
ಮಡಿಕೇರಿ NEWS DESK ಆ.8 : ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರ ಹೆಸರಿಗೆ ಕಳಂಕ ತರುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿದೆ. ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆ ಮಡಿಕೇರಿಯಲ್ಲಿ ಪ್ರತಿಭಟನಾ ಜಾಥಾ ನಡೆಸಿತು. ನಗರದ ಗಾಂಧಿ ಮೈದಾನದಿಂದ ಜಿಲ್ಲಾಧಿಕಾರಿಗಳ ಕಚೇರಿ ಭವನದ ವರೆಗೆ ಜಾಥಾ ನಡೆಸಿದ ಪ್ರತಿಭಟನಾಕಾರರು ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ತಕ್ಷಣ ನಿಲ್ಲಿಸಬೇಕೆಂದು ಒತ್ತಾಯಿಸಿದರು. ಕಳೆದ ಕೆಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳದ ಬಗ್ಗೆ ಆಧಾರ ರಹಿತ ಆರೋಪ ಮಾಡಲಾಗುತ್ತಿದ್ದು, ಇದರಿಂದ ಭಕ್ತರಿಗೆ ನೋವುಂಟಾಗಿದೆ. ಯುವ ಜನಾಂಗದಲ್ಲಿ ಕೋಮು ಭಾವನೆ ಮೂಡುತ್ತಿದ್ದು, ಸಮಾಜದಲ್ಲಿ ಅಶಾಂತಿಯ ವಾತವರಣ ನಿರ್ಮಾಣವಾಗುತ್ತಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಗಾಂಧಿ ಮೈದಾನದಲ್ಲಿ ನಡೆದ ಜನಾಗ್ರಹ ಸಭೆಯಲ್ಲಿ ಮಾತನಾಡಿದ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯ ಮಡಿಕೇರಿ ಸಂಚಾಲಕ ಅಗೋಳಿಕಜೆ ಧನಂಜಯ ಅವರು ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯನ್ನು ನಾವು ಸ್ವಾಗತಿಸುತ್ತೇವೆ, ತನಿಖೆಯ ಮೂಲಕ ಸತ್ಯಾಂಶ ಹೊರ ಬರಲಿ. ಇದಕ್ಕೆ ಬದಲಾಗಿ ಶ್ರೀ ಕ್ಷೇತ್ರ ಮತ್ತು ಧರ್ಮಾಧಿಕಾರಿಗಳಿಗೆ ಕಳಂಕ ತರುವ ಪ್ರಯತ್ನಗಳನ್ನು ಭಕ್ತ ಸಮೂಹ ಎಂದಿಗೂ ಸಹಿಸುವುದಿಲ್ಲ ಎಂದರು. ಇತ್ತೀಚಿನ ದಿನಗಳಲ್ಲಿ ಹಿಂದು ಧಾರ್ಮಿಕ ಕೇಂದ್ರಗಳ ಮೇಲೆ ಸಾಮಾಜಿಕ ಜಾಲತಾಣಗಳ ಮೂಲಕ ನಿರಂತರ ದಾಳಿಗಳನ್ನು ಮಾಡಲಾಗುತ್ತಿದೆ. ಒಂದು ಸುಳ್ಳನ್ನು ಹತ್ತಾರು ಬಾರಿ ಹೇಳಿ ಸತ್ಯವನ್ನಾಗಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ನಾಡಿನ ಉದ್ದಗಲಕ್ಕೂ ಹತ್ತಾರು ಜನೋಪಯೋಗಿ ಯೋಜನೆಗಳನ್ನು ಕೈಗೊಂಡಿದ್ದಾರೆ. ಮಹಿಳಾ ಸ್ವಾವಲಂಬನೆ, ಬಡವರ್ಗದ ಪ್ರಗತಿ, ಶಿಕ್ಷಣ ಕೇಂದ್ರ್ರಗಳ ಪ್ರಗತಿಗೆ ಸಾಕಷ್ಟು ಒತ್ತು ನೀಡಿ ಮತ ಪಂಥಗಳನ್ನು ಮೀರಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೀಗ ಇಂತಹವರ ವಿರುದ್ಧ ಮತ್ತು ಕ್ಷೇತ್ರಕ್ಕೆ ಕಳಂಕ ತರುವ ಪ್ರಯತ್ನ ನಡೆಯುತ್ತಿದೆ. ಈ ಪ್ರಯತ್ನದ ವಿರುದ್ಧ ಭಕ್ತ ಸಮೂಹ ಸಂಘಟಿತವಾಗಿ ಮತ್ತು ಶಕ್ತಿಯುತವಾಗಿ ಎದ್ದು ನಿಲ್ಲಲಿದೆ ಎಂದು ಎಚ್ಚರಿಕೆ ನೀಡಿದರು. ವಿಶ್ವ ಹಿಂದೂ ಪರಿಷತ್ ನ ಮಾಜಿ ಜಿಲ್ಲಾಧ್ಯಕ್ಷ ಕೆ.ಎಸ್.ದೇವಯ್ಯ ಅವರು ಮಾತನಾಡಿ, ಹಿಂದೂ ಧಾರ್ಮಿಕ ಕೇಂದ್ರಗಳ ವಿರುದ್ಧದ ಅಪಪ್ರಚಾರಗಳಿಗೆ ಹಿಂದು ಬಾಂಧವರು ಎಂದಿಗೂ ಕಿವಿಗೊಡಬಾರದು ಎಂದು ಮನವಿ ಮಾಡಿದರು. ಕೊಡಗು ಜಿಲ್ಲಾ ದೈವ ನರ್ತಕರು ಮತ್ತು ದೈವ ಆರಾಧಕರ ಸಂಘದ ಅಧ್ಯಕ್ಷ ಪಿ.ಎಂ.ರವಿ ಅವರು ಮಾತನಾಡಿ, ಕಳೆದ ಕೆಲವು ವರ್ಷಗಳಿಂದ ಧರ್ಮಸ್ಥಳ ಕ್ಷೇತ್ರದ ಬಗ್ಗೆ ನಿರಂತರವಾಗಿ ಅಪಪ್ರಚಾರಗಳನ್ನು ಮಾಡಿಕೊಂಡು ಬರಲಾಗುತ್ತಿದೆ. ಭಕ್ತರು ಎಚ್ಚೆತ್ತುಕೊಳ್ಳುವ ಕಾಲ ಇದೀಗ ಸನ್ನಿಹಿತವಾಗಿದೆ ಎಂದು ಹೇಳಿದರು. ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯ ಜಿಲ್ಲಾ ಸಂಚಾಲಕ ಎ.ಟಿ.ರಂಗಸ್ವಾಮಿ ಅವರು ಮಾತನಾಡಿ, ಎಂಟುನೂರು ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿರುವ ಶ್ರೀ ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕ ತರುವ ಪ್ರಯತ್ನ ನಡೆಸುತ್ತಿರುವವರಿಗೆ ತಕ್ಕ ಶಾಸ್ತಿ ಆಗಬೇಕಿದೆ. ಕೊಡಗಿನ ಮಡಿಕೇರಿಯಲ್ಲಿ ಈ ಬಗ್ಗೆ ಆರಂಭವಾಗಿರುವ ಜನಾಗ್ರಹ ಕೂಗು ರಾಜ್ಯದ 31 ಜಿಲ್ಲೆಗಳಲ್ಲೂ ಮೊಳಗಲಿದೆ ಎಂದು ತಿಳಿಸಿದರು. ಶ್ರೀಧರ್ಮಸ್ಥಳ ಕ್ಷೇತ ಮತ್ತು ಧರ್ಮಾಧಿಕಾರಿಗಳಿಗೆ ಕಳಂಕ ತರುವಂತಹ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುವ ಮೂಲಕ ಸಮಾಜವನ್ನು ಒಡೆಯುವ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಇವರುಗಳ ಬ್ಯಾಂಕ್ ಖಾತೆಗಳನ್ನು ತನಿಖೆಗೆ ಒಳಪಡಿಸಬೇಕು, ಆರೋಪ ಮಾಡುತ್ತಿರುವವರ ಮೊಬೈಲ್, ಮನೆ ಕಚೇರಿಗಳನ್ನು ತನಿಖೆಗೆ ಪಳಪಡಿಸುವ ಮೂಲಕ ಸತ್ಯಾಂಶವನ್ನು ಬಯಲಿಗೆಳೆಯಬೇಕು. ಇದಕ್ಕಾಗಿ ತನಿಖಾ ತಂಡವೊಂದನ್ನು ರಚಿಸಿ ಕ್ರಮ ಕೈಗೊಳ್ಳಬೇಕು, ಸುಳ್ಳು ಸುದ್ದಿಗಳು ಸಮೂಹ ಮಾಧ್ಯಮಗಳಲ್ಲಿ ಪ್ರಸಾರವಾಗದಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಭಕ್ತಾಭಿಮಾನಿಗಳ ವೇದಿಕೆಯ ಪ್ರಮುಖರಾದ ಟಿ.ಎಂ.ಅಯ್ಯಪ್ಪ, ಪುಂಡರೀಕಾಕ್ಷ, ರಾಜಶೇಖರ್ ಸತೀಶ್ ಹಾಗೂ ಭಕ್ತರು ಪಾಲ್ಗೊಂಡಿದ್ದರು.









