




ಮಡಿಕೇರಿ ಮೇ 9 NEWS DESK : ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ನಗರದ ಓಂಕಾರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಭಾರತೀಯ ಸೈನ್ಯಕ್ಕೆ ಶಕ್ತಿ ತುಂಬಲು ಮತ್ತು ದೇಶದ ಶಾಂತಿ, ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಪಹಲ್ಗಾಮ್ನಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯ ಪ್ರತಿಯಾಗಿ ಭಾರತಿಯ ಸೈನಿಕರು ದಾಳಿ ನಡೆಸಿದ್ದಾರೆ. ಭಾರತ ನ್ಯಾಯದ ಪರವಾಗಿದೆ. ನ್ಯಾಯಕ್ಕೆ ಎಂದಿಗೂ ಜಯವಿದೆ ಎಂದು ಹೇಳಿದರು. ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಿಂದ ಪಾಕಿಸ್ತಾನದ ಸ್ಥತಿ ಗಂಭೀರವಾಗಿದ್ದು, ಭಯೋತ್ಪಾದನೆಯ ಸಂಪೂರ್ಣ ನಾಶವೇ ಭಾರತದ ಗುರಿ ಆಗಿದೆ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ ಮಾತನಾಡಿ, ಉಗ್ರರನ್ನು ಮಟ್ಟ ಹಾಕಲು ಕೇಂದ್ರ ಸರ್ಕಾರ ಭಾರತ ಸೇನೆಯ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮೂಲಕ ಪಾಕಿಸ್ತಾನದ ವಿರುದ್ಧ ಹೋರಾಟವನ್ನು ಆರಂಭಿಸಿದ್ದು, ಈಗಾಗಲೇ ಯಶಸ್ವಿಕಂಡಿದೆ. ದೇಶದ ರಕ್ಷಣೆಗೆ ಭಾರತೀಯ ಸೈನಿಕರು ತಮ್ಮ ಪ್ರಾಣವನ್ನೆ ಮುಡಿಪಾಗಿಟ್ಟಿದ್ದು, ಅವರಿಗೆ ಜಯವಾಗಲಿ. ಭಾರತ ದೇಶ ಶಾಂತಿಗೆ ಹೆಸರಾಗಿದ್ದು, ಭಯೋತ್ಪಾದನೆ ನಿರ್ಮೂಲನೆ ಮಾಡುವ ಮೂಲಕ ಪಾಕಿಸ್ತಾನ ಎಂದಿಗೂ ಭಾರತದತ್ತ ತಿರುಗಿಯು ನೋಡದಂತೆ ಉತ್ತರ ಕೊಡುವಂತಾಗಬೇಕೆಂದರು. ಈ ಸಂದರ್ಭ ನಗರಸಭೆ ಅಧ್ಯಕ್ಷೆ ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ವಕ್ತಾರ ಬಿ.ಕೆ.ಅರುಣ್ ಕುಮಾರ್, ನಗರ ಬಿಜೆಪಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ಮಹಿಳಾ ಬಿಜೆಪಿ ಅಧ್ಯಕ್ಷೆ ಅನಿತಾ ಪೂವಯ್ಯ, ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ, ಪ್ರಮುಖರಾದ ಮನುಮಂಜುನಾಥ್, ಬೊಳ್ಳಜಿರ ಬಿ.ಅಯ್ಯಪ್ಪ, ಸವಿತಾ ರಾಕೇಶ್ ಸೇರಿದಂತೆ ಮತ್ತಿತರ ಕಾರ್ಯಕರ್ತರು ಪಾಲ್ಗೊಂಡಿದ್ದರು.