








ಮಡಿಕೇರಿ ಏ.12 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಭಾಗಮಂಡಲ ನಾಡ್ಗೌಡ ಸಮಾಜ, ಕರಿಕೆ ಗೌಡ ಸಮಾಜ, ಚೇರಂಬಾಣೆ ಗೌಡ ಸಮಾಜ, ಭಾಗಮಂಡಲ ನಾಡ್ಗೌಡ ಯುವ ಒಕ್ಕೂಟ ಮತ್ತು ಗೌಡ ಮಹಿಳಾ ಒಕ್ಕೂಟ ಚೇರಂಬಾಣೆ ಸಂಯುಕ್ತ ಆಶ್ರಯದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’ 2025 ಕಾರ್ಯಕ್ರಮವು ಏ.15 ರಂದು ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾಗಮಂಡಲದ ಗಡಿನಾಡು ಉತ್ಸವವು ಬೆಳಗ್ಗೆ 9 ಗಂಟೆಗೆ ಭಾಗಮಂಡಲದ ಕರಿಕೆ ಗೇಟ್ ಬಳಿಯಿಂದ ಅರೆಭಾಷೆ ಸಾಂಸ್ಕೃತಿಕ ಮೆರವಣಿಗೆಯೊಂದಿಗೆ ಆರಂಭವಾಗಲಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 72ನೇ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಶ್ರೀ ಆದಿಚುಂಚನಗಿರಿ ಶಾಖಾಮಠ ಹಾಸನ ಪರಮ ಪೂಜ್ಯ ಶ್ರೀ ಶಂಭುನಾಥ ಸ್ವಾಮೀಜಿಯವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಅಧ್ಯಕ್ಷರಾದ ಸದಾನಂದ ಮಾವಜಿ ಇವರು ವಹಿಸಲ್ಲಿದ್ದು, ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವರಾದ ಎನ್.ಎಸ್.ಬೋಸರಾಜು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ 72ನೇ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ ಎಂದು ಸದಾನಂದ ಮಾವಜಿ ವಿವರಿಸಿದರು. ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣಗಾರರಾಗಿ ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೋರನ ಸರಸ್ವತಿ ಪ್ರಕಾಶ್ ಭಾಗವಹಿಸಲಿದ್ದಾರೆ. ಸಾಂಪ್ರದಾಯಿಕ ವಸ್ತುಪ್ರದರ್ಶನ ಉದ್ಘಾಟಕರಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾಗಿರುವ ಎ.ಎಸ್.ಪೊನ್ನಣ್ಣ ಆಗಮಿಸಲಿದ್ದಾರೆ. ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಾಧಕರನ್ನು ಸನ್ಮಾನಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಭಾಗಮಂಡಲ ಗ್ರಾ.ಪಂ.ಅಧ್ಯಕ್ಷರಾದ ಕಾಳನ ರವಿ, ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ತಿತಿರ, ಕರ್ನಾಟಕ ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ಕೆ.ಜಿ.ಬೋಪಯ್ಯ, ಮಡಿಕೇರಿ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಮಂದ್ರಿರ ಮೋಹನ್ದಾಸ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಕೊಲ್ಯದ ಗಿರೀಶ್, ಪಿ.ಸಿ ಜಯರಾಮ, ಲಕ್ಷ್ಮಿನಾರಾಯಣ ಕಜೆಗದ್ದೆ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ನಿರ್ದೇಶಕರಾದ ಹೊಸೂರು ಜೆ.ಸತೀಶ್ ಕುಮಾರ್, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಕೊಡಗು ಗೌಡ ಮಹಿಳಾ ಒಕ್ಕೂಟ ಇದರ ಅಧ್ಯಕ್ಷರಾದ ಅಮೆ ದಮಯಂತಿ ಇತರರು ಭಾಗವಹಿಸಲಿದ್ದಾರೆ ಎಂದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2011ರಲ್ಲಿ ಸ್ಥಾಪನೆಗೊಂಡು ಕಳೆದ 14 ವರುಷಗಳಿಂದ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಪೋಷಿಸಿ ಬೆಳೆಸುವ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಅಕಾಡೆಮಿಯ ವತಿಯಿಂದ ಅರೆಭಾಷೆ ಸಾಹಿತ್ಯದ ಸುಮಾರು 70ಕ್ಕೂ ಹೆಚ್ಚು ಪುಸ್ತಕಗಳ ಪ್ರಕಟಣೆಯನ್ನು ಇಲ್ಲಿಯವರೆಗೆ ಮಾಡಿದೆ. ಸಾಂಸ್ಕೃತಿಕವಾಗಿ ಭಾಷೆಯನ್ನು ಬಳಸಿಕೊಂಡು ಹಲವಾರು ಕಾರ್ಯಕ್ರಮಗಳನ್ನು ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲದೆ, ಮೈಸೂರು, ಬೆಂಗಳೂರು ಮತ್ತು ಹೊರ ಜಿಲ್ಲೆಗಳಲ್ಲಿ ಹಾಗೂ ರಾಜ್ಯದ ಹೊರಗೆ ಕೂಡಾ ಹಲವಾರು ಕಾರ್ಯಕ್ರಮ ಏರ್ಪಡಿಸಿದೆ ಎಂದು ಅವರು ತಿಳಿಸಿದರು. ಪ್ರತೀ ವರ್ಷ ಅರೆಭಾಷೆ ಮಾತನಾಡುವವರ ಸಾಧನೆ ಗುರುತಿಸಿ ಅರೆಭಾಷೆ ಗೌರವ ಪ್ರಶಸ್ತಿಯನ್ನು ಅರ್ಹರಿಗೆ ಕೊಡಮಾಡುತ್ತಾ ಬಂದಿದೆ. ಅರೆಭಾಷೆಯ ವಿವಿಧ ಕ್ಷೇತ್ರಗಳಲ್ಲಿ ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಿದೆ. ಅರೆಭಾಷೆ ನಿಘಂಟು ಮತ್ತು ಪದಕೋಶವನ್ನು ಬಿಡುಗಡೆ ಮಾಡಿರುತ್ತದೆ. ಸುಳ್ಯ ತಾಲ್ಲೂಕಿನ ಶಾಲಾ ಕಾಲೇಜುಗಳಲ್ಲಿ ಅರೆಭಾಷೆ ಸಂಘ ಸ್ಥಾಪಿಸಿ ಮಕ್ಕಳಲ್ಲಿ ಭಾಷೆ ಮತ್ತು ಸಂಸ್ಕೃತಿಯ ಅರಿವನ್ನು ಮೂಡಿಸುವ ಮತ್ತು ಪ್ರಚಾರಪಡಿಸುವ ಕಾರ್ಯ ಮಾಡುತ್ತಿದೆ. ಇವುಗಳಷ್ಟೇ ಅಲ್ಲದೆ ಇನ್ನೂ ಹಲವಾರು ಕಾರ್ಯ ನಿರ್ವಹಿಸಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯದ ಬೆಳವಣಿಗೆಯಲ್ಲಿ ತನ್ನದೇ ಆದ ಪಾತ್ರ ನಿರ್ವಹಿಸುತ್ತಿದೆ ಎಂದು ವಿವರಿಸಿದ್ದಾರೆ. ಅರೆಭಾಷೆ ಅಕಾಡೆಮಿ ಸ್ಥಾಪನೆಯ ದಶ ವರ್ಷದ ಸಂಭ್ರಮಾಚರಣೆಯ ನೆನಪಿಗಾಗಿ ರಾಜ್ಯದ ಅರೆಭಾಷಿಕರ ಗಡಿ ಪ್ರದೇಶದಲ್ಲಿ 2024-25 ನೇ ಸಾಲಿನಲ್ಲಿ 6 ಗಡಿನಾಡು ಉತ್ಸವ ಕಾರ್ಯಕ್ರಮ ಆಯೋಜಿಸಿದೆ. ಈಗಾಗಲೇ ಕೇರಳದ ಬಂದಡ್ಕ, ಸುಳ್ಯ ತಾಲೂಕಿನ ಗಡಿ ಗ್ರಾಮವಾದ ಮಂಡೆಕೋಲು, ಕೊಡಗಿನ ಚೆಯ್ಯಂಡಾಣೆ ಮತ್ತು ಕುಶಾಲನಗರದಲ್ಲಿ ಅರೆಭಾಷೆ ಗಡಿನಾಡ ಉತ್ಸವ ಆಚರಿಸಲಾಗಿದೆ ಎಂದು ನುಡಿದರು. ಅರೆಭಾಷೆ ಗಡಿನಾಡ ಉತ್ಸವ 2025ರ ಅಂಗವಾಗಿ ಬೆಳಗ್ಗೆ 9.30 ರಿಂದ ಶಿವಪ್ರಸಾದ್ ಆಲೆಟ್ಪಿ ಮತ್ತು ಬಳಗದವರಿಂದ ಅರೆಭಾಷೆ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ನಂತರ ಸಭಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2 ಗಂಟೆಯಿಂದ ಗೌಡ ಮಹಿಳಾ ಒಕ್ಕೂಟ ಚೇರಂಬಾಣೆ ಮತ್ತು ಭಾಗಮಂಡಲ ನಾಡ ಗೌಡ ಯುವ ಒಕ್ಕೂಟ ಇವರಿಂದ ಅರೆಭಾಷೆ ರಸಪ್ರಶ್ನೆ ಕಾರ್ಯಕ್ರಮ, ಸಂಜೆ 3 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಅರೆಭಾಷೆ ಉತ್ಸವ 2025ರ ಈ ಅವಿಸ್ಮರಣೆಯ ಕಾರ್ಯಕ್ರಮದಲ್ಲಿ ಎಲ್ಲಾ ಅರೆಭಾಷಿಕರು ಮತ್ತು ಅರೆಭಾಷೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಕೋರಿದೆ. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ಸೂದನ ಎಸ್.ಈರಪ್ಪ, ಕುದುಪಜೆ ಕೆ.ಪ್ರಕಾಶ್, ಸಂದೀಪ್ ಪೂಳಕಂಡ, ಚೇರಂಬಾಣೆ ಗೌಡ ಸಮಾಜದ ಅಧ್ಯಕ್ಷರಾದ ಕೊಡಪಾಲ ಗಣಪತಿ ಉಪಸ್ಥಿತರಿದ್ದರು.