ನಾಪೋಕ್ಲು ನ.30 NEWS DESK : ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ ಎಂದು ಕರ್ನಾಟಕ ವಿಧಾನ ಪರಿಷತ್ ಶಾಸಕ ಎಂ.ಪಿ ಸುಜಾ ಕುಶಾಲಪ್ಪ ಹೇಳಿದರು. ಕೊಡಗು ಜಿಲ್ಲಾ ಪಂಚಾಯತ್, ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಚೇರಿ ಮತ್ತು ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಮಡಿಕೇರಿ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು. ಕಲೆ, ಸಾಹಿತ್ಯದಲ್ಲಿ ಭಾಗವಹಿಸುವುದರ ಮೂಲಕ ಪ್ರತಿಭೆಯನ್ನು ಹೊರ ಹಾಕಬೇಕು. ಮಕ್ಕಳ ಪ್ರತಿಭೆಗೆ ಪೋಷಕರು ಸಹಕಾರ ನೀಡಬೇಕು. ಯಾವುದರಲ್ಲಿ ಹೆಚ್ಚು ಆಸಕ್ತಿ ಇದೆ ಎಂಬುದನ್ನು ಗುರುತಿಸಿ ಶಿಕ್ಷಕರು ಅದಕ್ಕೆ ಪ್ರೋತ್ಸಾಹ ನೀಡಿ ವಿದ್ಯಾರ್ಥಿಗಳ ಬೆಳವಣಿಗೆಗೆ ಮಾರ್ಗದರ್ಶಕರಾಗಬೇಕು ಎಂದರು. ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ವಿದ್ಯಾರ್ಥಿಗಳ ಜೀವನ ರೂಪಿಸಲು ಸಹಕಾರಿಯಾಗುವಂತಹ ಶಿಕ್ಷಣವನ್ನು ನೀಡಬೇಕು ಎಂದರು. ಶ್ರೀ ರಾಮ ಟ್ರಸ್ಟ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕಲಿಯಂಡ ಹರಿ ಮಂದಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ನಿರ್ದೇಶಕ ಪೂಣಚ್ಚ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಡಾ ಬಿ.ಸಿ ದೊಡ್ಡೇಗೌಡ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕೆ.ಪಿ.ಗುರುರಾಜ್, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಬಿ.ಎಂ.ಶಾರದಾ, ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ನಿರ್ದೇಶಕರಾದ ಮುತ್ತಣ್ಣ, ಬಿದ್ದಾಟಂಡ ಮುದ್ದಯ್ಯ, ಅಪ್ಪಾರಂಡ ಅಪ್ಪಯ್ಯ ಹಾಗೂ ಶಿಕ್ಷಣ ಇಲಾಖೆಯ ವಿವಿಧ ಸಂಘಗಳ ಅಧ್ಯಕ್ಷರು ಉಪಸ್ಥಿತರಿದ್ದರು. ಶ್ರೀರಾಮ ಟ್ರಸ್ಟ್ ವಿದ್ಯಾಸಂಸ್ಥೆ, ವಿದ್ಯಾರ್ಥಿಗಳು ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಭಾಗಮಂಡಲದ ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳು ರೈತ ಗೀತೆ ಹಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಡಾ ಬಿ.ಸಿ.ದೊಡ್ಡೇಗೌಡ ಸ್ವಾಗತಿಸಿದರು. ಬಿ ಆರ್ ಪಿ ಮಂಜುಳಾ ಚಿತ್ರಾಪುರ ಕಾರ್ಯಕ್ರಮ ನಿರೂಪಿಸಿದರು. ಬಿ.ಎಂ.ಶಾರದಾ ವಂದಿಸಿದರು. ಬಳಿಕ ಕ್ಲಸ್ಟರ್ ಹಂತದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತಾಲೂಕು ಹಂತದ ವಿವಿಧ ಸ್ಪರ್ಧೆಗಳು ಜರುಗಿದವು.











