಿಸುತ್ತೇನೆ. ನನ್ನ ಗ್ರಾಮವನ್ನು ಸ್ವಚ್ಛ-ಸುಂದರ ಹಾಗೂ ಆರೋಗ್ಯವಂತವಾಗಿಸಿ, ಜವಾಬ್ದಾರಿಯುತ ನಾಗರೀಕನಾಗಿ ಸೇವೆ ಮಾಡುವುದಾಗಿ ದೃಢ ಪ್ರತಿಜ್ಞೆ ಮಾಡುತ್ತೇನೆ. ಸ್ವಚ್ಚ ಮೇವ ಜಯತೇ ಎಂದು ಜಿ.ಪಂ. ಉಪಕಾರ್ಯದರ್ಶಿ ಅವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ತಾಯಿಯ ಹೆಸರಲ್ಲಿ ಒಂದು ವೃಕ್ಷ (ಏಕ್ ಪೇಡ್ ಮಾ ಕೇ ನಾಮ್) ಅಭಿಯಾನದ ಭಾಗವಾಗಿ ಸಸಿ ನೆಟ್ಟು ನೀರೆರೆಯಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಸುರೇಶ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸತೀಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ನಟರಾಜ್, ಜಿಲ್ಲಾ ಅಗ್ರಣಿ ಬ್ಯಾಂಕ್ ನ ವ್ಯವಸ್ಥಾಪಕಾರದ ಗಂಗಾಧರ್ ನಾಯಕ್, ಸಹಾಯಕ ಯೋಜನಾಧಿಕಾರಿ ಜೀವನ್ ಕುಮಾರ್, ಸ್ವಚ್ಛ ಭಾರತ್ ಮಿಷನ್ ಯೋಜನೆಯ ಜಿಲ್ಲಾ ಸಮಾಲೋಚಕರಾದ ಹರ್ಷಿತ, ಪೆಮ್ಮಯ್ಯ, ಸೂರಜ್, ವಾಸುದೇವ್ ಇತರರು ಇದ್ದರು.








