




ಮಡಿಕೇರಿ ಮಾ.26 NEWS DESK : ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಮುನ್ನೆಚ್ಚರ ವಹಿಸಬೇಕು. ಕಾಲ ಕಾಲಕ್ಕೆ ಕುಡಿಯುವ ನೀರನ್ನು ನಿರಂತರವಾಗಿ ಪೂರೈಸಬೇಕು. ಸಾರ್ವಜನಿಕರಿಂದ ದೂರು ಬರದಂತೆ ಎಚ್ಚರವಹಿಸಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ತಾಕೀತು ಮಾಡಿದ್ದಾರೆ. ಬಿಟ್ಟಂಗಾಲದ ಹೆಗ್ಗಡೆ ಸಮಾಜದಲ್ಲಿ ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕುಗಳ ಅಧಿಕಾರಿಗಳೊಂದಿಗೆ ಪ್ರಸಕ್ತ ಆರ್ಥಿಕ ವರ್ಷದ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದು ಸಚಿವರು ಮಾತನಾಡಿದರು.
ತಹಶೀಲ್ದಾರರು ಮತ್ತು ತಾ.ಪಂ.ಇಒಗಳು ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ವಿಶೇಷ ಗಮನಹರಿಸಬೇಕು. ಜೊತೆಗೆ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಕುಂದುಕೊರತೆ ಆಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು.
ನಾಗರಹೊಳೆಯಲ್ಲಿನ ಗಿರಿಜನ ಆಶ್ರಮ ಶಾಲೆಯಲ್ಲಿ ಮೂಲ ಸೌಲಭ್ಯ ಇಲ್ಲದೆ ವಿದ್ಯಾರ್ಥಿಗಳು ಪರಿತಪಿಸುತ್ತಿದ್ದಾರೆ. ಸರ್ಕಾರ ಹಲವು ಯೋಜನಾ ಕಾರ್ಯಕ್ರಮಗಳು ಜಾರಿಗೊಳಿಸಿದ್ದರೂ ಸಹ ಪರಿಪೂರ್ಣವಾಗಿ ತಲುಪಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಈ ಬಗ್ಗೆ ಶಾಸಕರು, ಜಿಲ್ಲಾಧಿಕಾರಿಯವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದಲ್ಲಿ ಸರ್ಕಾರದ ಗಮನಕ್ಕೆ ತರಬಹುದಾಗಿದೆ. ಯಾವುದೇ ಮಾಹಿತಿ ನೀಡದಿದ್ದಲ್ಲಿ ಸಮಸ್ಯೆ ಬಗೆ ಹರಿಸುವುದಾದರೂ ಹೇಗೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮಕ್ಕಳಿಗೆ ಪೌಷ್ಠಿಕ ಆಹಾರ ವಿತರಿಸಬೇಕು. ಸರ್ಕಾರ ಸಾಕಷ್ಟು ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಿದ್ದು, ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಿದವರಿಗೆ ನಿಲಯ ಪ್ರವೇಶಕ್ಕೆ ಅವಕಾಶ ಮಾಡಬೇಕು. ಕೊರತೆಗಳಿದ್ದಲ್ಲಿ ಗಮನಕ್ಕೆ ತರುವಂತಾಗಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕಾಳಜಿ ವಹಿಸಬೇಕು ಎಂದು ಸೂಚಿಸಿದರು.
ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳಿಗೆ ತಹಶೀಲ್ದಾರರು ಮತ್ತು ತಾ.ಪಂ.ಇಒಗಳು ದಿಢೀರ್ ಭೇಟಿ ನೀಡುವುದರಿಂದ ಸುಧಾರಣೆ ಮತ್ತು ಬದಲಾವಣೆ ತರಲು ಸಾಧ್ಯ ಎಂದರು. ಲೋಕೋಪಯೋಗಿ, ಪಂಚಾಯತ್ ರಾಜ್ ಇಲಾಖೆಯ ರಸ್ತೆ ಅಭಿವೃದ್ಧಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಆ ನಿಟ್ಟಿನಲ್ಲಿ ರಸ್ತೆ ಸುಧಾರಿಸಬೇಕು. ರಸ್ತೆಗಳ ನಿರ್ವಹಣೆಗೆ ಸರ್ಕಾರ ಹಣ ನೀಡಿದ್ದು, ಸರಿಯಾಗಿ ಬಳಸಬೇಕು ಎಂದು ಎನ್.ಎಸ್.ಭೋಸರಾಜು ಅವರು ಹೇಳಿದರು. ಎಲ್ಲಾ ಇಲಾಖೆಗಳಲ್ಲಿ ಶೇ.91 ರಿಂದ ಶೇ.95 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ವರದಿ ನೀಡಲಾಗಿದೆ. ಆದರೆ ಕೆಲವು ಕಡೆ ಸಮಸ್ಯೆಗಳು ಇತ್ಯರ್ಥವಾಗದೆ ಇರುವುದಕ್ಕೆ ಉತ್ತಮ ಉದಾರಣೆ ನಾಗರಹೊಳೆ ಗಿರಿಜನ ವಸತಿ ಶಾಲೆಯೇ ಸಾಕ್ಷಿ ಎಂದು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು.
‘ಸಾರ್ವಜನಿಕರಿಂದ ಕುಂದುಕೊರತೆ ಸಂಬಂಧ ಹೆಚ್ಚು ಹೆಚ್ಚು ಮನವಿಗಳು ಸಲ್ಲಿಕೆಯಾಗುತ್ತಿವೆ ಎಂಬುದು ಕಂಡುಬಂದರೆ, ತಳಮಟ್ಟದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಭಾವಿಸಬೇಕಾಗುತ್ತದೆ. ಆದ್ದರಿಂದ ಸ್ಥಳೀಯ ಮಟ್ಟದಲ್ಲಿಯೇ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವರು ಸಲಹೆ ಮಾಡಿದರು.’ ಎಲ್ಲಾ ಹಂತದ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕೆಲಸ ಮಾಡಬೇಕು. ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ. ಹೀಗೆ ಹಲವು ಕಾರ್ಯಕ್ಕೆ ಸರ್ಕಾರದಿಂದ ಸಹಾಯಧನ ದೊರೆಯಲಿದ್ದು, ಅವುಗಳನ್ನು ಬಳಸಿಕೊಳ್ಳಲು ಮುಂದಾಗಬೇಕು ಎಂದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಮುಂದಿನ ವಾರದಲ್ಲಿ ತಾಲ್ಲೂಕುವಾರು ಕುಡಿಯುವ ನೀರು ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಕೆಡಿಪಿ ಸಭೆ ನಡೆಸಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು. ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿ ಆಗಬೇಕು. ವಿರಾಜಪೇಟೆ ಮತ್ತು ಗೋಣಿಕೊಪ್ಪದಲ್ಲಿ ಸಂಚಾರ ನಿಯಂತ್ರಣ ಸಂಬಂಧ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಎ.ಎಸ್.ಪೊನ್ನಣ್ಣ ಅವರು ಸೂಚಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿ ಮಾಡದೆ ಮೂಲಸೌಲಭ್ಯ ಕಲ್ಪಿಸಲು ಮುಂದಾಗಬೇಕು. ಯಾವುದೇ ಕಾರಣಕ್ಕೂ ತಕರಾರು ತೆಗೆಯಬಾರದು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಾರ್ವಜನಿಕ ಕೆಲಸಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು. ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು. ಸಾರ್ವಜನಿಕರ ಕೆಲಸಗಳಿಗೆ ಸ್ಪಂದಿಸಿದಲ್ಲಿ ಸದಾ ಸ್ಮರಿಸಲಿದ್ದಾರೆ. ಆ ನಿಟ್ಟಿನ್ಲಲಿ ಹೆಚ್ಚಿನ ಕಾಳಜಿ ವಹಿಸುವಂತೆ ಸೂಚಿಸಿದರು.
ಮತ್ತಷ್ಟು ಮಾಹಿತಿ: ವಿದ್ಯಾರ್ಥಿ ನಿಲಯ ಸ್ವಂತ ಕಟ್ಟಡ ಇಲ್ಲದಿದ್ದಲ್ಲಿ ಶಾಸಕರು, ತಹಶೀಲ್ದಾರರ ಹಾಗೂ ಜಿಲ್ಲಾಧಿಕಾರಿಯವರ ಗಮನಕ್ಕೆ ತರಬೇಕು. ಆ ನಿಟ್ಟಿನಲ್ಲಿ ನಿವೇಶನ ಒದಗಿಸಲಾಗುವುದು. ಆ ದಿಸೆಯಲ್ಲಿ ಬೇಡಿಕೆಗೆ ತಕ್ಕಂತೆ ಸ್ಪಂದಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.
ನಾಗರಹೊಳೆ ಗಿರಿಜನ ಆಶ್ರಮ ಶಾಲೆ ಜಾಗ ಅಂತಿಮಗೊಳಿಸಬೇಕು. ತುರ್ತಾಗಿ ಈ ಕಾರ್ಯ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗೆ ಸೂಚಿಸಿದರು. ಗಿರಿಜನ ಆಶ್ರಮ ಶಾಲೆಯಲ್ಲಿ ಬೋರ್ವೆಲ್ ಕೊರೆಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಬಿಡುಗಡೆಯಾದ ಅನುದಾನವನ್ನು ಸರಿಯಾಗಿ ಬಳಸಬೇಕು. ವಿದ್ಯಾರ್ಥಿಗಳಿಗೆ ಕನಿಷ್ಠ ಮೂಲಸೌಲಭ್ಯವನ್ನಾದರೂ ಕಲ್ಪಿಸಬೇಕು ಎಂದು ತಾಕೀತು ಮಾಡಿದರು. ವಸತಿ ಯೋಜನೆ ಸಂಬಂಧ ಫಲಾನುಭವಿಗಳ ಪಟ್ಟಿ ಸಿದ್ಧ್ದಪಡಿಸಿ ಅರ್ಹರಿಗೆ ತಲುಪಿಸಬೇಕು ಎಂದು ನಿರ್ದೇಶನ ನೀಡಿದರು. ಲೋಕೋಪಯೋಗಿ ಇಲಾಖೆ ರಸ್ತೆಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವರು ಲೋಕೋಪಯೋಗಿ ಇಲಾಖೆ ಎಂಜಿನಿಯರ್ಗಳು ಟೆಂಡರ್ ಪ್ರಕ್ರಿಯೆಯಲ್ಲಿಯೇ ಕಾಲಹರಣ ಮಾಡುವುದು ಬೇಡ. ತ್ವರಿತವಾಗಿ ಕೆಲಸವನ್ನು ನಿಯಮಾನುಸಾರ ಕೈಗೊಳ್ಳುವಂತೆ ಸೂಚಿಸಿದರು. ಕುಟ್ಟಂದಿ ಮತ್ತು ಹುದಿಕೇರಿಯಲ್ಲಿ ವೈದ್ಯರು ಇಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗಿದೆ. ಆದ್ದರಿಂದ ವೈದ್ಯರನ್ನು ಕೂಡಲೇ ನಿಯೋಜಿಸುವಂತೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಕ್ರಮವಹಿಸಬೇಕು. ಸಾಕಷ್ಟು ಔಷಧಿ ದಾಸ್ತಾನು ಇರಬೇಕು ಎಂದು ಸೂಚಿಸಿದರು. ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿನಲ್ಲಿ ವನ್ಯಪ್ರಾಣಿಗಳ ಹಾವಳಿಯಿಂದ ಬೆಳೆಹಾನಿಗೆ 2 ಕೋಟಿ ರೂ.ಗೂ ಹೆಚ್ಚು ಹಣ ಬಿಡುಗಡೆ ಮಾಡಲಾಗಿದೆ. ಇನ್ನೂ 40 ಲಕ್ಷ ರೂ. ಬಾಕಿ ಇದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಅವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಆದಿವಾಸಿಗಳು ವಾಸಿಸುವ ಪ್ರದೇಶದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ರಸ್ತೆ, ವಿದ್ಯುತ್, ಕುಡಿಯುವ ನೀರು ಮತ್ತಿತರ ಕನಿಷ್ಠ ಸೌಲಭ್ಯಗಳನ್ನಾದರೂ ತಲುಪಿಸಬೇಕು. ಜೊತೆಗೆ ಟವರ್ ನಿರ್ಮಾಣ, ಪಿಎಂಜಿಎಸ್ವೈ ರಸ್ತೆ ನಿರ್ಮಾಣ, ವಿದ್ಯುತ್ ಸಂಪರ್ಕ, ಹೀಗೆ ಮತ್ತಿತರ ಮೂಲ ಸೌಲಭ್ಯಕ್ಕೆ ಅನುಮತಿ ನೀಡಬೇಕು. ಅದನ್ನು ಬಿಟ್ಟು ಸಂಘರ್ಷ ಆಗಬಾರದು. ನಾವು ಸಹ ತಾಳ್ಮೆ ವಹಿಸಿಕೊಂಡು ಬಂದಿದ್ದೇವೆ ಎಂದು ಶಾಸಕರಾದ ಪೊನ್ನಣ್ಣ ಅವರು ಪ್ರತಿಕ್ರಿಯಿಸಿದರು. ಗೋಣಿಕೊಪ್ಪ ಮತ್ತು ನಾಣಚ್ಚಿ ಭಾಗದಲ್ಲಿ ವಿದ್ಯುತ್ ಸಂಪರ್ಕ ಇಲ್ಲದೆ ಇಂದು ಸಹ ಪರಿತಪಿಸುತ್ತಿದ್ದಾರೆ. ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ 17 ಹಾಡಿಗಳಿಗೆ ಕುಡಿಯುವ ನೀರು, ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಸೂಚಿಸಲಾಗಿತ್ತು, ಆದರೆ ಇದುವರೆಗೂ ಈ ಕಾರ್ಯ ಆಗಿಲ್ಲ ಎಂದು ಪೊನ್ನಣ್ಣ ಅವರು ಬೇಸರ ವ್ಯಕ್ತಪಡಿಸಿದರು. ಬಹುಗ್ರಾಮ ಕುಡಿಯುವ ನೀರು ಯೋಜನೆ ಬಗ್ಗೆ ಸರ್ಕಾರ 180 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಸಂಬಂಧಪಟ್ಟ ಎಂಜಿನಿಯರ್ ಅವರು ಮಾಹಿತಿ ನೀಡಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ಧರ್ಮಜ ಉತ್ತಪ್ಪ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕಾಳಿಮಾಡ ಪ್ರಶಾಂತ್(ಪೊನ್ನಂಪೇಟೆ), ಜಾನ್ಸನ್(ವಿರಾಜಪೇಟೆ), ತಹಶೀಲ್ದಾರರು, ತಾ.ಪಂ.ಇಒಗಳು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.