![](https://newsdeskkannada.com/wp-content/uploads/2025/01/Z-ND-ADVT-46.jpg)
![](https://newsdeskkannada.com/wp-content/uploads/2025/01/Z-ADVT-VANADAM-777-23.jpg)
![](https://newsdeskkannada.com/wp-content/uploads/2025/01/Z-GL-2-22.jpg)
ಮಡಿಕೇರಿ NEWS DESK ಜ.29 : ಕಾವೇರಿ ಕ್ಷೇತ್ರ ಭಾಗಮಂಡಲದಲ್ಲಿ ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಮೇಲ್ಸೆತುವೆಯನ್ನು ಜ.31 ರಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಕ್ತಾರ ಟಿ.ಪಿ.ರಮೇಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಮೇಲ್ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳೊAದಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೃಹತ್ ಕೈಗಾರಿಕಾ ಇಲಾಖಾ ಸಚಿವ ಎಂ.ಬಿ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದರು. ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಕ್ಷೇತ್ರಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳನ್ನು ಕೊಡಗು ಜಿಲ್ಲಾ ಕಾಂಗ್ರೆಸ್ನ ಪದಾಧಿಕಾರಿಗಳು, ಕಾರ್ಯಕರ್ತರು, ಭಾಗಮಂಡಲದ ಸಾರ್ವಜನಿಕರು ಅದ್ಧೂರಿಯಾಗಿ ಸ್ವಾಗತಿಸಲಿದ್ದಾರೆ ಎಂದು ತಿಳಿಸಿದರು.
ಮುಂಗಾರಿನ ಅವಧಿಯಲ್ಲಿ ವರ್ಷಂಪ್ರತಿ ಭಾಗಮಂಡಲ ಕ್ಷೇತ್ರ ಕಾವೇರಿ ನದಿ ಪ್ರವಾಹಕ್ಕೆ ಸಿಲುಕಿ, ಅಲ್ಲಿನ ನಿವಾಸಿಗಳು ಹಾಗೂ ಪುಣ್ಯ ಕ್ಷೇತ್ರಕ್ಕೆ ಆಗಮಿಸುವ ಭಕ್ತಾದಿಗಳು ಸಂಕಷ್ಟಕ್ಕೆ ಸಿಲುಕುತ್ತಿದ್ದರು. ಸುಮಾರು ಒಂಭತ್ತು ವರ್ಷಗಳ ಹಿಂದೆ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕೆ.ಜೆ.ಜಾರ್ಜ್ ಅವರು ಸ್ಥಳಕ್ಕೆ ಭೇಟಿ ನೀಡಿ ಜನರ ಮೂಲಭೂತ ಸಮಸ್ಯೆಗಳನ್ನು ಆಲಿಸಿ, ಮೇಲ್ಸೇತುವೆ ನಿರ್ಮಾಣದ ಅಗತ್ಯತೆಯನ್ನು ಮನಗಂಡು ಯೋಜನೆಯನ್ನು ಘೋಷಿಸಿದರು. ಸುಮಾರು 30 ಕೋಟಿ ರೂ. ಅನುದಾನವನ್ನು ವಿವಿಧ ಹಂತಗಳಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ಒದಗಿಸಲಾಗಿತ್ತು. ಆ ನಂತರದ ಬಿಜೆಪಿಯ 5 ವರ್ಷಗಳ ಅವಧಿಯಲ್ಲಿ ಮೇಲ್ಸೇತುವೆಯ ಕಾಮಗಾರಿ ಮಂದಗತಿಯಲ್ಲಿ ಸಾಗಿತು. ಇದೀಗ ಬಂದ ಕಾಂಗ್ರೆಸ್ ಸರಕಾರದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರು ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ವಿಶೇಷ ಕಾಳಜಿ ವಹಿಸಿ ಇದೀಗ ಉದ್ಘಾಟನೆಗೆ ಸಜ್ಜಾಗಿದೆ ಎಂದು ಟಿ.ಪಿ.ರಮೇಶ್ ವಿವರಿಸಿದರು.
ಹಿಂದೆ ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಎಸ್.ಎಂ.ಕೃಷ್ಣ ಅವರು ಕಾವೇರಿ ಕ್ಷೇತ್ರದ ಅಭಿವೃದ್ಧಿಗೆ ಕಾಳಜಿ ವಹಿಸಿ ಕಾವೇರಿ ನೀರಾವರಿ ನಿಗಮದ ಮೂಲಕ 12 ಕೋಟಿ ರೂ.ಗಳನ್ನು ಒದಗಿಸಿದ್ದರು. ಇದರ ಬಳಕೆಯ ಮೂಲಕ ಕ್ಷೇತ್ರ ಅಭಿವೃದ್ಧಿಯನ್ನು ಕಂಡಿದೆ, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಮೇಲ್ಸೇತುವೆ ಉದ್ಘಾಟನೆಗೊಳ್ಳುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಅವರ ಆಸಕ್ತಿಯಿಂದ 1 ಕೋಟಿ ರೂ. ವೆಚ್ಚದಲ್ಲಿ ಉದ್ಯಾನವನ ನಿರ್ಮಾಣಗೊಂಡಿದೆ ಎಂದರು. ಜಿಲ್ಲಾ ಕೇಂದ್ರ ಮಡಿಕೇರಿಯಿಂದ ಭಾಗಮಂಡಲಕ್ಕೆ ತೆರಳುವ ರಸ್ತೆಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಶಾಸಕರು ವಿಶೇಷ ಕಾಳಜಿ ವಹಿಸಿದ್ದು, ಈಗಾಗಲೆ ವಿಶೇಷ ಕಾರ್ಯಯೋಜನೆಯನ್ನು ಸರಕಾರದ ಮುಂದಿರಿಸಿದ್ದಾರೆ. ಅಗತ್ಯವಾದ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳುವ ಮೂಲಕ ಜಿಲ್ಲೆಯ ಸರ್ವತೋಮುಖ ಪ್ರಗತಿಯತ್ತ ಮುನ್ನಡೆಯುತ್ತಿರುವುದಾಗಿ ಹೇಳಿದರು. ಜಿಲ್ಲೆಯಲ್ಲಿ ವಿದ್ಯುತ್ ಮತ್ತು ವೋಲ್ಟೇಜ್ ಸಮಸ್ಯೆಗಳಿರುವುದನ್ನು ಮನಗಂಡು, ದಕ್ಷಿಣ ಕೊಡಗಿನ ಶ್ರೀಮಂಗಲದಲ್ಲಿ ವಿದ್ಯುತ್ ಉಪ ಕೇಂದ್ರ ಆರಂಭ ಸೇರಿದಂತೆ ವಿದ್ಯುತ್ ಮಾರ್ಗಗಳ ಬಲವರ್ಧನೆಗೆ ಸುಮಾರು 200 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ ಎಂದು ಟಿ.ಪಿ.ರಮೇಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಜು ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿಗಳಾದ ಮುನೀರ್ ಅಹಮ್ಮದ್, ಕೊಲ್ಯದ ಗಿರೀಶ್ ಹಾಗೂ ಕಾಂಗ್ರೆಸ್ ಸೇವಾ ದಳದ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ ಉಪಸ್ಥಿತರಿದ್ದರು.