ಮಡಿಕೇರಿ NEWS DESK ಡಿ.11 : ದೇಶ ಕಂಡ ಅಪ್ರತಿಮ ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಮಾನ ಮಾಡಿದ ವ್ಯಕ್ತಿಯ ಗಡಿಪಾರಿಗೆ ಆಗ್ರಹಿಸಿ ಕೊಡಗು ಸರ್ವ ಜನಾಂಗಗಳ ಒಕ್ಕೂಟ ಡಿ.12 ರಂದು ಕರೆ ನೀಡಿರುವ ಕೊಡಗು ಬಂದ್ ಗೆ ಕಾವೇರಿಸೇನೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಸೇನೆಯ ಸಂಚಾಲಕ ರವಿ ಚಂಗಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗಿನ ಹೆಮ್ಮೆಯ ವೀರಪುತ್ರರಾದ ಫೀ.ಮಾ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರನ್ನು ಅವಮಾನಿಸಿರುವುದು ಖಂಡನೀಯ. ಈ ಪ್ರಕರಣ ಕೊಡಗು ಮಾತ್ರವಲ್ಲದೆ ಇಡೀ ದೇಶದ ಜನರಿಗೆ ನೋವನ್ನುಂಟು ಮಾಡಿದೆ. ವೀರ ಸೇನಾಧಿಕಾರಿಗಳಿಗೆ ಅಗೌರವ ತೋರಿದ ವ್ಯಕ್ತಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿ ಕರೆ ನೀಡಲಾಗಿರುವ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗಿನ ಬಂದ್ ಗೆ ಕಾವೇರಿಸೇನೆ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ. ಜಿಲ್ಲೆಯ ಸಮಸ್ತ ಜನತೆ ಕೂಡ ಬೆಂಬಲ ನೀಡುವ ಮೂಲಕ ಬಂದ್ ನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.









