ಮಡಿಕೇರಿ ಜು.9 NEWS DESK : ನಾಪೋಕ್ಲುವಿನ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳೊಂದಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ತಮ್ಮ 51ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು. ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬದವರ ಜೊತೆ ಕೇಕ್ ಕತ್ತರಿಸಿ ಸಂಭ್ರಮಿಸಿದರು. ನಂತರ ಮಾತನಾಡಿದ ಶಾಸಕರು, ಕಾರ್ಯಕ್ರಮ ಆಯೋಜಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಇಂತಹ ಶಾಲೆಯಲ್ಲಿ ಓದಲು ಅವಕಾಶ ಸಿಕ್ಕಿರುವುದು ತಮಗೆ ಅದೃಷ್ಟವೇ ಸರಿ ಎಂದು ನುಡಿದರು. ಇಲ್ಲಿನ ಉತ್ತಮ ವಾತಾವರಣ, ಪರಿಸರ ಚೆನ್ನಾಗಿದ್ದು, ಲಭ್ಯವಿರುವ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು. ಹೆಚ್ಚಿನ ವಿದ್ಯಾರ್ಥಿಗಳು ಇರುವ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಆಟದ ಮೈದಾನವನ್ನು ನಿರ್ಮಿಸಲಾಗುವುದು ಎಂದು ಇದೇ ಸಂದರ್ಭ ಭರವಸೆ ನೀಡಿದರು. ‘ವಿದ್ಯಾರ್ಥಿಗಳಲ್ಲಿ ಮುಂದಾಲೋಚನೆ ಹಾಗೂ ದೂರದೃಷ್ಟಿ ಇರಬೇಕು. ಪೋಷಕರ ಕನಸನ್ನು ನನಸು ಮಾಡಲು ಪ್ರಯತ್ನಿಸಬೇಕು. ಬದುಕು ಬದಲಾಯಿಸಲು ವಿಫುಲ ಅವಕಾಶಗಳಿದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅವರವರ ಭವಿಷ್ಯ ಅವರವರ ಕೈಯಲ್ಲಿದೆ ಎಂದ ಶಾಸಕರು, ‘ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಿನ ಯಶಸ್ಸುಗಳಿಸುತ್ತಾರೆ. ಪ್ರಮುಖವಾಗಿ ಕೆಲವೊಂದು ಕೊರತೆ ಮತ್ತು ಹಸಿವು ಇದ್ದಲ್ಲಿ ಮೇಲೆ ಬರಲು ಸಾಧ್ಯ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು ಎಂದರು.’ ಸಾಧಿಸುವ ಛಲ ಇದ್ದಲ್ಲಿ ಬದುಕನ್ನು ಹಸನು ಮಾಡಿಕೊಳ್ಳಬಹುದುಎಂದು ನುಡಿದರು. ಕಾರ್ಯಕ್ರಮದಲ್ಲಿ ಎ.ಎಸ್.ಪೊನ್ನಣ್ಣ ಅವರ ಪತ್ನಿ ಕಾಂಚನ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ತೀತೀರ ಧರ್ಮಜ ಉತ್ತಪ್ಪ, ನಾಪೋಕ್ಲು ಗ್ರಾ.ಪಂ.ಅಧ್ಯಕ್ಷರಾದ ವನಜಾಕ್ಷಿ, ಉಪಾಧ್ಯಕ್ಷರಾದ ಶಶಿ ಮಂದಣ್ಣ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲರಾದ ನೀತ, ಪಿಡಿಒ ಚೋಂದಕ್ಕಿ, ಪ್ರಮುಖರು ಇದ್ದರು. ಬಳಿಕ ಎ.ಎಸ್.ಪೊನ್ನಣ್ಣ ಅವರು ಬೇತು ಶಾಲೆಯ ವಿದ್ಯಾರ್ಥಿಗಳಿಗೆ ನೋಟು ಪುಸ್ತಕ ವಿತರಿಸಿ ಹುಟ್ಟುಹಬ್ಬ ಆಚರಿಸಿ ವಿದ್ಯಾರ್ಥಿಗಳೊಂದಿಗೆ ಸಂಭ್ರಮಿಸಿದರು.










