
ಮಡಿಕೇರಿ NEWS DESK ನ.28 : ದೇಶ ಕಂಡ ಅಪ್ರತಿಮ ವೀರ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಮಾಡಿದ ಆರೋಪಿಯನ್ನು ಗಡಿಪಾರು ಮಾಡಲು ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶ್ರೀ ವಿಶ್ವಕರ್ಮ ಸಮುದಾಯ ಜಾಗೃತ ಸೇವಾ ಟ್ರಸ್ಟ್ ನ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇಬ್ಬರು ವೀರ ಸೇನಾಧಿಕಾರಿಗಳನ್ನು ಅಪಮಾನಿಸಿರುವ ಪ್ರಕರಣ ದೇಶದ ಇಡೀ ಸೇನಾ ವ್ಯವಸ್ಥೆಗೆ ತೋರಿದ ಅಗೌರವವಾಗಿದೆ. ಆದ್ದರಿಂದ ಇದನ್ನು ದೇಶದ್ರೋಹದ ಪ್ರಕರಣವೆಂದು ಪರಿಗಣಿಸಬೇಕು ಮತ್ತು ಆರೋಪಿಯ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಿ ಗಡಿಪಾರು ಮಾಡಬೇಕೆಂದು ಆಗ್ರಹಿಸಿದ್ದಾರೆ. ಭಾರತರತ್ನ ಗೌರವಕ್ಕೆ ಸಮಾನರಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ಅವರು ಭಾರತೀಯ ಸೇನೆಗೆ ನೀಡಿದ ಮಹತ್ವದ ಕೊಡುಗೆಗಳ ಬಗ್ಗೆ ಅರಿವಿಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿರುವುದು ಖಂಡನೀಯ. ಭಾರತ ದೇಶದ ಭದ್ರತೆ ಮತ್ತು ಜನರ ರಕ್ಷಣೆಗಾಗಿ ಸೇನಾಪಡೆಯ ಶಕ್ತಿಯನ್ನು ಹೆಚ್ಚಿಸಿ ದೇಶಭಕ್ತಿ ಮೆರೆದ ವೀರ ಸೇನಾನಿಗಳ ಕುರಿತು ಅವಹೇಳನ ಮಾಡುವುದು ಸರಿಯಲ್ಲ. ಈ ರೀತಿಯ ಪ್ರಕರಣಗಳು ಮತ್ತೆ ಮರುಕಳಿಸದಂತೆ ತಡೆಯಲು ಕಠಿಣ ಕಾನೂನು ಕ್ರಮ ಜಾರಿಗೊಳಿಸಬೇಕೆಂದು ಹರೀಶ್ ಜಿ.ಆಚಾರ್ಯ ಒತ್ತಾಯಿಸಿದ್ದಾರೆ.








