
ಮಡಿಕೇರಿ ಆ.11 NEWS DESK : ಸೋಮವಾರಪೇಟೆ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸೇವೆ ಸಲ್ಲಿಸಿ ನಿರ್ಗಮಿತಗೊಂಡ ಬಿಇಓ ಎಸ್ ಭಾಗ್ಯಮ್ಮ ಅವರು ಸುಳ್ಯ ತಾಲ್ಲೂಕಿನಿಂದ ಆಗಮಿಸಿದ ನೂತನ ಬಿಇಓ ಎಂ.ಕೃಷ್ಣಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಬಿಇಓ ಎಂ.ಕೃಷ್ಣಪ್ಪ ತಾಲ್ಲೂಕಿನಲ್ಲಿ ಉತ್ತಮ ಶೈಕ್ಷಣಿಕ ಚಟುವಟಿಕೆಗಳ ಮೂಲಕ ಶಾಲೆಗಳಿ ಅಭಿವೃದ್ಧಿಗೆ ವಿಶೇಷ ಗಮನ ಹರಿಸಲಾಗುವುದು. ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶವನ್ನು ಈ ಹಿಂದೆ ತಾಲ್ಲೂಕಿನಲ್ಲಿ ಕೈಗೊಂಡ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಯೋಜನೆಯಂತೆ ಪರೀಕ್ಷಾ ಫಲಿತಾಂಶವನ್ನು ಉತ್ತಮಪಡಿಸಲು ವಿಶೇಷ ಗಮನಹರಿಸಲಾಗುವುದು ಎಂದರು. ಬಿಇಓ ಭಾಗ್ಯಮ್ಮ ಅವರು ತಾಲ್ಲೂಕಿನಲ್ಲಿ ಈ ಹಿಂದೆ ಕೈಗೊಂಡ ಶೈಕ್ಷಣಿಕ ಕಾರ್ಯಕ್ರಮಗಳಂತೆ ಮುಂದೆ ಕೂಡ ಎಲ್ಲರ ಸಹಕಾರದಿಂದ ಉತ್ತಮ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಶಾಲೆಗಳ ಅಭಿವೃದ್ಧಿಗೆ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಇನ್ನಷ್ಟು ಸುಧಾರಿಸಲು ಪ್ರಯತ್ನಿಸಲಾಗುವುದು ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ನಿರ್ಗಮಿತ ಬಿಇಓ ಭಾಗ್ಯಮ್ಮ, ಸೋಮವಾರಪೇಟೆ ತಾಲೂಕಿನಲ್ಲಿ ಉತ್ತಮ ಶೈಕ್ಷಣಿಕ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಪ್ರಗತಿ ಸಾಧಿಸಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಿದ ಹಿನ್ನೆಲೆಯಲ್ಲಿ ತಾಲ್ಲೂಕಿನಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗಿದ್ದು, ಇದು ತಮಗೆ ತೃಪ್ತಿ ತಂದಿದೆ ಎಂದರು. ತಮ್ಮ ಸೇವಾವಧಿಯಲ್ಲಿ ಉತ್ತಮ ಶೈಕ್ಷಣಿಕ ಕಾರ್ಯಕ್ಕೆ ಸಹಕರಿಸಿದ ಶಿಕ್ಷಕರು ಹಾಗೂ ಕಛೇರಿಯ ಸಿಬ್ಬಂದಿಗೆ ಭಾಗ್ಯಮ್ಮ ಕೃತಜ್ಞತೆ ಸಲ್ಲಿಸಿದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಸಿ.ಟಿ.ಸೋಮಶೇಖರ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಸಿ.ಕೆ.ಮಲ್ಲಪ್ಪ, ನಿವೃತ್ತ ಉಪನ್ಯಾಸಕಿ ಎಂ.ಬಿ.ತಿಲೋತ್ತಮೆ ಸೇರಿದಂತೆ ಶಿಕ್ಷಕರ ಸಂಘಟನೆಯ ಪ್ರಮುಖರು, ನಿವೃತ್ತ ಶಿಕ್ಷಕರು, ಕಛೇರಿಯ ನೌಕರ ವರ್ಗದವರು ಹಾಜರಿದ್ದರು. ಇದೇ ವೇಳೆ ನಿರ್ಗಮಿತ ಬಿಇಓ ಭಾಗ್ಯಮ್ಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 








