




ಕುಶಾಲನಗರ ಮಾ.27 NEWS DESK : ಕಾವೇರಿ ನದಿ ರಕ್ಷಣಾ ಸಮಿತಿಯ ವತಿಯಿಂದ ಬೆಂಗಳೂರಿನಲ್ಲಿ ಏ.5 ರಂದು ನ್ಯಾಯಯುತ ನೀರಿನ ಹಕ್ಕಿಗಾಗಿ ಒಂದು ದಿನದ ಕಾರ್ಯಗಾರ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಕೆ ಟಿ ಚಂದ್ರು ತಿಳಿಸಿದರು.
ಅವರು ಕುಶಾಲನಗರದ ಗೌಡ ಯುವಕ ಸಂಘ ಸಭಾಂಗಣದಲ್ಲಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ ವಿತರಿಸಿ ಮಾತನಾಡಿ ಏಪ್ರಿಲ್ 5 ರಂದು ಬೆಂಗಳೂರಿನ ಕೆ ಆರ್ ರಸ್ತೆಯ ಕುವೆಂಪು ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಗಾರವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಡಾ ನಿರ್ಮಲಾನಂದ ಮಹಾ ಸ್ವಾಮೀಜಿಗಳು ಉದ್ಘಾಟಿಸಲಿದ್ದಾರೆ. ಸಿದ್ದಗಂಗಾ ಮಹಾಸಂಸ್ಥಾನದ ಮಠಾಧೀಶರಾದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವುದರೊಂದಿಗೆ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭ ಸಮಿತಿಯ ಉಪಾಧ್ಯಕ್ಷರಾದ ಯಶೋಧ ರಾಜಣ್ಣ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸಮಿತಿಯ ಧ್ಯೇಯೋದ್ದೇಶಗಳ ಬಗ್ಗೆ ಮಾಹಿತಿ ಒದಗಿಸಿದರು. ಈ ಸಂದರ್ಭ ಸಭೆಯಲ್ಲಿ ಪಾಲ್ಗೊಂಡಿದ್ದ ಕಾವೇರಿ ನದಿ ಸ್ವಚ್ಛತಾ ಆಂದೋಲನದ ರಾಜ್ಯ ಸಂಚಾಲಕ ಎಂ ಎನ್ ಚಂದ್ರಮೋಹನ್ ಕಾವೇರಿ ನದಿ ನೀರಿನ ಹಕ್ಕಿಗಾಗಿ ಹೋರಾಡುವುದರ ಜೊತೆಗೆ ದಕ್ಷಿಣ ಭಾರತದ ಜೀವನಾಡಿಯಾದ ಕಾವೇರಿಯನ್ನು ಸಂರಕ್ಷಣೆ ಮಾಡುವ ಯೋಜನೆಗಳನ್ನು ರೂಪಿಸುವ ನಿಟ್ಟಿನಲ್ಲಿ ಸಮಿತಿ ಮೂಲಕ ಸರಕಾರಗಳ ಗಮನ ಸೆಳೆಯುವಂತೆ ಮನವಿ ಮಾಡಿದರು. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಕೆ ಪಿ ಚಂದ್ರಕಲಾ ಅವರು ಮಾತನಾಡಿ ಹಿಂದಿನ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವಧಿಯಲ್ಲಿ ತಲಕಾವೇರಿ ಮೂಲ ಕಾವೇರಿಯ ಉಳಿವು, ಅಭಿವೃದ್ಧಿಗಾಗಿ ಶ್ರಮಿಸಿದ ಬಗ್ಗೆ ಮಾಹಿತಿ ಒದಗಿಸಿದರು. ಕಾವೇರಿ ನದಿ ರಕ್ಷಣಾ ಸಮಿತಿಯ ಕಾರ್ಯದರ್ಶಿಗಳಾದ ಎಚ್ ಕೆ ರಾಮು ಅವರು ಮಾತನಾಡಿ ರಾಜ್ಯದ ಎಂಟು ಜಿಲ್ಲೆಗಳಿಂದ ಈ ಕಾರ್ಯಗಾರದಲ್ಲಿ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಬೆಂಗಳೂರಿನ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯಿಂದ ಅತ್ಯಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಗೌಡ ಯುವಕ ಸಂಘದ ಪ್ರಮುಖರಾದ ಎನ್ ಈ ಶಿವಪ್ರಸಾದ್ ಮತ್ತು ಯುವಕ ಸಂಘದ ನಿರ್ದೇಶಕರು, ಗೌಡ ಸಮಾಜದ ವಿವಿಧ ಘಟಕಗಳ ಪ್ರಮುಖರು, ಸದಸ್ಯರು ಇದ್ದರು.