
ಮಡಿಕೇರಿ ಆ.7 NEWS DESK : ಮಾಸಿಕ ಕನಿಷ್ಟ 10 ಸಾವಿರ ರೂ. ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಆಶಾ ಕಾರ್ಯಕರ್ತೆಯರಿಂದ ಆ.12 ರಿಂದ 14ರ ವರೆಗೆ ರಾಜ್ಯಾದ್ಯಂತ ಅಹೋರಾತ್ರಿ ಪ್ರತಿಭಟನೆ ನಡೆಯಲಿದೆ. ಇದರ ಭಾಗವಾಗಿ ಮಡಿಕೇರಿಯಲ್ಲಿ ಕೂಡ ಮೂರು ದಿನಗಳ ಕಾಲ ಸಮಾವೇಶ ಮತ್ತು ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯಕ್ಷೆ ಎಂ.ಉಮಾದೇವಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಯ ಕಾರಣದಿಂದ ಮಡಿಕೇರಿಯಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲು ಸಾಧ್ಯವಾಗದಿರುವುದರಿಂದ ಆ.12, 13 ಹಾಗೂ 14 ರಂದು ಕೆಲಸ ಸ್ಥಗಿತಗೊಳಿಸಲಾಗುವುದು. ಆ.12 ರಂದು ನಗರದ ಬಾಲಭವನದಿಂದ ಜನರಲ್ ತಿಮ್ಮಯ್ಯ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದರು. ಕಳೆದ ಜನವರಿಯಲ್ಲಿ ನಡೆದ ಹೋರಾಟದ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ 10 ಸಾವಿರ ರೂ. ಗೌರವಧನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಏಳು ತಿಂಗಳು ಕಳೆದರೂ ಯಾವುದೇ ಆದೇಶವಾಗಿಲ್ಲ ಎಂದು ದೂರಿದರು. ಆಶಾ ಕಾರ್ಯಕರ್ತೆಯರಿಗೆ ಅವರ ಕಾರ್ಯಕ್ಷಮತೆಯ ಆಧಾರದ ಮೇಲೆ ಕೇಂದ್ರ ಸರ್ಕಾರದಿಂದ ನೀಡುವ ಪ್ರೋತ್ಸಾಹವನ್ನು ನೇರ ಖಾತೆಗೆ ಜಮಾ ಮಾಡಬೇಕೆಂದು ಆಶಾ ಸಾಫ್ಟ್ ವ್ಯವಸ್ಥೆ ಜಾರಿ ಮಾಡಲಾಗಿದೆ. ಆದರೆ ತಾಂತ್ರಿಕ ಸಮಸ್ಯೆಯಿಂದಾಗಿ ಕಾರ್ಯಕ್ಷಮತೆಯ ಆಧಾರದ ಮೇಲೆ ನೀಡುವ ಪ್ರೋತ್ಸಾಹಧನ ಸರಿಯಾದ ಸಮಯಕ್ಕೆ ಕೈಸೇರದಂತಾಗಿದ್ದು, ಇದರಿಂದ ಕೆಲಸ ಕಳೆದುಕೊಳ್ಳುವ ಆತಂಕ ಎದುರಾಗಿದೆ ಎಂದು ಹೇಳಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಹಗಲಿರುಳು ಸೇವೆಗೈದ ಪರಿಶ್ರಮದಿಂದ ತಾಯಿ ಮರಣ, ಶಿಶು ಮರಣ ಸೇರಿದಂತೆ ಸಾಂಕ್ರಾಮಿಕ ಸಾವಿನ ಪ್ರಮಾಣ ತಗ್ಗಿರುವ ಬಗ್ಗೆ ಸರ್ಕಾರವೇ ದೃಢಪಡಿಸಿದೆ. ಅಷ್ಟೇ ಅಲ್ಲದೇ ಕೋವಿಡ್ ಕಾಲದಲ್ಲಿ ಆಶಾಗಳು ತಮ್ಮ ಜೀವನದ ಹಂಗು ತೊರೆದು ಕೋಟ್ಯಾಂತರ ಜನರ ಪ್ರಾಣ ಉಳಿಸಿದ್ದಾರೆ. ಇಂತಹ ನಿಸ್ವಾರ್ಥ ಸೇವೆಗೈಯ್ಯುತ್ತಿರುವ ಆಶಾ ಕಾರ್ಯಕರ್ತೆಯರಿಗೆ 10 ಸಾವಿರ ರೂ. ಗೌರವಧನ ನೀಡಲು ಮೀನಾಮೇಷ ಎಣಿಸುತ್ತಿರುವುದು ಖಂಡನೀಯ ಎಂದರು. ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಹೆಚ್ಚಳ ಮಾಡಬೇಕು, ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು, ಅವೈಜ್ಞಾನಿಕವಾಗಿರುವ ಕಾರ್ಯನಿರ್ವಹಣಾ ಮೌಲ್ಯಮಾಪನ ಕೈಬಿಡಬೇಕು, ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು, ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು, ನಗರ ಆಶಾಗಳಿಗೆ ರೂ.2 ಸಾವಿರ ಗೌರವಧನ ಹೆಚ್ಚಿಸಬೇಕು ಎಂದು ಎಂ.ಉಮಾದೇವಿ ಆಗ್ರಹಿಸಿದರು. ಸಂಘದ ಜಿಲ್ಲಾಧ್ಯಕ್ಷೆ ತೆಕ್ಕಡೆ ಪೂರ್ಣಿಮಾ ಮಾತನಾಡಿ, ಬಹುತೇಕ ಆಶಾ ಕಾರ್ಯಕರ್ತೆಯರು ಬಡವರಾಗಿದ್ದು, ಲೈನ್ಮನೆಗಳಲ್ಲಿ ವಾಸ ಮಾಡಿಕೊಂಡು ಈ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಹಗಲು-ರಾತ್ರಿ ಎನ್ನದೆ ಕೆಲಸ ಮಾಡುತ್ತಿದ್ದಾರೆ, ಆದರೆ ದುಡಿಮೆಗೆ ತಕ್ಕ ಫಲ ಸಿಗುತ್ತಿಲ್ಲ. ಹಲವು ಬಾರಿ ಪ್ರತಿಭಟನೆ ಮಾಡಿದ್ದರೂ ಸರ್ಕಾರ ಯಾವ ಸ್ಪಂದನೆಯನ್ನೂ ನೀಡುತ್ತಿಲ್ಲ. ಮುಖ್ಯಮಂತ್ರಿಗಳೇ ಖುದ್ದಾಗಿ ನಿಮ್ಮ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಹೇಳಿದ್ದರೂ ಇಲ್ಲಿಯವರೆಗೆ ಬೇಡಿಕೆ ಈಡೇರಿಲ್ಲ. ಇನ್ನಾದರೂ ಸರ್ಕಾರ ಮಾತುಕೊಟ್ಟಂತೆ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ಕೆ.ಎಂ.ನಾಗಮಣಿ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷೆ ಐಮುಡಿಯಂಡ ಶಾಂತಿ ಗಣೇಶ್, ಸದಸ್ಯರಾದ ಬಿ.ವಿ.ವನಿತಾ ಹಾಗೂ ಎನ್.ಶ್ರೀಮತಿ ಉಪಸ್ಥಿತರಿದ್ದರು.








