


ಮಡಿಕೇರಿ ಮಾ.15 NEWS DESK : ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ‘25ನೇ ವರ್ಷದ ಮುದ್ದಂಡ ಕಪ್ ಹಾಕಿ ಉತ್ಸವ’ಕ್ಕೆ ಮಡಿಕೇರಿ ನಗರದಲ್ಲಿ ಅಂತಿಮ ಹಂತದ ಸಿದ್ಧತೆ ನಡೆದಿದೆ. ಪಂದ್ಯಾವಳಿಯು ಮಾ.28 ರಿಂದ ಏ.27ರ ವರೆಗೆ ಮೂರು ಮೈದಾನದಲ್ಲಿ ನಡೆಯಲಿದ್ದು, ಈಗಾಗಲೇ ದಾಖಲೆಯ 370 ತಂಡಗಳು ನೋಂದಣಿ ಮಾಡಿಕೊಂಡಿವೆ. ಒಂದು ತಿಂಗಳ ಹಾಕಿ ಪಂದ್ಯಾವಳಿ ಹಾಗೂ ಈ ಅವಧಿಯಲ್ಲಿ ನಡೆಯುವ ವಿಭಿನ್ನ ಕಾರ್ಯಕ್ರಮಗಳ ಕುರಿತು ಕೊಡವ ಹಾಕಿ ಅಕಾಡೆಮಿ ಹಾಗೂ ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿಯ ಪ್ರಮುಖರು ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ ಅವರು ಮಾತನಾಡಿ ಕಳೆದ ಬಾರಿಯ ಕುಂಡ್ಯೋಳಂಡ ಹಾಕಿ ಹಬ್ಬದಲ್ಲಿ 360 ತಂಡಗಳು ಪಾಲ್ಗೊಂಡಿದ್ದವು, ಈ ಬಾರಿಯ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ 10 ತಂಡಗಳು ಹೆಚ್ಚುವರಿಯಾಗಿದ್ದು, 370 ತಂಡಗಳು ಹೆಸರು ನೋಂದಾಯಿಸಿಕೊಂಡಿವೆ. ನೋಂದಣಿಯ ಕೊನೆಯ ದಿನಾಂಕ ಮಾ.18 ಆಗಿದ್ದು, ಮತ್ತಷ್ಟು ತಂಡಗಳು ಸೇರ್ಪಡೆಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು. ಮಾ.28ರಂದು ಉದ್ಘಾಟನೆಯ ಪ್ರದರ್ಶನ ಪಂದ್ಯವಾಗಿ ಕೊಡವ ಹಾಕಿ ಅಕಾಡೆಮಿ- XI ಹಾಗೂ ಇತ್ತೀಚೆಗೆ ರಾಷ್ಟ್ರೀಯ ಮಟ್ಟದಲ್ಲಿ ವಿಜೇತರಾದ ಕರ್ನಾಟಕ-XI ತಂಡಗಳ ನಡುವೆ ಸೆಣಸಾಟ ನಡೆಯಲಿದೆ ಎಂದರು. ಪಂದ್ಯಾವಳಿಯ ನಿರ್ದೇಶಕರಾಗಿ ಬಡ್ಕಡ ದೀನ ಪೂವಯ್ಯ ಹಾಗೂ ಸಂಯೋಜಕರಾಗಿ ಮುದ್ದಂಡ ರಾಯ್ ತಮ್ಮಯ್ಯ ಕಾರ್ಯನಿರ್ವಹಿಸಲಿದ್ದಾರೆ. ಪಂದ್ಯಾವಳಿಯಲ್ಲಿ ಮುಖ್ಯ ವೀಕ್ಷಕ ವಿವರಣೆಗಾರರಾಗಿ ಚೆಪ್ಪುಡಿರ ಕಾರ್ಯಪ್ಪ, ಇವರಿಗೆ ಸಹಾಯಕರಾಗಿ ಮಾಳೇಟಿರ ಶ್ರೀನಿವಾಸ್ ಇರಲಿದ್ದಾರೆ. ಟೈಸ್ ಪ್ರಕ್ರಿಯೆಯನ್ನು ಕೆಚ್ಚೆಟ್ಟಿರ ಪ್ರಸನ್ನ ನಿರ್ವಹಿಸಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಕಳೆದ ಹಾಕಿ ಉತ್ಸವದಲ್ಲಿ ಗಿನ್ನಿಸ್ ದಾಖಲೆ ನಿರ್ಮಿಸಿದ ಕುಂಡ್ಯೋಳಂಡ ಒಕ್ಕದವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.
::: ತರಬೇತಿ ಕಾರ್ಯಾಗಾರ ::: ಹಾಕಿ ಅಕಾಡೆಮಿಯ ಕಾರ್ಯಾಧ್ಯಕ್ಷ ಮೇಕೇರಿರ ರವಿ ಪೆಮ್ಮಯ್ಯ ಮಾತನಾಡಿ ಕೊಡವ ಹಾಕಿ ಅಕಾಡೆಮಿ ವತಿಯಿಂದ ಮಾರ್ಚ್ 19 ಮತ್ತು 20 ರಂದು ವಿರಾಜಪೇಟೆಯ ಕಾವೇರಿ ಕಾಲೇಜ್ ನಲ್ಲಿ ಹಾಕಿ ತೀರ್ಪುಗಾರರ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಜಿಲ್ಲೆಯ ಆಸಕ್ತ ಯುವ ಸಮೂಹ ಇದರಲ್ಲಿ ಪಾಲ್ಗೊಂಡು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು. ಮಿನಿ ಒಲಂಪಿಕ್ಸ್ ಮಾದರಿಯಲ್ಲಿ ಈ ಬಾರಿಯ ಮುದ್ದಂಡ ಕಪ್ ಹಾಕಿ ಉತ್ಸವ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಹಾಕಿ ಅಕಾಡೆಮಿಯ ಉಪಾಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಮಾತನಾಡಿ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ರಾಜ್ಯಸಭಾ ಸದಸ್ಯ ಅಜೆಯ್ ಮಾಕನ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮತ್ತಿತರ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದರು. ಮುದ್ದಂಡ ಹಾಕಿ ಹಬ್ಬದ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ಮಾತನಾಡಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಎರಡು ಮೈದಾನ ಹಾಗೂ ಪೊಲೀಸ್ ಕವಾಯತು ಮೈದಾನದಲ್ಲಿ ಪಂದ್ಯಾವಳಿಗಳನ್ನು ಆಯೋಜಿಸಲಾಗಿದ್ದು, ಗ್ಯಾಲರಿ ನಿರ್ಮಾಣದ ಕಾರ್ಯ ಆರಂಭಗೊಂಡಿದೆ. ಹಾಕಿ ಉತ್ಸವದ ಬೆಳ್ಳಿಹಬ್ಬದ ಸಂಭ್ರಮದ ಹಿನ್ನೆಲೆ ಹಾಕಿ ಪಂದ್ಯಾವಳಿಯೊಂದಿಗೆ ವಿಭಿನ್ನ ಕಾರ್ಯಕ್ರಮಗಳು ಕೂಡ ನಡೆಯಲಿದೆ ಎಂದರು.
::: ಕ್ರೀಡಾಜ್ಯೋತಿಯ ವಿಶೇಷ ::: ಈ ಬಾರಿ ವಿಶೇಷವಾಗಿ ಇದುವರೆಗೆ ಹಾಕಿ ಉತ್ಸವ ಆಯೋಜಿಸಿದ್ದ ಎಲ್ಲಾ ಕುಟುಂಬಗಳ ಐನ್’ಮನೆಗಳಿಗೆ ಮ್ಯಾರಥಾನ್ ಮೂಲಕ ಕ್ರೀಡಾಜ್ಯೋತಿಯನ್ನು ಕೊಂಡೊಯ್ಯಲಾಗುವುದು. ಮಾ.25ರಂದು ಬೆಳಗ್ಗೆ 8 ಗಂಟೆಗೆ ಕೊಡವ ಹಾಕಿ ಉತ್ಸವದ ಜನಕರಾದ ಕರಡ ಗ್ರಾಮದ ಪಾಂಡಂಡ ಕುಟುಂಬದ ಐನ್’ಮನೆಯಲ್ಲಿ ಆರಂಭಗೊಳ್ಳಲಿರುವ ಮುದ್ದಂಡ ಹಾಕಿ ಉತ್ಸವದ ಕ್ರೀಡಾಜ್ಯೋತಿಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಲಿದ್ದಾರೆ. ನಂತರ ಪೊನ್ನಂಪೇಟೆಯ 8 ಐನ್ ಮನೆಗಳನ್ನು ಕ್ರಮಿಸಿ, ಮಾ.26 ರಿಂದ 28 ರವರೆಗೆ ವಿವಿಧ ಐನ್ ಮನೆಗಳಿಗೆ ಕ್ರೀಡಾಜ್ಯೋತಿ ಸಾಗಲಿದೆ. ಮಾ.28ರಂದು ಬೆಳಿಗ್ಗೆ 9ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಿಂದ ಮುಖ್ಯ ರಸ್ತೆಯ ಮೂಲಕ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನಕ್ಕೆ ಬೃಹತ್ ಮೆರವಣಿಗೆಯ ಮೂಲಕ ಕ್ರೀಡಾಜ್ಯೋತಿಯನ್ನು ಕೊಂಡೊಯ್ಯಲಾಗುವುದು. ನಾಲ್ಕು ದಿನವೂ ಪ್ರಮುಖ ಮ್ಯಾರಥಾನ್ ಓಟಗಾರರು ಕ್ರೀಡಾಜ್ಯೋತಿಯೊಂದಿಗೆ ಓಡಲಿದ್ದಾರೆ ಎಂದು ರಶಿನ್ ಸುಬ್ಬಯ್ಯ ಮಾಹಿತಿ ನೀಡಿದರು.
::: ಮಹಿಳಾ ಹಾಕಿ ಸಂಭ್ರಮ ::: ಬೆಳ್ಳಿಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಮುದ್ದಂಡ ಹಾಕಿ ಉತ್ಸವದಲ್ಲಿ ಮಹಿಳಾ ತಂಡಗಳ ನಡುವೆ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈಗಾಗಲೇ 30 ತಂಡಗಳು ನೋಂದಾಯಿಸಿಕೊಂಡಿದ್ದು, ನೋಂದಣಿಯ ಕೊನೆಯ ದಿನಾಂಕ ಏ.10 ಆಗಿರುವುದರಿಂದ ಮತ್ತಷ್ಟು ತಂಡಗಳು ಸೇರ್ಪಡೆಗೊಳ್ಳಲಿವೆ. ಮೂರನೇ ಮೈದಾನದಲ್ಲಿ ಮಹಿಳಾ ಹಾಕಿ ಪಂದ್ಯಾವಳಿ ನಡೆಯಲಿದೆ ಎಂದರು.
ಸೆಮಿಫೈನಲ್ ಸಂದರ್ಭ ಭಾರತೀಯ ಮಹಿಳಾ ಹಾಕಿ ತಂಡದ ನಾಯಕಿ ಲಾಲ್ ರಿಮ್ ಸಿಯಾಮಿ ಅವರು ಆಗಮಿಸಿದ ಹಾಕಿ ಕ್ರೀಡೆಯ ಕುರಿತು ಮಾಹಿತಿ ನೀಡಲಿದ್ದಾರೆ. ಭಾರತೀಯ ಪುರುಷರ ಹಾಕಿ ತಂಡದ ನಾಯಕ ಹಾಗೂ ಒಲಂಪಿಯನ್ ಮನ್ ಪ್ರೀತ್ ಸಿಂಗ್ ಕೂಡ ಪಂದ್ಯಾವಳಿಯ ಸಂದರ್ಭ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
::: ತಂದ್- ಬೆಂದ್ ::: ವಿಶೇಷವಾಗಿ ರಸಪ್ರಶ್ನೆ ಸ್ಪರ್ಧೆ ಮತ್ತು ತಂದ್- ಬೆಂದ್ (ವಧು ವರರ ಅನ್ವೇಷಣೆ) ಕಾರ್ಯಕ್ರಮವನ್ನು ಪಂದ್ಯಾವಳಿ ನಡೆಯುವ ಮೈದಾನದ ಆವರಣದಲ್ಲಿ ಆಯೋಜಿಸಲಾಗುತ್ತಿದೆ. ಏ.26 ರಂದು ಸೈಕ್ಲೋಥಾನ್ ನಗರದಲ್ಲಿ ನಡೆಯಲಿದೆ. ಪ್ರೀ ಕ್ವಾರ್ಟರ್ ನಡೆಯುವ ದಿನದಿಂದ ಅಂತಿಮ ಪಂದ್ಯಾವಳಿ ದಿದವರೆಗೂ ಡಿಜೆ ಕಾರ್ಯಕ್ರಮ ಮನರಂಜಿಸಲಿದೆ. ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಮುಕ್ತ “ಮಜಾ ರನ್’ ನಡೆಯಲಿದೆ. ಅಂತಿಮ ದಿನದ ಸಮಾರಂಭದ ಸಂದರ್ಭ ಆಕರ್ಷಕ ಸಿಡಿಮದ್ದುಗಳ ಪ್ರದರ್ಶನವಿರುತ್ತದೆ. ಸುಮಾರು 2 ಸಾವಿರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ವಂದನಾ ಟ್ರಸ್ಟ್ ಸಂಸ್ಥೆ ಪ್ಲಾಸ್ಟಿಕ್ ಸೇರಿದಂತೆ ಇನ್ನಿತರ ತ್ಯಾಜ್ಯಗಳ ನಿರ್ವಹಣೆಯನ್ನು ಮಾಡಲಿದೆ ಎಂದರು. ಮುದ್ದಂಡ ಒಕ್ಕದ ಕಾರ್ಯದರ್ಶಿ ಮುದ್ದಂಡ ರಾಯ್ ತಮ್ಮಯ್ಯ ಮಾತನಾಡಿ ಮುಕ್ತ ಶೂಟಿಂಗ್ ಸ್ಪರ್ಧೆಯ ವಿವರ ನೀಡಿದರು. ಏ.20 ರಂದು ಮೈದಾನ ಎರಡರಲ್ಲಿ ಶೂಟಿಂಗ್ ಸ್ಪರ್ಧೆ ಮೂರು ವಿಭಾಗಗಳಲ್ಲಿ ನಡೆಯಲಿದೆ. 50 ಮೀಟರ್ ನಿಗಧಿತ ಗುರಿಯ .2 ಶೂಟಿಂಗ್ ಸ್ಪರ್ಧೆ, 30 ಮೀಟರ್ ಅಂತರದ ಟುವೆಲ್ತ್ ಬೋರ್ ಬಂದೂಕಿನಿಂದ ಗುರಿ ಹಿಡಿಯುವ ಹಾಗೂ 15 ಮೀಟರ್ ದೂರದ ಮೊಟ್ಟೆಗೆ ಗುಂಡಿಕ್ಕುವ ಏರ್ ರೈಫಲ್ ಶೂಟಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ ಕೂಡ ನಡೆಯಲಿದೆ ಎಂದು ತಿಳಿಸಿದರು. ಇಲ್ಲಿಯವರೆಗೆ ಕೊಡವ ಹಾಕಿ ಉತ್ಸವವನ್ನು ಆಯೋಜಿಸಿದ 24 ಕುಟುಂಬಗಳನ್ನು ಸ್ಮರಿಸುವ ಮತ್ತು ಗೌರವದಿಂದ ಕಾಣುವ ಉದ್ದೇಶದಿಂದ ಈ ಬಾರಿ ಕ್ರೀಡಾಜ್ಯೋತಿಯನ್ನು ಕೊಂಡೊಯ್ಯಲಾಗುತ್ತಿದೆ. ಈ ಕುಟುಂಬಗಳ ಐನ್ ಮನೆಗಳಿಗೆ ತೆರಳಿ ನೆಲ್ಲಕ್ಕಿ ಬೆಳಕಿನಿಂದ ಕ್ರೀಡಾಜ್ಯೋತಿಗೆ ಬೆಳಕು ಪಡೆಯಲಿದ್ದೇವೆ ಎಂದರು. ಮುದ್ದಂಡ ಒಕ್ಕದ ಅಧ್ಯಕ್ಷ ಮುದ್ದಂಡ ಬಿ.ದೇವಯ್ಯ ಮಾತನಾಡಿ ಮಾ.28ರಂದು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಿಂದ ಫೀ.ಮಾ.ಕೆ.ಎಂ.ಕಾರ್ಯಪ್ಪ ಮೈದಾನದವರೆಗೆ ನಡೆಯುವ ಬೃಹತ್ ಮೆರವಣಿಗೆಯಲ್ಲಿ ಸರ್ವರೂ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಜಿಲ್ಲೆ ಮಾತ್ರವಲ್ಲದೆ ಹೊರ ಜಿಲ್ಲೆಗಳ ಎಲ್ಲಾ ಕೊಡವ ಸಮಾಜಗಳು ಹಾಗೂ ಕೊಡವ ಕೇರಿಗಳ ಸಹಕಾರವನ್ನು ಪಡೆಯಲಾಗಿದೆ. ಹಾಕಿ ಉತ್ಸವ ಯಾವುದೇ ಅಡ್ಡಿ ಆತಂಕವಿಲ್ಲದೆ ಯಶಸ್ವಿಯಾಗಿ ನಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.