
ನಾಪೋಕ್ಲು ಜು.31 NEWS DESK : ಗೌರಿ-ಗಣೇಶೋತ್ಸವವನ್ನು ನಾಪೋಕ್ಲು ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಸೌಹಾರ್ದತೆಯಿಂದ ಆಚರಿಸುವಂತೆ ಠಾಣಾಧಿಕಾರಿ ಪಿ.ಜಿ.ರಾಘವೇಂದ್ರ ಸೂಚಿಸಿದರು. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ಗೌರಿ ಗಣೇಶೋತ್ಸವ ಸಮಿತಿಗಳ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು. ಗಣೇಶ ಇಡುವ ಸ್ಥಳಗಳಲ್ಲಿ ಸಿ.ಸಿ ಕ್ಯಾಮೆರಾ ಅಳವಡಿಸುವುದು, ಗಣೇಶ ಪ್ರತಿಷ್ಠಾಪನೆ ಸ್ಥಳದಲ್ಲಿ ಕಾವಲುಗಾರನಾಗಿ ಒಬ್ಬರನ್ನು ನೇಮಿಸಿಕೊಂಡು ರಾತ್ರಿಯಲ್ಲಿ ತಂಗಲು ವ್ಯವಸ್ಥೆ ಮಾಡಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವುದು, ಕೆಇಬಿ ಇಲಾಖೆ, ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದುಕೊಳ್ಳುವುದು ಅಗತ್ಯ ಎಂದರು. ಅತಿಯಾದ ಧ್ವನಿವರ್ಧಕ ಬಳಸಿ ಶಬ್ದ ಮಾಲಿನ್ಯ ಮಾಡದಂತೆ ನೋಡಿಕೊಳ್ಳುವುದು, ಗೌರಿ ಗಣೇಶ ವಿಸರ್ಜನೆ ಮೆರವಣಿಗೆ ಸಮಯ ರಾತ್ರಿ 10 ಗಂಟೆ ಒಳಗಡೆ ಕಡ್ಡಾಯವಾಗಿ ಮುಗಿಸುವುದು, ಗೌರಿ ಗಣೇಶ ವಿಸರ್ಜನೆ ವೇಳೆ ಈಜುಗಾರರು ವಿಸರ್ಜನಾ ಸ್ಥಳದಲ್ಲಿ ಇರುವಂತೆ ನೋಡಿಕೊಳ್ಳುವುದು ಮುಂತಾದ ಮುನ್ನೆಚ್ಚರಿಕೆ ಕ್ರಮಗಳನ್ನು ನಿರ್ವಹಿಸುವಂತೆ ಸಲಹೆ ನೀಡಿದರು. ಈ ಸಂದರ್ಭ ವಿವಿಧ ಗೌರಿ ಗಣೇಶೋತ್ಸವ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ.








