ಮಡಿಕೇರಿ ಜು.10 NEWS DESK : ಕುತಂತ್ರದಿಂದ ಕೊಡವರ ಹತ್ಯೆಯಾದ ದೇವಟ್ ಪರಂಬು ಸ್ಮಾರಕ ಪ್ರದೇಶದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಾಸಿಕ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಿತು. ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ದೇವಟ್ ಪರಂಬುವಿಗೆ ತೆರಳಿದ ಪ್ರಮುಖರು ಹಿರಿಯರಿಗೆ ಪುಷ್ಪನಮನ ಸಲ್ಲಿಸಿ ಕೊಡವಲ್ಯಾಂಡ್ ಪರ ಹಕ್ಕೊತ್ತಾಯ ಮಂಡಿಸಿದರು. ವಿಶ್ವಾಸಘಾತುಕ “ಕೆಳದಿ/ಪಾಲೇರಿ ರಾಜ ಪರಿವಾರದ ಅಧೀನದಲ್ಲಿದ್ದ ಕೊಡಗು ರಾಜ್ಯವನ್ನು ಪರಾಕ್ರಮಿ ಕೊಡವರು ಹೈದರ್ ಮತ್ತು ಟಿಪ್ಪುವಿನ ಆಕ್ರಮಣದಿಂದ 32ಕ್ಕೂ ಹೆಚ್ಚು ಬಾರಿ ಕಾಪಾಡಿದರು. ಈ ಸೋಲಿನ ಸೇಡು ತೀರಿಸಿಕೊಳ್ಳಲು, ಟಿಪ್ಪು ಕೊಡವ ಜನಾಂಗವನ್ನು ವಂಚನೆಯ ಮೂಲಕ ಸಂಪೂರ್ಣವಾಗಿ ನಾಶಮಾಡಲು ಸಂಚು ಹೂಡಿದನು. ಟಿಪ್ಪು ಸಂಚಿನಿಂದ ದೇವಟ್ ಪರಂಬುವಿನಲ್ಲಿ ನಡೆದ ನರಮೇಧದ ಸ್ಮರಣಾರ್ಥ ಅಂತರರಾಷ್ಟ್ರೀಯ ಸ್ಮಾರಕ ನಿರ್ಮಾಣ ಮಾಡಬೇಕು ಹಾಗೂ ಕೊಡವರ ನರಮೇಧವನ್ನು ವಿಶ್ವ ರಾಷ್ಟ್ರಸಂಸ್ಥೆ ಯುಎನ್ಒ ಅಂತರರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ಪಟ್ಟಿಯಲ್ಲಿ ಸೇರಿಸಬೇಕು ಎಂದು ನಾಚಪ್ಪ ಇದೇ ಸಂದರ್ಭ ಒತ್ತಾಯಿಸಿದರು.
ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ನೀಡಬೇಕು, ಆದಿಮಸಂಜಾತ ಏಕ-ಜನಾಂಗೀಯ ಕೊಡವ ಜನಾಂಗಕ್ಕೆ ಎಸ್ಟಿ ವರ್ಗೀಕರಣ ಕಲ್ಪಿಸಬೇಕು, ಕೊಡವ ಭೂಮಿ, ಭಾಷೆ, ಸಾಂಸ್ಕೃತಿಕ ಪರಂಪರೆಯ ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯಕ್ಕಾಗಿ ಸಾಂವಿಧಾನಿಕ ಖಾತ್ರಿ ಒದಗಿಸಬೇಕು, ಕೊಡವ ಸಾಂಪ್ರದಾಯಿಕ “ಸಂಸ್ಕಾರ ಗನ್” ಹಕ್ಕಿಗೆ ಸಾಂವಿಧಾನಿಕ ಭದ್ರತೆ ನೀಡಬೇಕು ಎಂಬ ಒತ್ತಾಯವನ್ನು ಮುಂದಿಟ್ಟುಕೊಂಡು ಕಳೆದ ಅನೇಕ ವರ್ಷಗಳಿಂದ ಸಿಎನ್ಸಿ ಸಂಘಟನೆ ಹೋರಾಟ ನಡೆಸುತ್ತಾ ಬಂದಿದೆ. ಈ ಹಕ್ಕುಗಳು ಶೀಘ್ರ ಈಡೇರಲಿ ಎಂದು ಹಿರಿಯರಲ್ಲಿ ಪ್ರಾರ್ಥಿಸಿರುವುದಾಗಿ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ರೇಖಾ ನಾಚಪ್ಪ, ಅಳ್ಮಂಡ ಜೈ ಗಣಪತಿ, ಪಟ್ಟಮಾಡ ಕುಶ, ಮಂದಪಂಡ ಮನೋಜ್ ಹಿರಿಯರಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು.











