ಮಡಿಕೇರಿ ಫೆ.18 NEWS DESK : ‘ಕೊಡಗು ವಿಶ್ವ ವಿದ್ಯಾಲಯ’ ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲೆಯ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವ ವಿವಿಯನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಅಖಿಲ ಭಾರತ ವಿದ್ಯಾರ್ಥಿ ಪರಿಷತ್ನ ನೇತೃತ್ವದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಮಹಿಳಾ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಸರ್ಕಾರದ ನಿರ್ಧಾರವನ್ನು ಖಂಡಿಸಿದರು. ‘ವಿದ್ಯಾರ್ಥಿಗಳ ಸ್ಥಿತಿ ಅಯೋಮಯ, ಮೈಮರೆತರೆ ವಿವಿಗಳೆ ಮಾಯ’, ‘ನಿಲ್ಲಿಸಿ ಶಿಕ್ಷಣದ ವ್ಯಾಪಾರೀಕರಣ’ ಮೊದಲಾದ ಭಿತ್ತಿ ಫಲಕಗಳನ್ನು ಪ್ರದರ್ಶಿಸಿದ ವಿದ್ಯಾರ್ಥಿಗಳು, ‘ವಿ ವಾಂಟ್ ಜಸ್ಟಿಸ್’ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಿದರು. ನಂತರ ಮೆರವಣಿಗೆಯಲ್ಲಿ ಜಿಲ್ಲಾಡಳಿತದ ಭವನಕ್ಕೆ ತೆರಳಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಎಬಿವಿಪಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ್ ಮಾತನಾಡಿ, ಕೊಡಗು ವಿಶ್ವ ವಿದ್ಯಾಲಯ ನಮ್ಮ ಸ್ವಾಭಿಮಾನದ ಪ್ರಶ್ನೆಯಾಗಿದೆ. ಸರ್ಕಾರ ಕೊಡಗು ವಿವಿಯನ್ನು ಮುಚ್ಚುವ ನಿರ್ಧಾರದಿಂದ ಹಿಂದಕ್ಕೆ ಸರಿಯದಿದ್ದಲ್ಲಿ ‘ವಿಧಾನ ಸೌಧ’ ಮತ್ತು ಬೆಂಗಳೂರಿನ ಶಿಕ್ಷಣ ಇಲಾಖಾ ಕಛೇರಿಯ ಎದುರು ವಿದ್ಯಾರ್ಥಿ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಕರ್ನಾಟಕ ರಾಜ್ಯ ಸರ್ಕಾರ ಪ್ರಸ್ತುತ ವಿವಿಧ ಯೋಜನೆಗಳಿಗೆ 50 ಸಾವಿರ ಕೋಟಿ ರೂ.ಗಳನ್ನು ವಿನಿಯೋಗಿಸುತ್ತಿದೆ. ಅದೇ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವ ವಿಶ್ವ ವಿದ್ಯಾನಿಲಯಗಳಿಗೆ ಒದಗಿಸಲು ಅಗತ್ಯ ಹಣವಿಲ್ಲ ಎನ್ನುವುದು ಶೋಚನೀಯ ಮಾತ್ರವಲ್ಲ, ಹಾಸ್ಯಾಸ್ಪದವೆಂದು ಟೀಕಿಸಿದರು. ಕೊಡಗು ವಿಶ್ವ ವಿದ್ಯಾನಿಲಯದಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಿದೆ. ವಿವಿಗೆ ಕೇವಲ ಮೂರು ವರ್ಷ ಪೂರೈಸುವಷ್ಟರಲ್ಲೆ ಅದನ್ನು ಮುಚ್ಚಲು ಮುಂದಾಗಿರುವುದು ರಾಜ್ಯ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿಯಾಗಿದೆ ಎಂದು ಆರೋಪಿಸಿದರು.
ಜಿಲ್ಲಾಡಳಿತಕ್ಕೆ ಸಲ್ಲಿಸಿದ ಮನವಿಯಲ್ಲಿ, ಕೊಡಗು ಸೇರಿದಂತೆ ಇತರೆ ಹಿಂದುಳಿದ ಜಿಲ್ಲೆಗಳಲ್ಲಿ ಆರಂಭಿಸಿರುವ ವಿವಿಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಲಾಗಿದೆ. ರಾಜ್ಯ ಸರ್ಕಾರ ತನ್ನ ಗ್ಯಾರಂಟಿಗಳಿಗೆ ವಾರ್ಷಿಕ ವ್ಯಯಿಸುವ ಕೋಟ್ಯಂತರ ಹಣದಲ್ಲಿ ಶೇ.1ರಷ್ಟು ಅಂದರೆ 500 ಕೋಟಿಯನ್ನು ವಿವಿಗಳಿಗೆ ನೀಡಿದಲ್ಲಿ ವಿಶ್ವ ವಿದ್ಯಾನಿಲಯಗಳ ಸ್ಥಿತಿ ಸುಧಾರಿಸುತ್ತದೆ ಎಂದು ತಿಳಿಸಲಾಗಿದೆ. ಕಳೆದ ಒಂದೂವರೆ ದಶಕಗಳಿಂದ ರಾಜ್ಯ ಸರ್ಕಾರ ವಿಶ್ವ ವಿದ್ಯಾಲಯಗಳಿಗೆ ಯಾವುದೇ ಅನುದಾನವನ್ನು ನೀಡಿಲ್ಲ. ಎಲ್ಲಾ ವಿಶ್ವ ವಿದ್ಯಾಲಯಗಳು ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಮೊದಲಾದ ಆರ್ಥಿಕ ಮೂಲಗಳಿಂದಷ್ಟೆ ನಡೆಯುತ್ತಿರುವುದು ಅವಮಾನದ ಸಂಗತಿ. ಕೇವಲ ಹಣಕಾಸಿನ ದೃಷ್ಟಿಯಿಂದ ವಿವಿಗಳನ್ನು ಮುಚ್ಚಲು ಹೊರಟಿರುವುದು ಸರ್ಕಾರಕ್ಕೆ ಶೋಭೆ ತರುವ ಕಾರ್ಯವಲ್ಲವೆಂದು ತಿಳಿಸಲಾಗಿದೆ. ವಿಶ್ವವಿದ್ಯಾನಿಲಯಗಳನ್ನು ಸದೃಢಗೊಳಿಸುವ ಕಾಳಜಿ ಮತ್ತು ಇಚ್ಛಾ ಶಕ್ತಿಯನ್ನು ರಾಜ್ಯ ಸರ್ಕಾರ ತೋರಬೇಕು. ವಿಶ್ವ ವಿದ್ಯಾನಿಲಯಗಳನ್ನು ಮುಚ್ಚುವ ತನ್ನ ನಿರ್ಧಾರವನ್ನು ಹಿಂಪಡೆಯಬೇಕೆಂದು ಒತ್ತಾಯಿಸಲಾಗಿದೆ. ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಕಾರ್ಯಸಮಿತಿ ಸದಸ್ಯ ಅಜಯ್, ಮಡಿಕೇರಿ ನಗರದ ಪ್ರಮೋದ್ ಪಲ್ಲೇದ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.











