
ಕುಶಾಲನಗರ, ಜು.15 NEWS DESK : ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಜತೆಗೆ ಆಂಗ್ಲ ಭಾಷೆಯ ಕೌಶಲ್ಯ ಬೆಳೆಸಲು ಆಂಗ್ಲ ಮಾಧ್ಯಮ ಶಿಕ್ಷಣ ಸಹಕಾರಿಯಾಗಲಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಪೋಷಕರು ಮತ್ತು ಗ್ರಾಮಸ್ಥರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸಹಕರಿಸಬೇಕು ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ( ಅಭಿವೃದ್ಧಿ) ಸಿ.ರಂಗಧಾಮಪ್ಪ ಸೋಮವಾರ ಮನವಿ ಮಾಡಿದರು. ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು (ಕೂಡ್ಲೂರು ) ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಿಂದ ಎಸ್.ಡಿ.ಎಂ.ಸಿ.ಸಹಭಾಗಿತ್ವದಲ್ಲಿ ನೂತನವಾಗಿ ಸೋಮವಾರ ಆರಂಭಿಸಲಾದ ಆಂಗ್ಲ ಮಾಧ್ಯಮ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಿಸುವ ಕಾರ್ಯಕ್ರಮಗಳ ಭಾಗವಾಗಿ ರಾಜ್ಯ ಸರ್ಕಾರವು ಇದೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪ್ರಸ್ತುತ ಬೋಧಿಸುತ್ತಿರುವ ಕನ್ನಡ ಮಾಧ್ಯಮದ ಜತೆಗೆ ಆಂಗ್ಲ ಮಾಧ್ಯಮ (ದ್ವಿ ಭಾಷಾ ಮಾಧ್ಯಮ) ತರಗತಿ ಆರಂಭಿಸಲಾಗುತ್ತಿದೆ. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 47 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಶಿಕ್ಷಣ ಆರಂಭಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಈಗ ಒಟ್ಟು 74 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ ಎಂದರು. ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಜತೆಗೆ ಆಂಗ್ಲ ಭಾಷೆಯ ಕೌಶಲ್ಯ ಬೆಳೆಸಲು ಆಂಗ್ಲ ಮಾಧ್ಯಮ ಶಿಕ್ಷಣ ಸಹಕಾರಿಯಾಗಲಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು, ಪೋಷಕರು ಮತ್ತು ಗ್ರಾಮಸ್ಥರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸಹಕರಿಸಬೇಕು ಎಂದು ಡಿಡಿಪಿಐ ರಂಗಧಾಮಪ್ಪ ಮನವಿ ಮಾಡಿದರು. ಆಂಗ್ಲ ಮಾಧ್ಯಮ ಶಿಕ್ಷಣ ಕಲಿಕಾ ತರಗತಿಗೆ ಚಾಲನೆ ನೀಡಿ ಮಾತನಾಡಿದ ಶಿಕ್ಷಣ ಪ್ರೇಮಿಯೂ ಆದ ಕೂಡ್ಲೂರು ಗ್ರಾಮದ ಪ್ರವಾಸೋದ್ಯಮಿ ಕೆ.ಕೆ.ಮಂಜುನಾಥ್ ಕುಮಾರ್, ರಾಜ್ಯ ಸರ್ಕಾರವು ಈ ಶಾಲೆಯು ಸೇರಿದಂತೆ ಆಂಗ್ಲ ಮಾಧ್ಯಮ ಆರಂಭಿಸುವ ಮೂಲಕ ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ 4, 134 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿದ್ದು, ಗುಣಮಟ್ಟದ ಶಿಕ್ಷಣಕ್ಕೆ ವಿಶೇಷ ಒತ್ತು ನೀಡುತ್ತಿದೆ ಎಂದರು. ಈ ಶಾಲೆಯ ಅಭಿವೃದ್ಧಿಗೆ ಸರ್ಕಾರದ ವತಿಯಿಂದ ಅಗತ್ಯ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು. ಕುಶಾಲನಗರ ತಾಲ್ಲೂಕಿನ ಸರ್ಕಾರಿ ಶಾಲೆಗಳ ಕಟ್ಟಡಗಳ ನಿರ್ಮಾಣ ಮತ್ತು ದುರಸ್ತಿಗೆ ಸೂಕ್ತ ಅನುದಾನ ನೀಡಲಿದೆ ಎಂದರು.
ಆಂಗ್ಲ ಮಾಧ್ಯಮ ಶಿಕ್ಷಣ ಹಣವುಳ್ಳವರ ಮೊದಲು ಕೆಲವರ ಸ್ವತ್ತಾಗಿತ್ತು. ಈಗ ಕಾಲ ಬದಲಾಗಿದೆ. ಈಗ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಿಸುತ್ತಿರುವುದರಿಂದ ಗ್ರಾಮಾಂತರ ಪ್ರದೇಶಗಳ ಬಡ ಕೂಲಿ ಕಾರ್ಮಿಕರ ಮಕ್ಕಳು ಕೂಡ ಉತ್ತಮ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ ಎಂದು ಮಂಜುನಾಥ್ ಕುಮಾರ್ ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಸರ್ಕಾರ ಕೈಗೊಂಡಿರುವ ಕ್ರಮ ಉತ್ತಮವಾದುದ್ದು. ಸೋಮವಾರಪೇಟೆ ತಾಲ್ಲೂಕಿನಲ್ಲಿ 15 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಕ್ಕೆ ಸರ್ಕಾರ
ಅನುಮತಿ ನೀಡಿದೆ. ಇದು ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ಇಂಗ್ಲೀಷ್ ಕಲಿಯುವ ಯೋಗ ಮತ್ತು ಉತ್ತಮ ಅವಕಾಶ ಲಭಿಸಿರುವುದು ಸಂತಸಕರವಾದುದು. ಈ ಶಾಲೆಯು ಉತ್ತಮವಾಗಿ ಬೆಳೆಯಲಿ. ಈಗ ಶಾಲೆಯಲ್ಲಿಆಂಗ್ಲ ಮಾಧ್ಯಮ ಆರಂಭಿಸುತ್ತಿರುವ ಕುರಿತು ಸ್ಥಳೀಯವಾಗಿ
ಜಾಗೃತಿ ಮೂಡಿಸಿದರೆ ಶಾಲೆಗೆ ಹೆಚ್ಚು ಮಕ್ಕಳನ್ನು ದಾಖಲಿಸಲು ಸಾಧ್ಯ ಎಂದರು. ಆಂಗ್ಲ ಮಾಧ್ಯಮ ಬೋಧಿಸುವ ಶಿಕ್ಷಕರಿಗೆ ಉತ್ತಮ ತರಬೇತಿ ನೀಡಲಾಗುತ್ತಿದೆ ಎಂದರು. ತಾಲ್ಲೂಕಿನ ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಆರಂಭಕ್ಕೆ ಶಾಸಕರಿಂದ ಉತ್ತಮ ಸಹಕಾರ, ಪ್ರೋತ್ಸಾಹ ಸಿಗುತ್ತಿದೆ ಎಂದು ಬಿಇಓ ಭಾಗ್ಯಮ್ಮ ತಿಳಿಸಿದರು. ಮಕ್ಕಳಿಗೆ ಲೇಖನ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿದ ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಡಿ.ಭಾಸ್ಕರ್ ನಾಯಕ್ ಈ ಶಾಲೆಯಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಆರಂಭಿಸುತ್ತಿರುವುದು ತುಂಬಾ ಸಂತಸ ಮತ್ತು ಖುಷಿ ತಂದಿದೆ ಎಂದರು. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲು ಮಾಡುವಂತೆ ಮನವಿ ಮಾಡಿದರು. ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ
ಗ್ರಾಮ ಪಂಚಾಯತಿ ಸಹಕಾರ ಮತ್ತು ಪ್ರೋತ್ಸಾಹ ನೀಡಲಾಗುವುದು ಎಂದು ಭಾಸ್ಕರ್ ನಾಯಕ್ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಎಸ್ ಡಿ ಎಂ ಸಿ ಅಧ್ಯಕ್ಷ ಪ್ರಕಾಶ್ ಮಾತನಾಡಿ, ಗ್ರಾಮಾಂತರ ಪ್ರದೇಶದ ನಮ್ಮ ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಆರಂಭಿಸಿರುವುದಕ್ಕೆ ಹೆಮ್ಮೆ ವ್ಯಕ್ತಪಡಿಸಿದರು. ಈ ಶಾಲೆಯ ಶೈಕ್ಷಣಿಕ ಪ್ರಗತಿ ಹಾಗೂ ಅಭಿವೃದ್ಧಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಪೋಷಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಎಚ್.ಎಸ್.ಸುಜಾತ , ತಮ್ಮ ಶಾಲೆಯಲ್ಲಿ ದ್ವಿಭಾಷಾ ಮಾಧ್ಯಮ ಆರಂಭಿಸಲು ಇಲಾಖೆಯ ಅಧಿಕಾರಿಗಳಿಗೆ ಸಹಕರಿಸಿವುದಕ್ಕೆ ಕೃತಜ್ಞತೆ ಸಲ್ಲಿಸಿದರು. ಸಿ.ಆರ್.ಪಿ., ಕೆ.ಶಾಂತಕುಮಾರ್, ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣದ
ಕುರಿತು ಮಾಹಿತಿ ನೀಡಿದರು. ಮಂಡಲ ಪಂಚಾಯತಿ ಮಾಜಿ ಪ್ರಧಾನ ಕೆ.ಎಸ್.ರಾಜಾಚಾರಿ ಮಾತನಾಡಿ,ತಮ್ಮ ಗ್ರಾಮದ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಿದ್ದಕ್ಕೆ ಇಲಾಖಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿ ಶಾಲೆಯ ಅಭಿವೃದ್ಧಿಗೆ ಗ್ರಾಮದ ವತಿಯಿಂದ ಸಹಕರಿಸುವುದಾಗಿ ತಿಳಿಸಿದರು.
ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಗ್ರಾ.ಪಂ.ಪಿಡಿಓ ಎಂ.ಆರ್. ಸಂತೋಷ್,
ಎಸ್ಡಿಎಂಸಿ ಉಪಾಧ್ಯಕ್ಷೆ ಪವಿತ್ರ, ಸದಸ್ಯರಾದ ಪೂಜಾ ,ಅರ್ಪಿತ , ಯಮುನ, ಸುಮತಿ, ಪ್ರಾಥಮಿಕ ಶಾಲೆಯ ಶಿಕ್ಷಕರು, ಪೋಷಕರು
ವಿದ್ಯಾರ್ಥಿಗಳು ಇದ್ದರು. ಸಿ.ಆರ್.ಪಿ., ಕೆ.ಶಾಂತಕುಮಾರ್ ನಿರ್ವಹಿಸಿದರು.








