






ಮಡಿಕೇರಿ NEWS DESK ಏ.18 : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಬೆಂಗಳೂರು ಕೊಡವ ಸಮಾಜದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿತು.
ಎ.ಎಸ್.ಪೊನ್ನಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಿ ಪ್ರಮುಖ ಖಾತೆ ನೀಡುವಂತೆ ಒತ್ತಾಯಿಸಿ ಕೊಡವ ಸಮಾಜ ಸರ್ವಾನುಮತದಿಂದ ತೆಗೆದುಕೊಂಡ ನಿರ್ಣಯದೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಮುಖರು ಸಚಿವ ಸ್ಥಾನದ ಅಗತ್ಯತೆಯ ಬಗ್ಗೆ ವಿವರಿಸಿದರು. ಅಲ್ಪಸಂಖ್ಯಾತ ಕೊಡವ ಜನಾಂಗದ ಪ್ರಮುಖ ಹಾಗೂ ಬಲಿಷ್ಠ ಪ್ರತಿನಿಧಿಯಾಗಿರುವ ಎ.ಎಸ್.ಪೊನ್ನಣ್ಣ ಅವರು ಈಗಾಗಲೇ ಮುಖ್ಯಮಂತ್ರಿಗಳ ಕಾನೂನು ಸಲಹಗಾರರಾಗಿ ನಾಡಿನಾದ್ಯಂತ ಹೆಸರು ಮಾಡಿದ್ದಾರೆ. ಅವರು ಸಚಿವ ಸ್ಥಾನಕ್ಕೆ ಯೋಗ್ಯರು ಎಂಬ ಮನವಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು. ಭಾಷಿಕ ಅಲ್ಪಸಂಖ್ಯಾತರೂ ಆಗಿರುವ ಕೊಡವ ಜನಾಂಗದವರು ಶತಮಾನಗಳಿಂದ ಕ್ರೀಡೆ, ಸೈನ್ಯ ಹಾಗೂ ಇನ್ನಿತರ ಪ್ರಮುಖ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಯನ್ನು ಮಾಡುತ್ತಾ ಬಂದಿದ್ದಾರೆ. ಕೊಡವ ಸಮುದಾಯದ ಪ್ರತಿನಿಧಿಯಾಗಿರುವ ಪೊನ್ನಣ್ಣ ಅವರಿಗೆ ಪ್ರಮುಖ ಖಾತೆಯನ್ನು ನೀಡಿ ಸಚಿವರನ್ನಾಗಿಸಿ ತಮ್ಮ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕೆಂದು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಕರವಟ್ಟಿರ ಟಿ.ಪೆಮ್ಮಯ್ಯ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ನಿಯೋಗ ಭೇಟಿಯಾದ ಸಂದರ್ಭ ಶಾಸಕ ಎ.ಎಸ್.ಪೊನ್ನಣ್ಣ ಅವರು ಹಾಜರಿದ್ದರು.