
ನಾಪೋಕ್ಲು ಫೆ.15 NEWS DESK : ವಿದ್ಯಾರ್ಥಿಗಳೇ ಸಮಾಜದ ಉತ್ತಮ ಆಸ್ತಿ ಎಂದು ಹಾಕತ್ತೂರು ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ವನಜ ಹೇಳಿದರು. ಹಾಕತ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮಡಿಕೇರಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಟ್ರಸ್ಟ್ ಕೊಡಗು, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಟ್ಟಗೇರಿ ವಲಯ, ಜಿಲ್ಲಾ ಪಂಚಾಯತ್ ಕೊಡಗು, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ಕಾರಿ ಪ್ರೌಢಶಾಲೆ ಹಾಕತ್ತೂರು, ರಾಷ್ಟ್ರೀಯ ಸೇವಾ ಯೋಜನೆಗಳ ಸಂಯುಕ್ತ ಆಶ್ರಯದಲ್ಲಿ ಸ್ವಸ್ಥ ಮತ್ತು ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಎಂಬ ವಿಷಯದ ಕುರಿತು ದುಶ್ಚಟ ದುರಭ್ಯಾಸದಿಂದ ಆಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಹಾಗೂ ಅರಿವು ಮೂಡಿಸುವ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಅಧ್ಯಕ್ಷತ ವಹಿಸಿ ಮಾತನಾಡಿದ ಅವರು, ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳ ಮನಸ್ಸು ತುಂಬಾ ಚಂಚಲ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಮನಸ್ಸನ್ನು ಸ್ವ ನಿಗ್ರಹದೊಂದಿಗೆ ಹತೋಟಿಗೆ ತಂದುಕೊಳ್ಳುವುದು ಅನಿವಾರ್ಯತೆ ಇದೆ ಎಂದ ಅವರು, ನಮ್ಮ ಶಾಲೆಯಲ್ಲಿ ಇಂತಹ ಅರ್ಥಪೂರ್ಣ ಕಾರ್ಯಕ್ರಮವನ್ನು ನಡೆಸಲು ಅನುಮತಿಸಿದ ಸಂಸ್ಥೆಯನ್ನು ಅಭಿನಂದಿಸಿ, ನಮ್ಮ ಶಾಲೆಯ ಆವರಣ ಅಭಿವೃದ್ಧಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡಿದ ಒಂದು ಲಕ್ಷ ರೂ.ಮೊತ್ತದ ಅನುದಾನದ ಸೇವೆಯನ್ನು ನೆನಪಿಸಿಕೊಂಡರು. ಬೆಳ್ತಂಗಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಶಿಬಿರಾಧಿಕಾರಿ ಪಿ.ಪಿ.ನಂದಕುಮಾರ್ ಮಾತನಾಡಿ, ಇದುವರೆಗೆ ಕರ್ನಾಟಕ ರಾಜ್ಯದ 19,448 ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮತ್ತು ಮಾಹಿತಿ ಕಾರ್ಯಕ್ರಮವನ್ನು ನಡೆಸಿ 21 ಲಕ್ಷಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಂಡಿರುತ್ತಾರೆ. ಮತ್ತು ಜನಜಾಗೃತಿ ವೇದಿಕೆಯ ಮುಖೇನ ಸಮುದಾಯದ ಸಹಭಾಗಿತ್ವದೊಂದಿಗೆ ಇದುವರೆಗೆ 1906 ಮದ್ಯವರ್ಜನ ಶಿಬಿರಗಳನ್ನು ನಡೆಸಿ 1 ಲಕ್ಷದ 50 ಸಾವಿರ ಮದ್ಯವ್ಯಸನಿಗಳನ್ನು ವ್ಯಸನಮುಕ್ತಗೊಳಿಸಲಾಗಿದೆ ಎಂದರು. ಮಾದಕ ವ್ಯಸನವೆಂಬುದೊಂದು ರೋಗ. ವಿಶ್ವ ಆರೋಗ್ಯ ಸಂಸ್ಥೆಯ ಕಳೆದ ಸಂಶೋಧನೆಯ ಪ್ರಕಾರ ನಮ್ಮ ಭಾರತ ದೇಶದಲ್ಲಿ ಒಂದು ವರ್ಷಕ್ಕೆ 5 ಲಕ್ಷ ಜನರು ಮದ್ಯಪಾನದಿಂದ ಮರಣ ಹೊಂದಿದರೆ 14.5 ಲಕ್ಷ ಜನರು ಮಾದಕ ದ್ರವ್ಯ, ಮಾದಕ ವ್ಯಸನ ಅಥವಾ ಇನ್ನಿತರ ಚಟಗಳಿಂದ ಬಲಿಯಾಗುತ್ತಿರುವುದು ಶೋಚನೀಯವಾಗಿದೆ. ಪ್ರಪಂಚದ ಐದು ಭೀಕರವಾದ ಖಾಯಿಲೆಗಳಲ್ಲಿ ಮಾದಕ ವ್ಯಸನವೂ ಒಂದು. ವಿದ್ಯಾರ್ಥಿಗಳ ಹದಿಹರೆಯದ ವಯಸ್ಸು. ವಿದ್ಯಾರ್ಥಿ ಜೀವನ ಹಸಿ ಮಣ್ಣಿನ ಮಡಿಕೆ ಇದ್ದ ಹಾಗೆ. ಹೆಚ್ಚು ಸಡಿಲ ಮಾಡಿದರೂ ಹೆಚ್ಚು ಬಿಗಿ ಮಾಡಿದರೂ ಒಡೆಯುವುದು ಮಡಿಕೆಯೆ. ಹದಿಹರೆಯದಲ್ಲಿನ ಒತ್ತಡಗಳು, ತಂದೆ – ತಾಯಂದಿರ ಒತ್ತಡ, ಸ್ನೇಹಿತರ ಒತ್ತಡ, ಜೀವನ ಶೈಲಿ, ಮಾಧ್ಯಮ, ಆರ್ಥಿಕ ಸ್ವಾತಂತ್ರ್ಯ, ಪ್ರೀತಿಯ ಕೊರತೆ, ಅನಾರೋಗ್ಯ, ಪಾಶ್ಚಾತ್ಯ ಸಂಸ್ಕೃತಿ, ಸಾಹಸ ಪ್ರವೃತ್ತಿ, ನಕಾರಾತ್ಮಕ ಚಿಂತನೆಗಳು, ಈ ಎಲ್ಲಾ ಕಾರಣಗಳಿಂದಾಗಿ ಅಮಲು ಪದಾರ್ಥ ಹಾಗೂ ಇನ್ನಿತರ ವ್ಯಸನಗಳಿಗೆ ಬಲಿಯಾಗುವ ಸಾಧ್ಯತೆಗಳಿವೆ ಎಂದು ಹೇಳಿದರು. ಸಪ್ತ ವ್ಯಸನಗಳಲ್ಲಿ ಮಾದಕ ವ್ಯಸನ ಮೊದಲ ಮೆಟ್ಟಿಲು ಈ ಮೆಟ್ಟಿಲನ್ನು ಜಾರಿದರೆ ಉಳಿದೆಲ್ಲಾ ಮೆಟ್ಟಿಲುಗಳು ತನ್ನಿಷ್ಟಕ್ಕೆ ಜಾರುತ್ತವೆ. ಅತಿಯಾದ ಮೊಬೈಲ್ ಬಳಕೆ ಮತ್ತು ಸಾಮಾಜಿಕ ಜಾಲತಾಣ ದಿಂದಲೂ ವಿದ್ಯಾರ್ಥಿಗಳ ಮನೋಸ್ಥಿತಿ ಹಾಳಾಗುತ್ತದೆ. ವಿದ್ಯಾರ್ಥಿಗಳು ಇದರ ಬಗ್ಗೆಯೂ ಗಮನ ಹರಿಸಬೇಕು.ಆರೋಗ್ಯಪೂರ್ಣ ಸಮಾಜ ಅಥವಾ ದುಶ್ಚಟಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಮೀನಾ, ಜಯಂತಿ, ಒಕ್ಕೂಟದ ಅಧ್ಯಕ್ಷರಾದ ಪಾರ್ವತಿ, ಒಕ್ಕೂಟದ ಕಾರ್ಯದರ್ಶಿ ಹರಿಣಿ ಹಾಜರಿದ್ದರು. ಕವಿತಾ ಸ್ವಾಗತಿಸಿದರು. ಮೇಲ್ವಿಚಾರಕರಾದ ಬಿ.ಹೆಚ್.ವಿದ್ಯಾ ಮತ್ತು ಸೇವಾ ಪ್ರತಿನಿಧಿ ಕವಿತಾ ನಿರ್ವಹಿಸಿದರು. ಹರಿಣಿ ವಂದಿಸಿದರು.
ವರದಿ : ದುಗ್ಗಳ ಸದಾನಂದ.









