
ಮಡಿಕೇರಿ ಮೇ 23 NEWS DESK : ಸರ್ಕಾರಿ ಶಾಲೆಗಳ ಶೈಕ್ಷಣಿಕ ಪ್ರಗತಿ, ಶಾಲಾ ಅಭಿವೃದ್ಧಿ ಹಾಗೂ ಬಲವರ್ಧನೆಗಾಗಿ ಸರ್ಕಾರ ರೂಪಿಸಿರುವ “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಎಂಬ ವಿನೂತನ ಪರಿಕಲ್ಪನೆಯ ಕಾರ್ಯಕ್ರಮದಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಶ್ರೋಯೋಭಿವೃದ್ಧಿಗಾಗಿ ಶಾಲೆಯಲ್ಲಿ ಕಲಿತ ಹಿರಿಯ ವಿದ್ಯಾರ್ಥಿಗಳು, ಪೋಷಕರು, ನಾಗರಿಕರು ಹಾಗೂ ದಾನಿಗಳು ಹೆಚ್ಚಿನ ಸಹಕಾರ ಮತ್ತು ಪ್ರೋತ್ಸಾಹ ನೀಡಬೇಕು ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಅಭಿವೃದ್ಧಿ) ಸಿ.ರಂಗಧಾಮಪ್ಪ ಮನವಿ ಮಾಡಿದ್ದಾರೆ. ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ಅಭಿಯಾನ (ಮಧ್ಯಾಹ್ನದ ಬಿಸಿಯೂಟ ಯೋಜನೆ) ವತಿಯಿಂದ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ ರೂಪುರೇಷೆ ಕುರಿತು ಸಮುದಾಯದ ಸಹಭಾಗಿತ್ವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಏರ್ಪಡಿಸಿದ್ದ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ಹಿರಿಯ/ ಹಳೆಯ ವಿದ್ಯಾರ್ಥಿಗಳು, ಸಂಘ- ಸಂಸ್ಥೆಗಳು, ದಾನಿಗಳು, ಪೋಷಕರು, ಗ್ರಾಮಸ್ಥರು ಹಾಗೂ ನಾಗರಿಕರು ತಮ್ಮ ತಮ್ಮ ಊರು ಮತ್ತು ತಮ್ಮ ಸುತ್ತಲಿನ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. “ನಮ್ಮ ಶಾಲೆ ನಮ್ಮ ಜವಾಬ್ದಾರಿ”ಯ ಕಾರ್ಯಕ್ರಮವು ಸರ್ಕಾರದ ಕನಸಿನ ಕ್ರಾಂತಿಕಾರಕ ಹಾಗೂ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಈ ಕಾರ್ಯಕ್ರಮದ ಮೂಲಕ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ವಿವಿಧ ಯೋಜನೆ/ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಡಿಡಿಪಿಐ ರಂಗಧಾಮಪ್ಪ ಮಾಹಿತಿ ನೀಡಿದರು. ಸರ್ಕಾರಿ ಶಾಲೆಗಳಲ್ಲಿ ಕೆಲವು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದು ಸರ್ಕಾರಿ ಶಾಲೆಗಳ ದಾಖಲಾತಿಯನ್ನು ಹೆಚ್ಚಿಸುವ ಮೂಲಕ ಜನರ ಸಹಭಾಗಿತ್ವದಲ್ಲಿ ಶಾಲಾ ಶೈಕ್ಷಣಿಕ ಪ್ರಗತಿ ಹಾಗೂ ಶಾಲಾಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು. ಶಾಲೆಯ ಅಭಿವೃದ್ಧಿಗೆ ಸರ್ಕಾರ ಉಚಿತ ಶಿಕ್ಷಣ ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು. ಜ್ಞಾನದ ವಿಕಾಸವಾಗಬೇಕು. ಸರ್ಕಾರವು ಸರ್ಕಾರಿ ಶಾಲಾ ಮಕ್ಕಳಿಗೆ ನೀಡುತ್ತಿರುವ ಅನೇಕ ಸೌಲಭ್ಯಗಳ ಕುರಿತು ಡಿಡಿಪಿಐ ಮಾಹಿತಿ ನೀಡಿದರು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಕುರಿತು ಮಾಹಿತಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ, ಸರ್ಕಾರಿ ಶಾಲೆಗಳ ಅಭಿವೃದ್ಧಿ ಕುರಿತು ದೊಡ್ಡ ಗುರಿಯನ್ನು ಹೊಂದಲಾಗಿದೆ. ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜತೆಗೆ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ನೀಡಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡುವಂತೆ ಮನವಿ ಮಾಡಿದರು. ಜಿಲ್ಲಾ ಅಕ್ಷರ ದಾಸೋಹ ಯೋಜನೆಯ ಶಿಕ್ಷಣಾಧಿಕಾರಿ ಹೇಮಂತ್ ರಾಜ್ ಮಾತನಾಡಿ, ಸರ್ಕಾರ ಮಕ್ಕಳ ಕಲಿಕೆಯನ್ನು ಉತ್ತಮ ಪಡಿಸುವ ದಿಸೆಯಲ್ಲಿ ಮಕ್ಕಳಿಗೆ ಉತ್ತಮ ಪೌಷ್ಟಿಕಾಂಶ ವುಳ್ಳ ಆಹಾರ ನೀಡುವ ಉದ್ದೇಶದಿಂದ ಬಿಸಿಯೂಟ ಯೋಜನೆ ಸೇರಿದಂತೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ ಎಂದರು. ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ, ಹಾಲು, ಬಾಳೆಹಣ್ಣನ್ನು ಒಳಗೊಂಡಂತೆ ಬಿಸಿಯೂಟದೊಂದಿಗೆ ಅವರನ್ನು ಹಸಿವಿನಿಂದ ಬಳಲದಂತೆ ಪೌಷ್ಟಿಕಾಂಶವುಳ್ಳ ಆಹಾರ ನೀಡುವ ಮೂಲಕ ಮಕ್ಕಳ ಕಲಿಕೆಗೆ ವಿಶೇಷ ಗಮನ ಹರಿಸಲಾಗುತ್ತಿದೆ ಎಂದು ಹೇಳಿದರು. ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಪಿ.ನವೀನ್ ಕುಮಾರ್, ಶಾಲೆಯ ಶೈಕ್ಷಣಿಕ ಗುಣಮಟ್ಟದ ಕಲಿಕೆ ಹಾಗೂ ನಮ್ಮ ನಮ್ಮ ಜವಾಬ್ದಾರಿ ಕುರಿತು ಮಾಹಿತಿ ಹಂಚಿಕೊಂಡರು. ಕುಶಾಲನಗರ ಜೆ.ಸಿ.ಐ.ಸಂಸ್ಥೆಯ ನಿಕಟ ಪೂರ್ವ ಅಧ್ಯಕ್ಷ ಎಂ.ಜೆ.ರಜನಿಕಾಂತ್ ಮಾತನಾಡಿ, ಸರ್ಕಾರಿ ಶಾಲೆಗಳ ಪ್ರಗತಿಗೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು. ಕೂಡಿಗೆ ಸರ್ಕಾರಿ ಪಿಯೂ ಕಾಲೇಜಿನ ಪ್ರಾಂಶುಪಾಲ ಹಂಡ್ರಂಗಿ ಜೆ. ನಾಗರಾಜ್, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಸರ್ಕಾರಿ ಜೂನಿಯರ್ ಕಾಲೇಜಿನ ಉಪ ಪ್ರಾಂಶುಪಾಲರಾದ ಪರಮೇಶ್ವರಪ್ಪ, ದೈಹಿಕ ಶಿಕ್ಷಣ ಶಿಕ್ಷಕ ಡಾ.ಸದಾಶಿವಯ್ಯ ಎಸ್.ಪಲ್ಲೇದ್, ಸಿಆರ್ಪಿ ಟಿ.ಈ.ವಿಶ್ವನಾಥ್, ಕುಶಾಲನಗರ ಪಿ.ಎಂ ಶ್ರೀ ಶಾಲೆಯ ಮುಖ್ಯ ಶಿಕ್ಷಕಿ ಎಂ.ಎಂ.ಭಾರತಿ, ಚಿಂತನ ಫೌಂಡೇಶನ್ ನ ಸ್ವಯಂ ಸೇವಕರಾದ ಸುನಂದಕುಮಾರ್, ಕೂಡಿಗೆ ಗೋವಿಂದರಾಜ್ ಸೇರಿದಂತೆ ವಿವಿಧ ಶಾಲೆಯ ಮುಖ್ಯ ಶಿಕ್ಷಕರು, ಪೋಷಕರು, ನಾಗರಿಕರು, ಶಾಲಾ ಶಿಕ್ಷಕರು ಇದ್ದರು. ಶಿಕ್ಷಕಿ ಎಂ.ತುಳಸಿ ನಿರ್ವಹಿಸಿದರು. ಶಿಕ್ಷಕ ಎಸ್.ಎನ್.ವೇಣುಗೋಪಾಲ್ ವಂದಿಸಿದರು.









