ಮಡಿಕೇರಿ ಫೆ.7 NEWS DESK : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕಳೆದ ಆರು ದಿನಗಳಿಂದ ನಡೆದ ‘ಕೊಡವಾಮೆ ಬಾಳೋ’ ಬೃಹತ್ ಪಾದಯಾತ್ರೆ ಮಡಿಕೇರಿಯಲ್ಲಿ ಸಮಾರೋಪಗೊಂಡಿತು. ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಕೊಡವರು ಪಾದಯಾತ್ರೆಯ ಮೂಲಕ ತಮ್ಮ ಹಕ್ಕೊತ್ತಾಯಗಳನ್ನು ಮಂಡಿಸಿದರು. ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಬಳಿ ಇರುವ ಕೊಡವ ಮಂದ್ನಲ್ಲಿ ಜಿಲ್ಲಾಧಿಕಾರಿ ವೆಂಕಟರಾಜ್ ಅವರಿಗೆ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಅವರು ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅವರ ನೇತೃತ್ವದಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು.
:: ಬೇಡಿಕೆಗಳು ::
ಸೂಕ್ಷ್ಮಾತಿ ಸೂಕ್ಷ್ಮ ಅಲ್ಪಸಂಖ್ಯಾತ ಕೊಡವ ಜನಾಂಗದ ಸಂವಿಧಾನಬದ್ಧ ಬೇಡಿಕೆಗಳಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು. ಕೊಡವ ಜನಾಂಗದ ಪರಂಪರೆ, ಧಾರ್ಮಿಕ ಆಚರಣೆಗಳು, ಸಾಮಾಜಿಕ ಭದ್ರತೆಗೆ ಪೂರಕವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು. ಕೊಡವರು ಹಾಗೂ ಜಮ್ಮಾ ಹಿಡುವಳಿದಾರರ ಕೋವಿ ವಿನಾಯಿತಿಯ ವಿಶೇಷ ಹಕ್ಕನ್ನು ಅಭಾದಿತವಾಗಿ ಮುಂದುವರಿಸಬೇಕು.
ಕೊಡವ ಸಮುದಾಯದ ಮೇಲೆ ಪ್ರಬಲ ಜನಾಂಗಗಳು ರಾಜಕೀಯ ಪ್ರಭಾವ ಬಳಸಿ ನಡೆಸುತ್ತಿರುವ ದಬ್ಬಾಳಿಕೆಗೆ ಕಡಿವಾಣ ಹಾಕಬೇಕು. ಕೊಡವ ಸಂಸ್ಕೃತಿ, ಸಂಪ್ರದಾಯ, ಉಡುಗೆ ತೊಡುಗೆ, ಆಭರಣಗಳು, ಆಚರಣೆಗಳ ವಿಡಂಬನಾತ್ಮಕ ಬಳಕೆ ಮತ್ತು ಕೊಡವರ ಭಾವನೆಗಳಿಗೆ ದಕ್ಕೆ ತರುವ ಪ್ರಚೋದನಾತ್ಮಕ ಕೃತ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
ಕೊಡವರು ಎಂಬ ಕಾರಣಕ್ಕೆ ಈ ದೇಶದ ಅಪ್ರತಿಮ ಸೇನಾನಿಗಳಾದ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ಅವರುಗಳಿಗೆ ಅಗೌರವ ತೋರಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ತನಿಖೆ ನಡೆಸಿ, ಕಿಡಿಗೇಡಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಗಡಿಪಾರು ಮಾಡಬೇಕು.
ತಲಕಾವೇರಿಯಲ್ಲಿ ಕೊಡವರ ಭಾಗವಹಿಸುವಿಕೆಯ ಸ್ವಾತಂತ್ರ್ಯಕ್ಕೆ ನಿರಂತರ ತೊಂದರೆ ಮಾಡುವ ಪ್ರಕ್ರಿಯೆಗಳಿಗೆ ಕಡಿವಾಣ ಹಾಕಬೇಕು. ಗೊಂದಲ ಸೃಷ್ಟಿಸುವ ಪಟ್ಟಭದ್ರಹಿತಾಸಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೊಡವರಿಗೆ, ಕೊಡವ ಸಂಸ್ಕೃತಿಗೆ ಕೊಡಗಿನ ಯಾವುದೇ ಧಾರ್ಮಿಕ ಕ್ಷೇತ್ರಗಳಲ್ಲಿ ಅವಮಾನವಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕೊಡವರು, ಕೊಡವ ಸಂಸ್ಕೃತಿ ಮತ್ತು ಕೊಡವ ಪಾರಂಪರಿಕ ಆಚರಣೆಗಳಿಗೆ ಈ ನೆಲದಲ್ಲಿ ಮುಕ್ತ ವಾತವರಣ ಕಲ್ಪಿಸಬೇಕು.
ಕಟ್ಟೆಮಾಡುವಿನ ಮಹಾದೇವರ ದೇವಸ್ಥಾನವನ್ನು ಮೃತ್ಯುಂಜಯ ದೇವಸ್ಥಾನವೆಂದು ಸುಳ್ಳುನಾಮಕರಣ ಮಾಡುವ ಮೂಲಕ ದೇವಸ್ಥಾನದ ಪಾವಿತ್ರ್ಯತೆಯನ್ನು ನಾಶಮಾಡಲಾಗಿದೆ. ಉದ್ದೇಶಪೂರ್ವಕವಾಗಿ ಜನಾಂಗಗಳ ನಡುವೆ ವಿಷಬೀಜವನ್ನು ಬಿತ್ತಿ, ಸಮಾಜದಲ್ಲಿ ಅಶಾಂತಿ ಸೃಷ್ಟಿಸಲಾಗಿದೆ ಎಂದು ಮನವಿ ಪತ್ರದಲ್ಲಿ ಆರೋಪಿಸಲಾಗಿದ್ದು, ದೇವಸ್ಥಾನದ ಅರ್ಚಕರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
ಕಟ್ಟೆಮಾಡು ವಾರ್ಷಿಕ ಉತ್ಸವದ ಸಂದರ್ಭ, ಕೊಡವರ ಸಾಂಸ್ಕೃತಿಕ ಉಡುಗೆಯನ್ನು ನಿರ್ಬಂಧಿಸಲು ಪ್ರಯತ್ನಿಸಿ, ಕೊಡವರ ಮೇಲೆ ಹಲ್ಲೆ ನಡೆಸಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳದ ಹೊರತು ಕೊಡವ ಸಮುದಾಯ ಯಾವುದೇ ಸಂಧಾನ ಸಭೆ ಅಥವಾ ಯಾವುದೇ ಶಾಂತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಜಿಲ್ಲಾಡಳಿತಕ್ಕೆ ನೀಡಿದ ಮನವಿ ಪತ್ರದಲ್ಲಿ ಸ್ಪಷ್ಟಪಡಿಸಲಾಗಿದೆ.















