
ಮಡಿಕೇರಿ ಫೆ.4 NEWS DESK : ರಾಜ್ಯದ ಮುಖ್ಯಮಂತ್ರಿಗಳು ಕೇಂದ್ರ ಸರಕಾರದ ಬಜೆಟ್ ನ್ನು ಟೀಕಿಸುತ್ತಾ ರಾಜಕೀಯ ಭಾಷಣ ಮಾಡುವುದನ್ನು ಬಿಟ್ಟು ಅಭಿವೃದ್ಧಿ ಕಾರ್ಯಗಳ ಕಡೆ ಮನ ನೀಡಲಿ ಎಂದು ವಿರಾಜಪೇಟೆ ಕ್ಷೇತ್ರದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರಕಾರ ಮಂಡಿಸಿದ 50.65 ಲಕ್ಷ ಕೋಟಿ ಮೊತ್ತದ ಬಜೆಟ್ ನ್ನು ಇಡೀ ದೇಶವೇ ಒಪ್ಪಿಕೊಂಡಿದೆ. ವಿದೇಶಿಗರು ಕೂಡ ಬಜೆಟ್ ಕುರಿತು ಉತ್ತಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಕಾಂಗ್ರೆಸ್ ಮಾತ್ರ ರಾಜಕೀಯ ಕಾರಣಕ್ಕಾಗಿ ಟೀಕಿಸುತ್ತಿದೆ. ರಾಜ್ಯದ ಮುಖ್ಯಮಂತ್ರಿಗಳು ಕೇಂದ್ರದ ಬಜೆಟ್ ಮಂಡನೆಯಾಗುವ ಮೊದಲೇ ಬಜೆಟ್ ನಿಂದ ಏನನ್ನೂ ನಿರೀಕ್ಷೆ ಮಾಡಲ್ಲ ಎಂದು ಟೀಕಿಸಲು ಆರಂಭಿಸಿದ್ದರು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರ ಸರಕಾರ ತನ್ನ ಘೋಷಣೆಯಂತೆ “ಜನಪ್ರಿಯವಲ್ಲ, ಜನಪರ ಬಜೆಟ್” ನ್ನು ನೀಡಿದೆ. ‘ಸಬ್ ಕಾ ಸಾತ್, ಸಬ್ ಕಾ ವಿಕಾಸ್’ ಎಂಬಂತೆ ದೇಶದ ಎಲ್ಲಾ ವರ್ಗದ ಜನರಿಗೂ ಸಹಕಾರಿಯಾಗಬಲ್ಲ ಬಜೆಟ್ ಇದಾಗಿದೆ. ತೆರಿಗೆ ವಿನಾಯಿತಿ ಮೊತ್ತವನ್ನು 12 ಲಕ್ಷಕ್ಕೆ ಏರಿಕೆ ಮಾಡಿರುವುದರಿಂದ ಮಧ್ಯಮ ವರ್ಗಕ್ಕೆ ಹೆಚ್ಚು ಅನುಕೂಲವಾಗಿದೆ. ಗ್ರಾಮೀಣಾಭಿವೃದ್ಧಿಗಾಗಿ 2ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಇದರಿಂದ ಕುಡಿಯುವ ನೀರು ಮತ್ತು ರಸ್ತೆ ಅಭಿವೃದ್ಧಿಗೆ ಹೆಚ್ಚು ಅನುಕೂಲವಾಗಲಿದೆ ಎಂದರು. ಜಿಎಸ್ಟಿ ಪಾಲಿನ ಹಣವನ್ನು ಸಂವಿಧಾನದತ್ತವಾಗಿ ಜನಸಂಖ್ಯಾ ಆಧಾರದಲ್ಲಿ ರಾಜ್ಯಗಳಿಗೆ ಹಂಚಿಕೆ ಮಾಡಲಾಗುತ್ತಿದೆ. ಜಿಎಸ್ಟಿ ಸಮಿತಿಯಲ್ಲಿ ತೆಗೆದುಕೊಳ್ಳುವ ನಿರ್ಧಾರ ಅಂತಿಮವಾಗಲಿದೆ. ಕೇಂದ್ರ ಅರ್ಥ ಸಚಿವರಾದ ನಿರ್ಮಲಾ ಸೀತಾರಾಮ್ ಅವರು ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ. ಮುಖ್ಯಮಂತ್ರಿಗಳು ಜಿಎಸ್ಟಿ ಪಾಲಿನ ಕುರಿತು ರಾಜಕೀಯ ಭಾಷಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
::: ಕೊಡಗಿಗೆ ಪ್ಯಾಕೇಜ್ ಯಾಕಿಲ್ಲ ::: ಜಿಲ್ಲೆಯಲ್ಲಿ ಅಕಾಲಿಕ ಮಳೆಯಿಂದ ಕಾಫಿ ಫಸಲು ಕುಸಿತಗೊಂಡು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ವನ್ಯಜೀವಿಗಳ ಉಪಟಳ ಮಿತಿ ಮೀರಿದೆ, ಹುಲಿಗಳು ನಗರ ಪ್ರದೇಶಕ್ಕೆ ಬರುವ ಆತಂಕವಿದೆ. ಆದರೆ ರಾಜ್ಯ ಸರಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಮತ್ತು ಪರಿಹಾರ ನೀಡುತ್ತಿಲ್ಲ. ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗ ರಸ್ತೆಗಳ ಅಭಿವೃದ್ಧಿಗಾಗಿ ಕೊಡಗು ಜಿಲ್ಲೆಗೆ 100 ಕೋಟಿ ರೂ. ವಿಶೇಷ ಪ್ಯಾಕೇಜ್ ನೀಡಲಾಗಿತ್ತು. ಈಗಿನ ಮುಖ್ಯಮಂತ್ರಿಗಳು ಯಾಕೆ ಪ್ಯಾಕೇಜ್ ಘೋಷಣೆ ಮಾಡುತ್ತಿಲ್ಲವೆಂದು ಕೆ.ಜಿ.ಬೋಪಯ್ಯ ಪ್ರಶ್ನಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಸುನಿಲ್ ಸುಬ್ರಮಣಿ ಮಾತನಾಡಿ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ಅವರು ವಿನಾಕಾರಣ ಕೇಂದ್ರ ಸರಕಾರವನ್ನು ಟೀಕೆ ಮಾಡುವುದನ್ನು ಬಿಟ್ಟು ಕೊಡಗು ಜಿಲ್ಲೆಗೆ ಸಚಿವ ಸ್ಥಾನ ದೊರಕಿಸಿಕೊಡಲಿ. ಚೆಂಬು ಪ್ರದರ್ಶಿಸಿ ಕೀಳುಮಟ್ಟದ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ. ಮುಖ್ಯಮಂತ್ರಿಗಳಿಗೆ ಜನರ ಬಗ್ಗೆ ಕಾಳಜಿ ಇದ್ದರೆ ಹಾಲು ಮತ್ತು ಆಲ್ಕೋಹಾಲ್ ನ ಬೆಲೆ ಕಡಿಮೆ ಮಾಡಲಿ ಎಂದು ಒತ್ತಾಯಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ ಲೋಕಸಭಾ ಚುನಾವಣೆಯಲ್ಲಿ ಲಕ್ಷ್ಮಣ್ ಅವರಿಗೆ ಕೊಡಗು ಹಾಗೂ ಮೈಸೂರು ಜನತೆ ಈಗಾಗಲೇ ಚೆಂಬು ನೀಡಿದ್ದಾರೆ, ಇನ್ನು ಮುಂದೆಯೂ ನೀಡಲಿದ್ದಾರೆ ಎಂದು ಲೇವಡಿ ಮಾಡಿದರು. ಮುಖ್ಯಮಂತ್ರಿಗಳು ಕೊಡಗು ಜಿಲ್ಲೆಯ ಬಗ್ಗೆ ಮಲತಾಯಿ ಧೋರಣೆ ತಾಳಿದ್ದಾರೆ. ಕಾಫಿಗೆ ಉತ್ತಮ ಬೆಲೆ ಇದ್ದರೂ ಅಕಾಲಿಕ ಮಳೆಯಿಂದ ಶೇ.50 ರಷ್ಟು ಫಸಲು ನಷ್ಟವಾಗಿದೆ. ಆದರೆ ರಾಜ್ಯ ಸರಕಾರ ಯಾವುದೇ ರೀತಿಯ ಪರಿಹಾರವನ್ನು ನೀಡಿಲ್ಲ. ಸಿ ಮತ್ತು ಡಿ ಭೂಮಿಯ ಗೊಂದಲ ಹಾಗೇ ಮುಂದುವರೆದಿದೆ, ಸಾಕಷ್ಟು ಸಮಸ್ಯೆಗಳು ಜಿಲ್ಲೆಯನ್ನು ಕಾಡುತ್ತಿದ್ದರೂ ಭಾಗಮಂಡಲಕ್ಕೆ ಬಂದ ಮುಖ್ಯಮಂತ್ರಿಗಳು ಯಾವುದೇ ಸ್ಪಂದನೆಯನ್ನು ನೀಡಿಲ್ಲ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಸಮಸ್ಯೆಗಳನ್ನು ಮನವರಿಕೆ ಮಾಡಿಕೊಡುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಟೀಕಿಸಿದರು. ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗ ನೀಡಿದ ಅನುದಾನದಿಂದ ನಿರ್ಮಾಣಗೊಂಡ ಕಟ್ಟಡಗಳನ್ನು ಸುಣ್ಣಬಣ್ಣ ಬಳಿದು ಉದ್ಘಾಟನೆ ಮಾಡುವುದಷ್ಟೇ ಕಾಂಗ್ರೆಸ್ ಸರಕಾರದ ಕಾರ್ಯವಾಗಿದೆ. ಯಾವುದೇ ಅಭಿವೃದ್ಧಿ ಯೋಜನೆಗಳ ಬಗ್ಗೆ ಸರಕಾರ ಕಾಳಜಿ ತೋರುತ್ತಿಲ್ಲ. ಭಾಗಮಂಡಲ ಸೇತುವೆ ನಿರ್ಮಾಣಕ್ಕೆ ನಮ್ಮ ಸರಕಾರ ಅನುದಾನ ನೀಡಿದೆ ಎಂದು ತಿಳಿಸಿದರು. ಕೇಂದ್ರ ಸರಕಾರ ಮಂಡಿಸಿರುವ ಬಜೆಟ್ ಅತ್ಯುತ್ತಮವಾಗಿದೆ, ಎಲ್ಲಾ ವರ್ಗದ ಜನರಿಗೂ ಅನುಕೂಲ ಕಲ್ಪಿಸಿದೆ. ದೇಶದ ಪ್ರವಾಸೋದ್ಯಮದ ಅಭಿವೃದ್ಧಿಗೆ 2541 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಇದರಿಂದ ಪ್ರವಾಸೋದ್ಯಮದಲ್ಲಿ ಗುರುತಿಸಿಕೊಂಡಿರುವ ಕೊಡಗು ಜಿಲ್ಲೆಗೂ ಅನುಕೂಲವಾಗಲಿದೆ. ಆದರೆ ಬಜೆಟ್ ನ್ನು ಟೀಕೆ ಮಾಡಲೇಬೇಕೆಂದು ಮಾನಸಿಕವಾಗಿ ಮೊದಲೇ ತಯಾರಿ ಮಾಡಿಕೊಂಡಿದ್ದ ಕಾಂಗ್ರೆಸ್ ವಿನಾಕಾರಣ ಟೀಕೆ ಮಾಡುತ್ತಿದೆ ಎಂದು ರವಿ ಕಾಳಪ್ಪ ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ತಳೂರು ಕಿಶೋರ್ ಕುಮಾರ್, ವಕ್ತಾರ ಬಿ.ಕೆ.ಅರುಣ್ ಕುಮಾರ್ ಹಾಗೂ ಮಾಧ್ಯಮ ವಕ್ತಾರ ಶಜಿಲ್ ಕೃಷ್ಣನ್ ಉಪಸ್ಥಿತರಿದ್ದರು.









