
ಮೂರ್ನಾಡು ಆ.4 NEWS DESK : ಮೂರ್ನಾಡು ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಗೆ ಬಂದು ಐದು ವರ್ಷ ಪೂರೈಸಿದ ಪ್ರಯುಕ್ತ ಅಖಿಲ ಭಾರತೀಯ ಶಿಕ್ಷಾ ಸಮಾಗಮ ಕಾರ್ಯಕ್ರಮ ನಡೆಯಿತು. ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೇಖಾ ಬಾಲು ಉದ್ಘಾಟಿಸಿ ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ನಾವು ವಿದ್ಯೆಕಲಿತ ಶಾಲೆ ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯವಾಗಿದ್ದು, ಇಲ್ಲಿ ದೊರಕುವ ಎಲ್ಲಾ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಜಿಲ್ಲಾ ಉಪ ನಿರ್ದೇಶಕ ರಂಗಧಾಮಪ್ಪ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿಯ ಉದ್ದೇಶಗಳನ್ನು ವಿವರಿಸಿದರು. ವಿದ್ಯಾರ್ಥಿಗಳಿಗೆ ಉತ್ತಮಗುಣಮಟ್ಟದ ಶಿಕ್ಷಣವನ್ನು ಒದಗಿಸುವುದಲ್ಲದೆ, ಈ ನೀತಿಯು ಮಕ್ಕಳ ಸಮಗ್ರ ಅಭಿವೃದ್ಧಿ ಮತ್ತು ಕೌಶಲ್ಯ ಆಧಾರಿತ ಕಲಿಕೆಗೆ ಒತ್ತು ನೀಡುವುದು. ಸರ್ವರಿಗೂ ಗುಣಮಟ್ಟದ ಶಿಕ್ಷಣದೊಂದಿಗೆ ಕೌಶಲ್ಯಾಭಿವೃದ್ಧಿ, ಬಹುಭಾಷಾ ಶಿಕ್ಷಣ, ತಂತ್ರಜ್ಞಾನ ವೃತ್ತಿಪರ ಶಿಕ್ಷಣ ನೀಡುವುದೆ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು. ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ ಮಾತನಾಡಿ, ಇಲ್ಲಿನ ಶಿಕ್ಷಕರು ಪ್ರತಿಯೊಂದು ಕಾರ್ಯಕ್ರಮದಲ್ಲಿ ತುಂಬಾ ಆಸಕ್ತಿ ತೋರುತ್ತಿರುವುದು ಶ್ಲಾಘನೀಯ. ಶಿಕ್ಷಣ ಇಲಾಖೆಯ ಜೊತೆಗೆ ಸಮುದಾಯವು ಒಗ್ಗೂಡಿ ಭಾಗವಹಿಸಿದಾಗ ಮಕ್ಕಳ ಶಿಕ್ಷಣ ಮೌಲ್ಯ ಹೆಚ್ಚಾಗುತ್ತದೆ ಎಂದರು. ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮೂರ್ನಾಡು ಪ್ರಾಥಮಿಕ ಶಾಲೆಯು ಆಯ್ಕೆಯಾಗಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ 2020 ಜಾರಿಗೆ ಬಂದು ಐದು ವರ್ಷ ಪೂರೈಸಿದ ಪ್ರಯುಕ್ತ ಅಖಿಲ ಭಾರತೀಯ ಶಿಕ್ಷಾ ಸಮಾಗಮ ಕಾರ್ಯಕ್ರಮವನ್ನು ನವದೆಹಲಿಯಲ್ಲಿ ಶಿಕ್ಷಣ ಮಂತ್ರಿ ಧರ್ಮೆಂದ್ರ ಪ್ರಧಾನ್ ಉದ್ಘಾಟಿಸಿ, ಸಮಾರಂಭದ ನೇರ ಪ್ರಸಾರವನ್ನು ವಿದ್ಯಾರ್ಥಿಗಳು ಹಾಗೂ ಪೋಷಕರು ವೀಕ್ಷಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಸೂರ್ಯ ನಮಸ್ಕಾರ ಪ್ರದರ್ಶನ ಜರುಗಿತು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವೆಂಕಪ್ಪ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾಯೋಜನಾ ಉಪ ಸಮನ್ವಯಧಿಕಾರಿ ಸೌಮ್ಯ, ಸಿಆರ್ಪಿ ಉಷಾ, ವಿವಿಧ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಶಾಲಾ ಮುಖ್ಯ ಶಿಕ್ಷಕಿ ಬಿ.ಎನ್.ಪುಷ್ಪಾವತಿ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಾಲೆಯ ಎಂಟನೆ ತರಗತಿ ವಿದ್ಯಾರ್ಥಿಗಳು ಪ್ರಾರ್ಥಿಸಿ, ಮುಖ್ಯ ಶಿಕ್ಷಕಿ ಬಿ.ಎನ್.ಪುಷ್ಪಾವತಿ ಸ್ವಾಗತಿಸಿದರು. ಅತಿಥಿ ಶಿಕ್ಷಕ ರಾಜೇಶ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಚಿತ್ರ ಮತ್ತು ವರದಿ : ನಾಗರಾಜ್.ಟಿ.ಸಿ, ಮೂರ್ನಾಡು.









