ಮಡಿಕೇರಿ NEWS DESK ಡಿ.2 : ಸಾಮಾಜಿಕ ಜಾಲತಾಣದಲ್ಲಿ ವೀರಸೇನಾನಿಗಳಾದ ಫೀ.ಮಾ.ಕೆ.ಎಂ. ಕಾರ್ಯಪ್ಪ ಮತ್ತು ಜ.ತಿಮ್ಮಯ್ಯ ಅವರ ವಿರುದ್ಧ ಅವಹೇಳನಕಾರಿ ಸಂದೇಶ ಹಾಕಿದ ವ್ಯಕ್ತಿಯನ್ನು ಗಡಿಪಾರು ಮಾಡಬೇಕು ಮತ್ತು ಪ್ರಕರಣವನ್ನು ರಾಷ್ಟ್ರೀಯ ತನಿಖಾ ತಂಡ(ಎನ್ಐಎ)ದ ಮೂಲಕ ತನಿಖೆಗೆ ಒಳಪಡಿಸಬೇಕೆಂದು ಟಿ.ಶೆಟ್ಟಿಗೇರಿ ಕೊಡವ ಸಂಘದ ಅಧ್ಯಕ್ಷ ಬೊಟ್ಟಂಗಡ ಗಿರೀಶ್ ಪೆಮ್ಮಯ್ಯ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ವಿಶ್ವವೇ ಗೌರವದಿಂದ ನೋಡುವ ಫೀ.ಮಾ.ಕಾರ್ಯಪ್ಪ ಮತ್ತು ಜ.ತಿಮ್ಮಯ್ಯ ಅವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ. ಅಂತಹವರ ವಿರುದ್ಧ ಅವಹೇಳನಕಾರಿ ಸಂದೇಶ ಹಾಕಿರುವುದು ಕೊಡಗಿನಲ್ಲಿ ನೆಲೆಸಿರುವ ನಿವೃತ್ತ ಸೈನಿಕರು ಸೇರಿದಂತೆ ಎಲ್ಲಾ ಸಮೂಹದವರಿಗೆ ನೋವನ್ನುಂಟುಮಾಡಿದೆ ಎಂದು ತಿಳಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ನವೆಂಬರ್ 29 ರಂದು ತಾವು ಶ್ರೀಮಂಗಲ ಠಾಣೆಯಲ್ಲಿ ಪ್ರಕರಣಕ್ಕೆ ಕಾರಣವಾಗಿರುವ ವ್ಯಕ್ತಿಯ ವಿರುದ್ಧ ದೂರನ್ನು ನೀಡಿದ್ದರು ಅದನ್ನು ದಾಖಲಿಸಿಕೊಂಡಿಲ್ಲ ಎಂದು ಆರೋಪಿಸಿದರು. ಮುಂದಿನ 15 ದಿನಗಳ ಒಳಗಾಗಿ ಪೊಲೀಸ್ ಇಲಾಖೆ ಪ್ರಕರಣದ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿಯ ಮೊಕದ್ದಮೆ ದಾಖಲಿಸುವುದಾಗಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಟಿ.ಶೆಟ್ಟಿಗೇರಿ ಕೊಡವ ಸಂಘದ ಉಪಾಧ್ಯಕ್ಷ ಮಚ್ಚಮಾಡ ರಂಜಿ ಹಾಗೂ ಕಾರ್ಯದರ್ಶಿ ಬೋಡಂಗಡ ಕಾರ್ಯಪ್ಪ ಉಪಸ್ಥಿತರಿದ್ದರು.










