ಸೋಮವಾರಪೇಟೆ ಜೂ.23 NEWS DESK : ಭಾರತೀಯ ಪುರಾತನ ಪದ್ಧತಿಗಳಲ್ಲಿ ಯೋಗಕ್ಕೆ ವಿಶೇಷ ಸ್ಥಾನಮಾನವಿದೆ. ಯೋಗವನ್ನು ಇಂದು ವಿದೇಶೀಗರು ಹೆಚ್ಚು ಅಭ್ಯಾಸ ಮಾಡುತ್ತಿದ್ದಾರೆ. ಆದರೆ ಭಾರತೀಯರು ಮಹತ್ವ ಅರಿಯುವಲ್ಲಿ ವಿಫಲರಾಗುತ್ತಿದ್ದಾರೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಅಭಿಪ್ರಾಯಿಸಿದರು. ಶ್ರೀ ರವಿಶಂಕರ್ ಗುರೂಜಿ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ಸೋಮವಾರಪೇಟೆ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಿದ್ದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯೋಗವು ಮನಸ್ಸು, ದೇಹ, ಉಸಿರಿನ ಹೊಂದಾಣಿಕೆಯಾಗಿದೆ. ಇದರ ಅಭ್ಯಾಸದಿಂದ ಜೀವನ ಸುಗಮವಾಗುತ್ತದೆ ಎಂದು ಅಭಿಪ್ರಾಯಿಸಿದರು. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶಿಕ್ಷಕಿ ರಾಗಿಣಿ ಪ್ರಾಣಾಯಾಮದ ಬಗ್ಗೆ ಮಾಹಿತಿ ನೀಡಿದರು. ಸಂಸ್ಥೆಯಿಂದ ಪ್ರತಿನಿತ್ಯ ಯೋಗಾಭ್ಯಾಸ, ಆನಂದೋತ್ಸವ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಶಾಲಾ ಕಾಲೇಜುಗಳಲ್ಲಿ ಯೋಗದ ಮಹತ್ವದ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಹಾನಗಲ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಯಶಾಂತ್ ಕುಮಾರ್, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯೆ ಚಂದ್ರಿಕಾ ಕುಮಾರ್, ಸಿ.ಕೆ.ಆರ್ಮಿ ಟ್ರೈನಿಂಗ್ ಅಕಾಡೆಮಿ ಸಂಸ್ಥಾಪಕ ಚಂದ್ರಕುಮಾರ್, ಕುಲದೀಪ್ ಏಜೆನ್ಸಿಯ ಮಾಲೀಕರಾದ ಅಕ್ಷತಾ ಇದ್ದರು.











