ನಾಪೋಕ್ಲು ಜು.4 NEWS DESK : ಬಲ್ಲಮಾವಟಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ತೋಟಗಳಲ್ಲಿ ಕಾಡಾನೆಗಳು ದಾಂಧಲೆ ನಡೆಸಿ ಅಪಾರ ಕೃಷಿ ಗಿಡಗಳನ್ನು ನಾಶ ಪಡಿಸಿದ್ದು, ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಕಳೆದ ಹದಿನೈದು ದಿನಗಳಿಂದ ಪೇರೂರು, ಪುಲಿಕೋಟು, ನೆಲಜಿ, ಪಂದೇಟು ಭಾಗದ ತೋಟಗಳಲ್ಲಿ ಕಾಡಾನೆಗಳ ಹಿಂಡು ದಾಂಧಲೆ ನಡೆಸಿದ್ದು, ರೈತರು ಅಪಾರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕಾಡಾನೆಗಳ ಉಪಟಳದಿಂದ ಕಾಫಿ, ಬಾಳೆ, ಅಡಿಕೆ ಸೇರಿದಂತೆ ಕೃಷಿ ಗಿಡಗಳು ಹಾನಿಗೊಳಗಾಗಿವೆ. ಕಾಡಾನೆಗಳನ್ನು ಒಂದು ಭಾಗದಿಂದ ಕಾಡಿಗೆ ಅಟ್ಟಿದರೆ ಮತ್ತೊಂದು ಭಾಗದಿಂದ ನುಸುಳುತ್ತವೆ. ಗ್ರಾಮದ ಜನರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಗ್ರಾಮದಲ್ಲಿರುವ ಕಾಡಾನೆಗಳನ್ನು ಕಾಡಿಗಟ್ಟುವ ಕೆಲಸಮಾಡುತ್ತಿದ್ದಾರೆ. ಆದರೆ ಮತ್ತೆ ಹಿಂತಿರುಗುವ ಕಾಡಾನೆಗಳು ಗಿಡಗಳನ್ನು ಧ್ವಂಸ ಮಾಡುತ್ತಿವೆ ಎಂದು ಮಣವಟ್ಟೀರ ದಯಾ ಚಿಣ್ಣಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಕಾಡಾನೆಗಳನ್ನು ಸೆರೆ ಹಿಡಿಯುವ ಮೂಲಕ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು, ನಷ್ಟ ಸಂಭವಿಸಿದ ಬೆಳೆಗಾರರಿಗೆ ಸೂಕ್ತ ಪರಿಹಾರ ಒದಗಿಸಿ ಕೊಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು.
ವರದಿ : ದುಗ್ಗಳ ಸದಾನಂದ











