
ಮಡಿಕೇರಿ ಮೇ 30 NEWS DESK : ಪೋಷಕರು ದೇಶಭಕ್ತಿ ಮತ್ತು ಭ್ರಷ್ಟ ವ್ಯವಸ್ಥೆಯ ವಿರುದ್ಧ ಬಾಲ್ಯದಿಂದಲೇ ಮಕ್ಕಳಲ್ಲಿ ಜಾಗೃತಿ ಮೂಡಿಸಿದರೆ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬಹುದು ಹಾಗೂ ದೇಶದ ಪರಂಪರೆಯನ್ನು ಉಳಿಸಬಹುದು ಎಂದು ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ನಗರದ ಹೊಟೇಲ್ ಮಯೂರ ವ್ಯಾಲಿ ವ್ಯೂ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಕಾರ್ಯಾಚರಣೆ ಸಮಿತಿ, ಇಂಡಿಯಾದ ಕೊಡಗು ಜಿಲ್ಲಾ ಘಟಕವನ್ನು ಮತ್ತು ಪದಾಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತದಲ್ಲಿ ಯುವಕರ ಸಂಖ್ಯೆ ಅತ್ಯಂತ ಪ್ರಭಾವಶಾಲಿಯಾಗಿದ್ದು, ಪ್ರತಿಯೊಬ್ಬರು ಭ್ರಷ್ಟಾಚಾರದ ನಿರ್ಮೂಲನೆಗೆ ಮುಂದಾದರೆ ಮಾತ್ರ 2047ಕ್ಕೆ ಭಾರತ ಸರ್ವಾಂಗೀಣ ಅಭಿವೃದ್ಧಿ ಹೊಂದಿದ ದೇಶವಾಗಿ ಕಾಣಲು ಸಾಧ್ಯವಾಗುತ್ತದೆ ಮತ್ತು ಆರ್ಥಿಕವಾಗಿ ಸದೃಢವಾಗುತ್ತದೆ ಎಂದರು.
ಹುಟ್ಟಿದ ಮಕ್ಕಳಲ್ಲಿ ಡಾಕ್ಟರ್, ಇಂಜಿನಿಯರ್ ಗಳಾಗುವಂತೆ ಸ್ಫೂರ್ತಿ ತುಂಬುವ ಬದಲು ಜೀವನದ ಮೌಲ್ಯಗಳನ್ನು ನೀಡುವ ಕೆಲಸವನ್ನು ಮಾಡಬೇಕು. ಇಡೀ ಜಗತ್ತಿಗೆ ಮೌಲ್ಯಗಳನ್ನು ನೀಡುವ ನಾವು ನಮ್ಮೊಳಗಿನ ಸಾಮಾಜಿಕ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳಬೇಕು, ನಮ್ಮೊಳಗೆ ನಾವು ಬದಲಾಗಬೇಕು. ಆಗ ಮಾತ್ರ ಅತ್ಯದ್ಭುತ ಜಗತ್ತನ್ನು ಕಾಣಲು ಸಾಧ್ಯ. ಆದರ್ಶ, ಮೌಲ್ಯಗಳನ್ನು ಹೊಂದಿರುವ ರಾಷ್ಟ್ರದಲ್ಲಿ ಅನಿವಾರ್ಯವಾಗಿ ಸಾಮಾಜಿಕ ಬದಲಾವಣೆ, ಜನಸಂಖ್ಯೆ ಸ್ಫೋಟದಿಂದ ಅಶಾಂತಿಯ ವಾತಾವರಣ ಸೃಷ್ಟಿಯಾಗಿದೆ. ದೇಶ ಎಂದರೆ ಬಾಹ್ಯ ಸೌಂದರ್ಯ, ಬಾಹ್ಯ ಕಟ್ಟಡಗಳಲ್ಲ. ದೇಶವನ್ನು ಪ್ರತಿನಿಧಿಸುವುದು, ಸದೃಢವಾದ ಮನಸ್ಥಿತಿ ಹೊಂದಿದ ಬಾಹ್ಯ ಸಂಪನ್ಮೂಲ. ಆ ನಿಟ್ಟಿನಲ್ಲಿ ಸದೃಢವಾದ ಮನಸ್ಥಿತಿಯನ್ನು ಹೊಂದಬೇಕು ಎಂದರು. ಪ್ರಸ್ತುತ ದಿನಗಳಲ್ಲಿ ವಿಜ್ಞಾನ, ತಂತ್ರಜ್ಞಾನ ಜಗತ್ತನ್ನು ತನ್ನೊಳಗೆ ಅಡಗಿಸಿಕೊಂಡಿದೆ. ವಿಜ್ಞಾನವನ್ನು ಒಂದು ಅಸ್ತ್ರವಾಗಿಟ್ಟುಕೊಂಡು ಬಾಹ್ಯದ ಬೆಳವಣಿಗೆಯನ್ನು ಬದುಕಿನ ಬೆಳವಣಿಗೆ ಎನ್ನುವಂತೆ ಮಾಡಿಕೊಂಡಿದ್ದೇವೆ. ನಮ್ಮ ಕಾಲಘಟ್ಟದಲ್ಲಿ ಶರಣರ ಸಿದ್ಧಾಂತವನ್ನು ಅಧ್ಯಯನ ಮಾಡಿದ್ದೇವೆ. ಈ ದೇಶ ನಮಗೆ ನೀಡಿದ ತತ್ವಗಳನ್ನು ವಿದೇಶಗಳಲ್ಲಿ ಕಾಣಲು ಸಾಧ್ಯವಿಲ್ಲ. ಉತ್ತಮ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಸುಖ ಜೀವನ ನಡೆಸಲು ಸಾಧ್ಯ ಎಂದು ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ಹೇಳಿದರು. ಮಡಿಕೇರಿ ಲೋಕಾಯುಕ್ತ ಕಚೇರಿಯ ಡಿವೈಎಸ್ಪಿ ಲೋಕೇಶ್ ಕುಮಾರ್ ಮಾತನಾಡಿ, ಭ್ರಷ್ಟಾಚಾರ ಎಂಬುವುದು ಕ್ಯಾನ್ಸರ್ ಇದ್ದಂತೆ, ಇದರಿಂದ ದೇಶದ ಪ್ರಗತಿಗೆ ಕುಂಟಿತವಾಗುತ್ತದೆ. ಬೇರೆ ಜಿಲ್ಲೆಗೆ ಹೊಲಿಸಿದರೆ ಕೊಡಗಿನಲ್ಲಿ ಭ್ರಷ್ಟಾಚಾರ ಕಡಿಮೆ ಇದ್ದು, ಜನ ಮತ್ತಷ್ಟು ಜಾಗೃತರಾಗಬೇಕು ಎಂದು ಕರೆ ನೀಡಿದರು. ಭಾರತ 2047ರ ವೇಳೆಗೆ ಅಭಿವೃದ್ಧಿ ಹೊಂದಿದ ದೇಶ ಎಂಬ ಪಟ್ಟಿಗೆ ಸೇರಬೇಕೆಂಬ ಹಂಬಲ ಹೊಂದಿದೆ. ಆದರೆ ಭ್ರಷ್ಟಾಚಾರ ದೇಶದ ದೊಡ್ಡ ಸಮಸ್ಯೆಯಾಗಿದ್ದು, ಇದು ನಿರ್ಮೂಲನೆಯಾಗದಿದ್ದರೆ ಅಭಿವೃದ್ಧಿ ಅಸಾಧ್ಯ. ಮನುಷ್ಯನ ಯೋಗ್ಯತೆಯನ್ನು ಹಣದಿಂದ ಅಳೆಯುವುದರಿಂದ ಇಂದು ಹಣ ಸಂಪಾದನೆ ಒಂದೇ ಗುರಿಯಾಗಿದೆ. ಭ್ರಷ್ಟಾಚಾರದ ವಿರುದ್ಧ ಮಾತನಾಡುವವರೇ ಭ್ರಷ್ಟಾಚಾರದಲ್ಲಿ ಮುಳುಗಿರುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು. ಅಧಿಕಾರಿಗಳಿಗೆ ಹಣ ಗಳಿಕೆಯೊಂದೇ ಗುರಿಯಾಗಬಾರದು, ಇದಕ್ಕೆ ಅಂತ್ಯವಿಲ್ಲ, ಇದರಿಂದ ಸಂತೋಷ ಸಿಗಲು ಸಾಧ್ಯವಿಲ್ಲ. ತಮ್ಮ ನಿಶ್ವಾರ್ಥ ಸೇವೆಯ ಮೂಲಕ ಜನರಿಗೆ ನ್ಯಾಯ ಒದಗಿಸುವ ಕೆಲಸ ಆಗಬೇಕು ಎಂದು ತಿಳಿಸಿದರು.
ಭ್ರಷ್ಟಚಾರಕ್ಕೆ ಹಲವು ಮುಖಗಳಿವೆ, ಇದರ ನಿರ್ಮೂಲನೆ ಕಷ್ಟ ಸಾಧ್ಯ. ಎಲ್ಲರಲ್ಲೂ ಸಮಾನ ಮನಸ್ಸಿದ್ದರೆ ಮಾತ್ರ ಇದನ್ನು ತಡೆಯಲು ಸಾಧ್ಯ. ಆ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ನೈತಿಕ ಶಿಕ್ಷಣದ ಅಗತ್ಯವಿದೆ ಎಂದರು. ಎಲ್ಲಾ ಜಿಲ್ಲೆಗಳಲ್ಲೂ ಲೋಕಾಯುಕ್ತ ಸಂಸ್ಥೆ ಭ್ರಷ್ಟಾಚಾರದ ವಿರುದ್ಧ ಎರಡು ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದಕ್ಕೆ ಸರ್ಕಾರದ ನಿಯಂತ್ರಣವಿಲ್ಲ. ಆದ್ದರಿಂದ ಸಾರ್ವಜನಿಕರು ಇಲಾಖೆಗಳಲ್ಲಾಗುವ ಭ್ರಷ್ಟಾಚಾರದ ವಿರುದ್ಧ ಯಾವುದೇ ಭಯ ಆತಂಕವಿಲ್ಲದೆ ಲೋಕಯುಕ್ತಕ್ಕೆ ದೂರು ನೀಡುವ ಮೂಲಕ ಭ್ರಷ್ಟಾಚಾರದ ನಿರ್ಮೂಲನೆಗೆ ಪಣ ತೊಡಬೇಕು ಎಂದು ಲೋಕೇಶ್ ಕುಮಾರ್ ತಿಳಿಸಿದರು.
ದೆಹಲಿ ದಕ್ಷಿಣ ಭಾರತ ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆಯ ಅಧ್ಯಕ್ಷ ಡಾ.ಎ.ಎಸ್.ಭದ್ರಶೆಟ್ಟಿ ಕೊಡಗು ಘಟಕದ ನೂತನ ಪದಾಧಿಕಾರಿಗಳಿಗೆ ಗುರುತಿನ ಚೀಟಿ ವಿತರಿಸಿ ಮಾತನಾಡಿ, ಕೊಡಗು ಧೈರ್ಯ ಮತ್ತು ಸಾಹಸಕ್ಕೆ ಹೆಸರುವಾಸಿಯಾದ ಜಿಲ್ಲೆ, ಇಲ್ಲಿನ ಜನ ಜಾಗೃತರಾಗಿದ್ದು, ಭ್ರಷ್ಟಾಚಾರ ಸೇರಿದಂತೆ ಯಾವುದೇ ತಪ್ಪುಗಳನ್ನು ಪ್ರಶ್ನಿಸುವ ಗುಣವನ್ನು ಹೊಂದಿದ್ದಾರೆ ಎಂದು ಬಣ್ಣಿಸಿದರು. ಪ್ರತಿಯೊಬ್ಬ ಮನುಷ್ಯ ಶುದ್ಧ ಹಸ್ತ, ಶುದ್ಧ ಮಾತು ಮತ್ತು ಶುದ್ಧ ಸಂಬಂಧವನ್ನು ಹೊಂದಿರಬೇಕು. ನಾವು ಮಾಡುವ ಕೆಲಸದಲ್ಲಿ ಪ್ರಾಮಾಣಿಕತೆ ಇರಬೇಕು, ನಿಷ್ಠೆಯಿಂದ ಕೆಲಸ ಮಾಡಬೇಕು, ಕಾರ್ಯಕರ್ತರು ಒಗ್ಗಟ್ಟಾಗಿರಬೇಕು. ಇದರಿಂದ ಸಮಾಜದ ಉದ್ಧಾರವಾಗುತ್ತದೆ. ಯಾವ ಕೆಲಸವನ್ನು ಮಾಡಬೇಕಾದರೂ ದೃಢ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಎಲ್ಲಿ ಜಾಗೃತಿ ಇದೆಯೋ ಅಲ್ಲಿ ಭ್ರಷ್ಟಾಚಾರ ಕಡಿಮೆಯಾಗುತ್ತದೆ. ಅನ್ಯಾಯಕ್ಕೆ ಒಳಗಾದವರನ್ನು ಹುಡುಕಿ ಅವರಿಗೆ ನ್ಯಾಯ ಒದಗಿಸುವ ಕೆಲಸ ಆಗಬೇಕು ಎಂದು ಹೇಳಿದರು. ತ್ರಿಬಲ್ ಸಿ ಫ್ರೀ ಇಂಡಿಯಾ (ಕರೆಪ್ಷನ್, ಕ್ರೈಂ, ಕ್ಯಾಸ್ಟ್) ಮಾದರಿ ದೇಶಕ್ಕೆ ಹಿತವಾಗಲಿದೆ. ಭ್ರಷ್ಟಾಚಾರ, ಅಪರಾಧ ಪ್ರಕರಣ, ಜಾತಿ ಪದ್ಧತಿ ನಿರ್ಮೂಲನೆಯಾದರೆ ಮುಂದಿನ ದಿನಗಳಲ್ಲಿ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ರಾಜ್ಯಾಧ್ಯಕ್ಷ ಕೆ.ಪ್ರಭಾಕರ್ ಮಾತನಾಡಿ, ಮತದಾನದ ಸಂದರ್ಭ ಯಾರೂ ಭ್ರಷ್ಟಚಾರಕ್ಕೆ ಒಳಗಾಗಬಾರದು, ನಮ್ಮ ಮನಸನ್ನು ಶುದ್ಧವಾಗಿಟ್ಟುಕೊಂಡು ಭ್ರಷ್ಟ ವ್ಯವಸ್ಥೆಯಿಂದ ಮುಕ್ತರಾಗಬೇಕು ಎಂದು ಸಲಹೆ ನೀಡಿದರು. ಪ್ರತಿಯೊಬ್ಬರು ಭ್ರಷ್ಟಾಚಾರ ನಿರ್ಮೂಲನೆಯ ಉದ್ದೇಶವನ್ನು ತಿಳಿದುಕೊಳ್ಳಬೇಕು. ಕಾರ್ಯಾಚರಣೆ ಯಾವುದೇ ಇರಲಿ ನಾವು ಮೊದಲು ಸಂಘಟಿತರಾಗಬೇಕು. ಹಿರಿಯ ಅಧಿಕಾರಿಗಳ ಸಲಹೆಯನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಸದ್ಯದಲ್ಲೇ ರಾಜ್ಯಮಟ್ಟದ ಸಮಾವೇಶ ಮಾಡಲು ನಿರ್ಧರಿಸಿದ್ದು, ಜಿಲ್ಲಾ ಮಟ್ಟದ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು, ತಾಲ್ಲೂಕು ಮಟ್ಟದಲ್ಲಿ ಪದಾಧಿಕಾರಿಗಳನ್ನು ಜಾಗೃತಗೊಳಿಸಬೇಕು ಎಂದು ಹೇಳಿದರು. ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ಜಿಲ್ಲಾ ಕಾರ್ಯಾಧ್ಯಕ್ಷ ಹಾಗೂ ನಿವೃತ್ತ ಪೊಲೀಸ್ ಅಧೀಕ್ಷಕ ಚೊಕ್ಕಾಡಿ ಅಪ್ಪಯ್ಯ ಮಾತನಾಡಿ, ಭ್ರಷ್ಟಾಚಾರ ನಿರ್ಮೂಲನೆ ಮತ್ತು ಸಂಘಟನೆಯ ಕಾರ್ಯಾಚರಣೆಗೆ ಸ್ಥಳೀಯ ಅಧಿಕಾರಿಗಳ ಸಹಕಾರ ಅಗತ್ಯ. ಸಮಿತಿಗೆ ಮಹಿಳೆಯರನ್ನು ಹೆಚ್ಚಾಗಿ ಸೇರಿಸಿಕೊಳ್ಳುವಂತಾಗಬೇಕು ಎಂದರು. ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ರಾಜ್ಯ ಉಪಾಧ್ಯಕ್ಷ ಎಸ್.ವಿ.ಕುಂಬಾರ ಮಾತನಾಡಿ, ಕೇಂದ್ರ ಸರ್ಕಾರದ ನೀತಿ ಆಯೋಗದಡಿ 2011 ನವೆಂಬರ್ 20 ರಂದು ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಕಾರ್ಯಾಚರಣೆ ಸಮಿತಿ, ಇಂಡಿಯಾ ಸ್ಥಾಪನೆಯಾಗಿದ್ದು, ಇಂದು ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು. ಈ ಸಂಸ್ಥೆಯಲ್ಲಿ 1800ಕ್ಕಿಂತಲೂ ಹೆಚ್ಚು ಸದಸ್ಯರಿದ್ದು, ಕರ್ನಾಟಕದಲ್ಲಿ 200 ಪದಾಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಸಮಿತಿಯನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಲಾಗಿದ್ದು, ಕೇಂದ್ರ ಸಮಿತಿಯಲ್ಲಿ 49 ಸದಸ್ಯರಿದ್ದಾರೆ. ಈ ಸಂಸ್ಥೆ ಅಪರಾಧ ಮತ್ತು ಅಪರಾಧಿಗಳಿಂದ ಮುಕ್ತ ಸಮಾಜ ನಿರ್ಮಾಣ, ನಾಗರಿಕರಿಗೆ ಕಾನೂನಿನ ಪ್ರಕಾರ ಅಧಿಕಾರ ಮತ್ತು ಉಚಿತ ನ್ಯಾಯ ಕೊಡಿಸುವುದು, ಸಾರ್ವಜನಿಕರ ಮನಸ್ಸಿನಿಂದ ಪೊಲೀಸರ ಬಗ್ಗೆ ಇರುವ ಭಯ ಹೋಗಲಾಡಿಸಿ ಸಮಾಜದಲ್ಲಿ ಒಳ್ಳೆಯ ವಾತಾವರಣ ನಿರ್ಮಿಸುವ ಉದ್ದೇಶ ಹೊಂದಿದೆ.
ಬಡವರಿಗೆ, ಅಸಹಾಯಕರಿಗೆ ಸಹಾಯ ಮಾಡುವುದು, ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯುವುದು, ಪರಿಸರ ಮಾಲಿನ್ಯವನ್ನು ತಡೆಯುವುದು, ತಿನ್ನುವ ಪದಾರ್ಥಗಳಲ್ಲಿ ಕಲಬೆರೆಕೆ ಮಾಡುವುದನ್ನು ನಿಲ್ಲಿಸುವುದು, ಸರಕಾರಿ ಯೋಜನೆಯನ್ನು ಸಾರ್ವಜನಿಕರಿಗೆ ಒದಗಿಸುವುದು, ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದರೊಂದಿಗೆ ಜನಹಿತ ಮತ್ತು ರಾಷ್ಟ್ರಹಿತಕ್ಕಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನಾ ಸಮಿತಿಯ ಜಿಲ್ಲಾಧ್ಯಕ್ಷ ಎಂ.ಎಸ್.ಮಹೇಶ್, ರಾಷ್ಟ್ರದ ಅಭ್ಯುದಯಕ್ಕಾಗಿ ಭ್ರಷ್ಟಾಚಾರವನ್ನು ನಿಮೂರ್ಲನೆ ಮಾಡಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಸಂಘಟಿತರಾಗಬೇಕು ಮತ್ತು ನ್ಯಾಯಕ್ಕಾಗಿ ಹೋರಾಡಬೇಕು ಎಂದು ಹೇಳಿದರು.
ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನಾ ಸಮಿತಿಯ ಮೈಸೂರು ವಿಭಾಗದ ಅಧ್ಯಕ್ಷ ಎಸ್.ಗುರುಸ್ವಾಮಿ ಮಾತನಾಡಿದರು. ಕಾರ್ಯಕ್ರಮದಲ್ಲಿ ರಾಜ್ಯದ ನಾಯಕರು, ವಿವಿಧ ಜಿಲ್ಲೆಯ ಸಮಿತಿಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಜಿಲ್ಲಾ ಸಮಿತಿಯ ಪದಾಧಿಕಾರಿಗಳಾದ ಗಣೇಶ್ ಪ್ರಾರ್ಥಿಸಿ, ಪಿ.ಎಸ್.ಜನಾರ್ಧನ್ ಸ್ವಾಗತಿಸಿ, ಅಂತೋಣಿ ಡಿಸೋಜಾ ನಿರೂಪಿಸಿ, ಹೆಚ್.ಎನ್.ಸುಬ್ರಮಣ್ಯ ವಂದಿಸಿದರು. ಸಮಿತಿ ವತಿಯಿಂದ ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.









