


ಮಡಿಕೇರಿ ಮಾ.25 NEWS DESK : ಕೊಡವ ಹಾಕಿ ಹಬ್ಬದ ಜನಕರಾದ ಕರಡ ಗ್ರಾಮದ ಪಾಂಡಂಡ ಕುಟುಂಬದ ಐನ್ ಮನೆಯಲ್ಲಿ ‘ಮುದ್ದಂಡ ಕಪ್ ಹಾಕಿ ಉತ್ಸವ’ದ ಕ್ರೀಡಾಜ್ಯೋತಿ ಉದ್ಘಾಟಿಸಲಾಯಿತು. ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿ ಮತ್ತು ಕೊಡವ ಹಾಕಿ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹಾಗೂ ಕೊಡವ ಹಾಕಿ ಹಬ್ಬದ ಜನಕ ದಿ.ಪಾಂಡಂಡ ಕುಟ್ಟಪ್ಪ ಅವರ ಪತ್ನಿ ಲೀಲ ಕುಟ್ಟಪ್ಪ ಕ್ರೀಡಾಜ್ಯೋತಿಯನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಪ್ರತಿಷ್ಠಿತ ಮುದ್ದಂಡ ಹಾಕಿ ಉತ್ಸವ-2025 ತನ್ನ ಬೆಳ್ಳಿ ಮಹೋತ್ಸವ ಆಚರಣೆ ಸಂದರ್ಭದಲ್ಲಿ ಉದ್ಘಾಟನೆಯ ಸೌಭಾಗ್ಯ ತನಗೆ ಒದಗಿರುವುದು ಅತ್ಯಂತ ಸಂತಸ ತಂದಿದೆ ಎಂದು ಹೇಳಿದರು. ಕೊಡಗಿನ ಜನತೆಯ ಪ್ರಮುಖ ಕಾರ್ಯಚಟುವಟಿಕೆಗಳಲ್ಲಿ ಕ್ರೀಡೆಯೂ ಒಂದಾಗಿದೆ. ಇಂತಹ ಕ್ರೀಡಾಕೂಟದಲ್ಲಿ ಒಂದು ವಿಭಿನ್ನ ರೀತಿಯ ಪ್ರಯೋಗವನ್ನು ಮಾಡುತ್ತಿರುವ ಮುದ್ದಂಡ ಹಾಕಿ ಉತ್ಸವದ ಆಯೋಜಕರ ಪ್ರಯತ್ನಕ್ಕೆ ಶ್ಲಾಘನೆ ವ್ಯಕ್ತಪಡಿಸಿದ ಅವರು, ಹಾಕಿ ಉತ್ಸವ ಅತ್ಯಂತ ಯಶಸ್ಸು ಕಂಡು ನಾಡಿನ ಎಲ್ಲರಿಗೂ ಮಾದರಿಯಾಗಲಿ. ಮುಂದಿನ ತಿಂಗಳಾಂತ್ಯದ ವರೆಗೆ ನಡೆಯುವ ಈ ಹಾಕಿ ಉತ್ಸವವು, ನಾಡಿನ ಯುವ ಹಾಕಿ ಪಟುಗಳ ಪ್ರತಿಭೆಗಳನ್ನು ಅನಾವರಣಗೊಳಿಸುವ ವೇದಿಕೆಯಾಗಲಿ ಎಂದು ಹಾರೈಸಿದರು. ಇದೇ ಸಂದರ್ಭ ಪಂದ್ಯಾವಳಿಯನ್ನು ಆರಂಭಿಸಿದ ಕುಟುಂಬಸ್ಥರು ಹಾಗೂ ಸ್ಥಳೀಯರು ಪಾಂಡಂಡ ಕುಟ್ಟಪ್ಪ ಅವರ ಪುತ್ತಳಿಯನ್ನು ನಿರ್ಮಿಸಬೇಕು ಎಂಬ ಬೇಡಿಕೆ ಇಟ್ಟಿದ್ದು, ಅದಕ್ಕೆ ಪೂರಕವಾಗಿ ಸ್ಪಂದಿಸಿದ ಶಾಸಕರು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ, ಕಾರ್ಯಾಧ್ಯಕ್ಷ ಮೇಕೇರಿರ ರವಿ ಪೆಮ್ಮಯ್ಯ, ಉಪಾಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ, ಮುದ್ದಂಡ ಹಾಕಿ ಹಬ್ಬದ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ, ಪ್ರಮುಖರಾದ ಪಾಂಡಂಡ ಮೊಣ್ಣಪ್ಪ, ಮುದ್ದಂಡ ತಿಮ್ಮಯ್ಯ ಹಾಗೂ ಪಾಂಡಂಡ, ಮುದ್ದಂಡ ಕುಟುಂಬಸ್ಥರು ಹಾಜರಿದ್ದರು. ಐನ್ ಮನೆಗಳಿಗೆ ಮ್ಯಾರಥಾನ್ :: 1997ರಿಂದ ಇಲ್ಲಿಯವರೆಗೆ ಹಾಕಿ ಉತ್ಸವ ಆಯೋಜಿಸಿದ್ದ ಎಲ್ಲಾ ಕುಟುಂಬಗಳ ಐನ್ ಮನೆಗಳಿಗೆ ಮ್ಯಾರಥಾನ್ ಮೂಲಕ ಕ್ರೀಡಾಜ್ಯೋತಿಯನ್ನು ಕೊಂಡೊಯ್ಯಲಾಗುವುದು. ಮಾ.28ರಂದು ಬೆಳಿಗ್ಗೆ 9ಗಂಟೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಿಂದ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದವರೆಗೆ ಬೃಹತ್ ಮೆರವಣಿಗೆಯ ಮೂಲಕ ಕ್ರೀಡಾಜ್ಯೋತಿ ಸಾಗಲಿದೆ.
::: ಕ್ರೀಡಾಜ್ಯೋತಿ ಮಾರ್ಗ ::: ಮಾ.25ರಂದು ಕರಡ ಪಾಂಡಂಡ, ಕಿರುಗೂರು ಚೆಪ್ಪುಡಿರ, ಅಲಮೇಂಗಡ, ಟಿ.ಶೆಟ್ಟಿಗೇರಿ- ಒಂಟಿಯಂಗಡಿ ಮಚ್ಚಮಾಡ, ಚೆಕ್ಕೇರ, ಕಳ್ಳಿಚಂಡ, ಕುಂದ ಮನೆಯಪಂಡ, ನಾಂಗಾಲ ಕುಪ್ಪಂಡ, ಮಾ.26ರಂದು ವಿರಾಜಪೇಟೆ ಕಾವಾಡಿ ನೆಲ್ಲಮಕ್ಕಡ, ಚೆಂಬೆಬೆಳ್ಳೂರು ಈಶ್ವರ ದೇವಾಲಯ, ಮಂಡೇಪಂಡ, ಕುಕ್ಲೂರು ತಾತಂಡ, ವಿರಾಜಪೇಟೆ ಕೊಡವ ಸಮಾಜ, ಅರಮೇರಿ ಮುದ್ದಂಡ, ಐಚೆಟ್ಟಿರ, ಕಾಕೋಟುಪರಂಬು ಮಂಡೇಟಿರ, ಬಲ್ಲಚಂಡ, ಕರಡ ಕೋಡಿರ, ಬಾವಲಿ ಬಿದ್ದಂಡ, ಮಾ.27ರಂದು ಬಾವಲಿ ಮಾದಂಡ, ಕಲಿಯಂಡ, ನೆಲ್ಜಿ ಮಾಳೆಯಂಡ, ಅಪ್ಪಚೆಟ್ಟೋಳಂಡ, ನಾಪೋಕ್ಲು ಕುಲ್ಲೇಟಿರ, ಬಿದ್ದಾಟಂಡ, ಕೊಳಕೇರಿ ಕುಂಡ್ಯೋಳಂಡ, ಮಡಿಕೇರಿ ಶಾಂತೆಯಂಡ ಮತ್ತು ಮಾ.28ರಂದು ಜನರಲ್ ತಿಮ್ಮಯ್ಯ ವೃತ್ತ, ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನ.