ಗುಂಡ್ಲುಪೇಟೆ NEWS DESK ಜು.2 : ಚಾಮರಾಜನಗರದ ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ 5 ಹುಲಿಗಳನ್ನು ವಿಷವಿಟ್ಟು ಕೊಂದು ಹಾಕಿದ ಘಟನೆಯ ಬೆನ್ನಲ್ಲೇ ಮತ್ತೊಂದು ಅಮಾನವೀಯ ಕೃತ್ಯ ನಡೆದಿದೆ. ಸುಮಾರು 20 ಕೋತಿಗಳು ಅಸಹಜ ರೀತಿಯಲ್ಲಿ ಸಾವನ್ನಪ್ಪಿರುವ ಪ್ರಕರಣ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ ಬೆಳಕಿಗೆ ಬಂದಿದೆ. ವಿಷ ಪ್ರಾಶನದಿಂದ ಕೋತಿಗಳು ಮೃತಪಟ್ಟಿರುವ ಕುರಿತು ಶಂಕೆ ವ್ಯಕ್ತವಾಗಿದೆ. ರಸ್ತೆ ಬದಿ ಎರಡು ಚೀಲಗಳಲ್ಲಿ ಕೋತಿಗಳ ಮೃತದೇಹಗಳು ಕಂಡು ಬಂದಿದ್ದು, ಸಾರ್ವಜನಿಕರು ನೀಡಿದ ಮಾಹಿತಿ ಹಿನ್ನೆಲೆ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಕೋತಿಗಳಿಗೆ ವಿಷವಿಟ್ಟು ಕೊಂದು ಹಾಕಿರುವ ಶಂಕೆ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹುಲಿ ಮತ್ತು ಕೋತಿಗಳ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪರಿಸರವಾದಿಗಳು ಹಾಗೂ ವನ್ಯಜೀವಿ ಪ್ರೇಮಿಗಳು ಕಠಿಣ ಶಿಕ್ಷೆಯ ಮೂಲಕ ಮಾನವನ ಅಮಾನವೀಯ ಕೃತ್ಯಗಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದ್ದಾರೆ.










