
ಕುಶಾಲನಗರ ಏ.28 NEWS DESK : ವಿದ್ಯಾರ್ಥಿಗಳು ಶೈಕ್ಷಣಿಕ ಅವಧಿಯಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಮಡಿಕೇರಿ ಕ್ಷೇತ್ರ ವಿಧಾನಸಭಾ ಸದಸ್ಯರಾದ ಡಾ ಮಂತರ್ ಗೌಡ ಕರೆ ನೀಡಿದ್ದಾರೆ. ಕುಶಾಲನಗರ ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜಿನ ‘ಕಲಾರಂಭ್’ ಸಾಂಸ್ಕೃತಿಕ ವೇದಿಕೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ತಮ್ಮ ಪ್ರತಿಭೆಯನ್ನು ಹೊರಗೆ ಹಾಕುವ ಮನಸ್ಥಿತಿ ಹೊಂದಿರಬೇಕು. ವಿದ್ಯಾರ್ಥಿ ಜೀವನದಲ್ಲಿ ಪ್ರತಿಯೊಬ್ಬರೂ ಕಾರ್ಯಕ್ರಮಗಳ ವೇದಿಕೆಯ ಬಳಕೆ ಮಾಡಿಕೊಳ್ಳುವ ಮೂಲಕ ಧನಾತ್ಮಕ ಚಿಂತನೆ ಹೊಂದಬೇಕು ಎಂದು ಹೇಳಿದರು. ಶಿಕ್ಷಣದ ಜೊತೆಗೆ ಪೂರಕ ಚಟುವಟಿಕೆಗಳೊಂದಿಗೆ ಮಕ್ಕಳ ಬೆಳವಣಿಗೆ ಸಾಧ್ಯ ಎಂದ ಶಾಸಕರು ಶೈಕ್ಷಣಿಕವಾಗಿ ಅಗತ್ಯವಿರುವ ಸಹಕಾರ ನೀಡುವ ಭರವಸೆ ವ್ಯಕ್ತಪಡಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಎನ್ಎನ್ ಶಂಭುಲಿಂಗಪ್ಪ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ಎಂಜಿಎಂ ಪದವಿ ಕಾಲೇಜಿನ ಪ್ರಾಂಶುಪಾಲರಾದ ಟಿ ಎ ಲಿಖಿತ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪದವಿ ತರಗತಿಯಲ್ಲಿ ಅತಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಶಾಸಕ ಡಾ ಮಂತರ್ ಗೌಡ ಅವರನ್ನು ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ವಿವೇಕಾನಂದ ಪಿಯು ಕಾಲೇಜು ಪ್ರಾಂಶುಪಾಲರಾದ ಕ್ಲಾರಾ ರೇಷ್ಮಾ, ಕಾಲೇಜಿನ ಆಡಳಿತ ಅಧಿಕಾರಿ ಮಹೇಶ್ ಅಮೀನ್, ನಂಜಪ್ಪ, ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಕರಾದ ಮೋನಿಷಾ ಕಾಲೇಜು ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷ ಜೀವನ್, ಬೋಧಕ ಬೋಧಕೇತರ ಸಿಬ್ಬಂದಿಗಳು ಪೋಷಕರು ವಿದ್ಯಾರ್ಥಿಗಳು ಇದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವಿಶೇಷ ಸಾಂಸ್ಕೃತಿಕ ಚಟುವಟಿಕೆಗಳು ನಡೆದವು.









