ಮಡಿಕೇರಿ ಸೆ.1 NEWS DESK : 1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ 60ನೇ ಪುಣ್ಯಸ್ಮರಣೆ ಸೆ.7 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡವ ಮಕ್ಕಡ ಕೂಟ, ಅಜ್ಜಮಾಡ ಒಕ್ಕ (ಕುಟುಂಬಸ್ಥರ) ಹಾಗೂ ಸ್ವಾ.ಲೀ ಅಜ್ಜಮಾಡ ದೇವಯ್ಯ ಟ್ರಸ್ಟ್ನ ಸಹಯೋಗದಲ್ಲಿ ಬೆಳಗ್ಗೆ 11 ಗಂಟೆಗೆ ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಪುಣ್ಯಸ್ಮರಣೆಯನ್ನು ಆಚರಿಸಲಾಗುವುದು ಎಂದು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಕೊಡಗು-ಮೈಸೂರು ಸಂಸದರಾದ ಯದುವೀರ್ ಒಡೆಯರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ, ಹಿರಿಯ ರಾಜಕಾರಣಿ ಎಂ.ಸಿ.ನಾಣಯ್ಯ, ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ, ಸ್ಕ್ವಾ.ಲೀ.ಅಜ್ಜಮಾಡ ಬಿ.ದೇವಯ್ಯ ಮೆಮೋರಿಯಲ್ ಟ್ರಸ್ಟ್ ನ ಅಧ್ಯಕ್ಷ ಅಜ್ಜಮಾಡ ಕಟ್ಟಿ ಮಂದಯ್ಯ, ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು, ಕೊಡವ ಮಕ್ಕಡ ಕೂಟದ ಕಾರ್ಯದರ್ಶಿ ಪುತ್ತರಿರ ಕರುಣ್ ಕಾಳಯ್ಯ, ಅಜ್ಜಮಾಡ ಒಕ್ಕದ ಅಧ್ಯಕ್ಷ ಲವ ಕುಶಾಲಪ್ಪ, ಕಾರ್ಯದರ್ಶಿ ಅಜ್ಜಮಾಡ ಬೋಪಣ್ಣ, ಖಜಾಂಚಿ ಅಜ್ಜಮಾಡ ಟಿ.ಚಂಗಪ್ಪ, ಪ್ರಮುಖರಾದ ಅಜ್ಜಮಾಡ ಕಾರ್ಯಪ್ಪ, ಅಜ್ಜಮಾಡ ಪಿ.ಸುರೇಶ್ ಬೋಪಯ್ಯ, ಅಜ್ಜಮಾಡ ಎನ್. ಬೆಳ್ಯಪ್ಪ, ಅಜ್ಜಮಾಡ ಅಯ್ಯಣ್ಣ, ಅಜ್ಜಮಾಡ ಯು.ದಿಲೀಪ್ ಬೋಪಣ್ಣ, ಸೇರಿದಂತೆ ಕೊಡವ ಮಕ್ಕಡ ಕೂಟದ ಸದಸ್ಯರು, ನಿವೃತ್ತ ಯೋಧರು, ನಗರಸಭೆ ಸದಸ್ಯರು, ಅಭಿಮಾನಿಗಳು ಹಾಗೂ ಅಜ್ಜಮಾಡ ಕುಟುಂಬಸ್ಥರನ್ನು ಆಹ್ವಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. :: ಸ್ಕ್ವಾ.ಲೀ ಅಜ್ಜಮಾಡ ಬಿ.ದೇವಯ್ಯ :: ಐದೂವರೆ ದಶಕದ ಹಿಂದೆ(1965) ಭಾರತ-ಪಾಕ್ ನಡುವೆ ನಡೆದ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ಬಲಿದಾನಗೈದ ಕೊಡಗಿನ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಕಂಚಿನ ಪ್ರತಿಮೆಯನ್ನು ಕೊಡವ ಮಕ್ಕಡ ಕೂಟ ಕೊಡಗಿನ ಮಂಜಿನ ನಗರಿ ಮಡಿಕೇರಿಯಲ್ಲಿ ಪ್ರತಿಷ್ಠಾಪಿಸುವ ಮೂಲಕ ಅಮರ ವೀರಯೋಧನ ಕೀರ್ತಿಪತಾಕೆ ಅಜರಾಮರವಾಗಿರುವಂತೆ ನೋಡಿಕೊಂಡಿದೆ. ಭಾರತೀಯ ವಾಯುಸೇನಾ ಪಡೆಯ ಸ್ಕ್ವಾಡ್ರನ್ ಲೀಡರ್ ಹುದ್ದೆಯನ್ನೇರಿ ತನ್ನ ಜೀವದ ಹಂಗನ್ನು ತೊರೆದು ಶತ್ರುಗಳೊಂದಿಗೆ ಹೋರಾಡಿದ ಅಜ್ಜಮಾಡ ದೇವಯ್ಯ ಅವರು ವೀರಮರಣವನ್ನಪ್ಪಿ 60 ವರ್ಷಗಳೇ ಕಳೆದು ಹೋಗಿದೆ.











