
ಮಡಿಕೇರಿ ಫೆ.21 NEWS DESK : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಒಂದಲ್ಲ ಒಂದು ರೀತಿಯಲ್ಲಿ ಕೊಡಗಿನ ಸೌಲಭ್ಯಗಳನ್ನು ಕಸಿದುಕೊಳ್ಳುವ ಮೂಲಕ ಪುಟ್ಟ ಜಿಲ್ಲೆಯ ಮೇಲೆ ಗದಾಪ್ರಹಾರ ಮಾಡುತ್ತಿದೆ ಎಂದು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ವಿಶ್ವ ವಿದ್ಯಾಲಯವನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರ ಖಂಡನೀಯ. ಕೊಡಗು ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಕಾಪಾಡುವ ದೃಷ್ಟಿಯಿಂದ ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ವಿವಿಯನ್ನು ಸ್ಥಾಪಿಸಿತು. ಇದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಶಿಕ್ಷಣದ ಗುರಿ ಸಾಧನೆಗೆ ಹೆಚ್ಚು ಉಪಯುಕ್ತವಾಗಿತ್ತು. ಅಲ್ಲದೆ ಜಿಲ್ಲೆಯ ಅಭಿವೃದ್ಧಿಗೂ ಪೂರಕವಾಗಿತ್ತು. ಆದರೆ ಇಂದಿನ ಕಾಂಗ್ರೆಸ್ ಸರ್ಕಾರ ವಿವಿಯನ್ನು ಕಸಿದುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಾಗ್ಯಗಳನ್ನು ಅನುಷ್ಠಾನಗೊಳಿಸುವ ಭರದಲ್ಲಿ ಕಾಲಹರಣ ಮಾಡುತ್ತಿದೆ. ಐದು ಗ್ಯಾರಂಟಿಗಳನ್ನು ಪೂರೈಸುವುದಕ್ಕಷ್ಟೇ ತನ್ನ ಅಧಿಕಾರವನ್ನು ಬಳಸಿಕೊಳ್ಳುತ್ತಿರುವ ಸರ್ಕಾರ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಅನುದಾನ ನೀಡುತ್ತಿಲ್ಲ. ಇದೀಗ ಖರ್ಚು ವೆಚ್ಚವನ್ನು ಕುಗ್ಗಿಸಿ ಭಾಗ್ಯಗಳಿಗೆ ಹಣವನ್ನು ವಿನಿಯೋಗಿಸಲು ಶಿಕ್ಷಣ ಮಂದಿರಕ್ಕೆ ಕೈಹಾಕಿದೆ ಎಂದು ಆರೋಪಿಸಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಮಾರಕವಾಗಬಲ್ಲ ಭಾಗ್ಯಗಳನ್ನು ಸ್ಥಗಿತಗೊಳಿಸಿ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸ್ಥಾಪನೆಯಾಗಿರುವ ವಿವಿಗಳಿಗೆ ಅಗತ್ಯ ಅನುದಾನ ನೀಡಲು ಸರ್ಕಾರ ಮುಂದಾಗಬೇಕು. ಕೊಡಗು ವಿವಿಯನ್ನು ಮುಚ್ಚಿದರೆ ವಿದ್ಯಾರ್ಥಿಗಳ ಹೋರಾಟಕ್ಕೆ ಬಿಜೆಪಿ ಕೂಡ ಬೆಂಬಲ ನೀಡಲಿದೆ ಮತ್ತು ಬೀದಿಗಳಿಯಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಬೆಟ್ಟಗುಡ್ಡಗಳಿಂದ ಕೂಡಿರುವ, ಕಡಿಮೆ ಜನಸಂಖ್ಯೆ ಹೊಂದಿರುವ ಅತ್ಯಂತ ವಿಶಿಷ್ಟ ಮತ್ತು ಸೂಕ್ಷ್ಮ ಜಿಲ್ಲೆ ಕೊಡಗಿನಲ್ಲಿ ಕಾಂಗ್ರೆಸ್ ಸರ್ಕಾರ ನಿರಂತರವಾಗಿ ಗೊಂದಲ ಸೃಷ್ಟಿಸುತ್ತಲೇ ಬಂದಿದೆ. ಪರಂಪರೆಯಂತೆ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿರುವ ದೇವಾಲಯಗಳಲ್ಲಿ ವನ್ಯಜೀವಿಗಳ ವಸ್ತುಗಳ ಬಳಕೆಯ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ಮಾಡಿತು. ಕಾಫಿ ಬೆಳೆಗಾರರು ತೋಟಗಳಲ್ಲಿ ಬೆಳೆದ ಮರಗಳ ಮೇಲೆ ಅರಣ್ಯ ಇಲಾಖೆ ಹಿಡಿತ ಸಾಧಿಸಲು ಮುಂದಾಯಿತು. ಕೊಡಗಿನ ಸಂಪ್ರದಾಯದಂತೆ ಮದುವೆ ಸಮಾರಂಭಗಳಲ್ಲಿ ಮದ್ಯ ಬಳಸುವ ಹಕ್ಕಿಗೂ ಅಡಚಣೆ ಪಡಿಸಲು ಸರ್ಕಾರ ಮುಂದಾಗಿದೆ. ವನ್ಯಜೀವಿಗಳ ನಿರಂತರ ದಾಳಿಯಿಂದ ಜಿಲ್ಲೆಯ ಜನ ಬದುಕುವ ಹಕ್ಕನ್ನೇ ಕಳೆದುಕೊಳ್ಳುವ ಭೀತಿಯಲ್ಲಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದೀಗ ಕೊಡಗು ಜಿಲ್ಲೆಗೆ ವರದಾನವಾಗಿರುವ ಕೊಡಗು ವಿಶ್ವ ವಿದ್ಯಾಲಯವನ್ನು ಮುಚ್ಚಲು ಮುಂದಾಗಿದೆ ಎಂದು ತೇಲಪಂಡ ಶಿವಕುಮಾರ್ ನಾಣಯ್ಯ ಆರೋಪಿಸಿದ್ದಾರೆ. ಕೊಡಗಿನ ಜನರ ಹಕ್ಕುಗಳ ಮೇಲೆ ಸರ್ಕಾರ ನಿರಂತರ ಹಿಡಿತ ಸಾಧಿಸಲು ಹವಣಿಸುತ್ತಿದ್ದರೂ ಜಿಲ್ಲೆಯ ಇಬ್ಬರು ಶಾಸಕರು ಮೌನವಾಗಿರುವುದು ಯಾಕೆ ಎಂದು ಅವರು ಪ್ರಶ್ನಿಸಿದ್ದಾರೆ. ವಿವಿಯನ್ನು ಮುಚ್ಚಲು ಬಿಡುವುದಿಲ್ಲವೆಂದು ಶಾಸಕರುಗಳು ಕೇವಲ ಹೇಳಿಕೆಗಳನ್ನು ನೀಡಿದರೆ ಸಾಲದು, ಭರವಸೆಗೆ ಬದ್ಧರಾಗಿರಬೇಕು ಮತ್ತು ಸರ್ಕಾರದ ಮೇಲೆ ಒತ್ತಡ ಹೇರಿ ಜಿಲ್ಲೆಯಲ್ಲೇ ಉಳಿಸಿಕೊಳ್ಳಬೇಕು. ಇನ್ನು ಮುಂದೆ ಪುಟ್ಟ ಜಿಲ್ಲೆ ಕೊಡಗಿನ ಮೇಲೆ ಯಾವುದೇ ರೀತಿಯಲ್ಲಿ ಸರ್ಕಾರದಿಂದ ಗದಾಪ್ರಹಾರವಾಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಭಾಗ್ಯಗಳಿಗೆ ಹಣ ಹೊಂದಿಸಲು ಪರದಾಡುತ್ತಿರುವ ಸರ್ಕಾರ ಜನರ ಮೇಲೆ ತೆರಿಗೆ ಹೊರೆಯನ್ನು ಹಾಕುತ್ತಿದೆ. ಪ್ರತಿಯೊಂದಕ್ಕೂ ತೆರಿಗೆ ಏರಿಕೆ ಮಾಡುತ್ತಿರುವುದರಿಂದ ಅಗತ್ಯ ವಸ್ತುಗಳ ಬೆಲೆ ದುಬಾರಿಯಾಗಿ ಜನಸಾಮಾನ್ಯರು ಸಂಕಷ್ಟ ಎದುರಿಸುತ್ತಿದ್ದಾರೆ. ಕಳೆದ 3 ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಬಂದಿಲ್ಲ. ಇದರಿಂದ ಪೂರ್ವಯೋಜಿತ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗದೆ ಮಹಿಳೆಯರು ಇಕ್ಕಟ್ಟಿಗೆ ಸಿಲುಕಿದ್ದಾರೆ. ಸರ್ಕಾರದ ಹಣವನ್ನೇ ನಂಬಿಕೊಂಡಿದ್ದವರು ಇಂದು ಸಾಲ ಮಾಡಬೇಕಾದ ಪರಿಸ್ಥಿತಿ ಉದ್ಭವಿಸಿದೆ ಎಂದು ತೇಲಪಂಡ ಶಿವಕುಮಾರ್ ನಾಣಯ್ಯ ಆರೋಪಿಸಿದ್ದಾರೆ.









