




ಮಡಿಕೇರಿ ಏ.4 NEWS DESK : ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ತೆರಿಗೆ ಹೊರೆಯನ್ನು ವಿರೋಧಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಾರ್ಟಿ ಏ.5 ರಂದು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಪಕ್ಷದ ಕೊಡಗು ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬೆಳಿಗ್ಗೆ 10.30ಗಂಟೆಗೆ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಲಾಗುವುದು ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರ ನಿರಂತರವಾಗಿ ತೆರಿಗೆಯನ್ನು ಏರಿಕೆ ಮಾಡುತ್ತಿದೆ ಮತ್ತು ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆಯನ್ನು ದುಬಾರಿಗೊಳಿಸುತ್ತಿದೆ. ರಾಜ್ಯದ ಜನರು ನೆಮ್ಮದಿ ಕಳೆದುಕೊಂಡಿದ್ದು, ಆರ್ಥಿಕ ಸಂಕಷ್ಟದಲ್ಲಿಯೇ ಜೀವನ ಸಾಗಿಸುತ್ತಿದ್ದಾರೆ. ರಾಜ್ಯ ಸರ್ಕಾರ ಮುದ್ರಾಂಕ ಶುಲ್ಕ, ವಾಹನ ನೋಂದಣಿ ಶುಲ್ಕ, ನಂದಿನಿ ಹಾಲಿನ ಬೆಲೆ, ಬಸ್ ಪ್ರಯಾಣ ದರ, ಮದ್ಯದ ಬೆಲೆ, ವಿದ್ಯುತ್ ಶುಲ್ಕ, ವ್ಯಾಸಂಗ ಶುಲ್ಕ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿದೆ. ಕೇಂದ್ರ ಸರ್ಕಾರ ಟೋಲ್, ಔಷಧ, ವಿದೇಶಿ ಶಿಕ್ಷಣ, ವೀಸಾ ಶುಲ್ಕ ಮತ್ತಿತರ ಶುಲ್ಕ ಹಾಗೂ ತೆರಿಗೆಯನ್ನು ದುಬಾರಿಗೊಳಿಸಿದೆ ಎಂದು ಮುಕ್ಕಾಟಿರ ಅಪ್ಪಯ್ಯ ಆರೋಪಿಸಿದ್ದಾರೆ.