
ಬೆಂಗಳೂರು ಸೆ.9 NEWS DESK : ಬಹುತ್ವ ಸಂಸ್ಕೃತಿಯಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗಾಗಿ ನಮ್ಮ ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಮೂಲಕ ಸಮಾಜದ ಅಸಮಾನತೆ ಹೋಗಲಾಡಿಲು ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ ಆಯೋಜಿಸಿದ್ದ ಸಂತ ಮೇರಿ ಮಾತೆಯ ಉತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು ಮಾತನಾಡಿದರು. ದಯೆಯಿಲ್ಲದ ಧರ್ಮ ಯಾವುದಯ್ಯ-ದಯೆಯೇ ಧರ್ಮದ ಮೂಲವಯ್ಯ ಎನ್ನುವ ಬಸವಣ್ಣರ ಮಾತನ್ನು ನಾವು ಪಾಲಿಸಬೇಕು. ಧಾರ್ಮಿಕ ಸಹಿಷ್ಣುತೆ ಮತ್ತು ಸಾಮಾಜಿಕ ನ್ಯಾಯ ನಮ್ಮ ಸಂವಿಧಾನದ ಆಶಯವೂ ಆಗಿದೆ. ಬಸವಣ್ಣನವರು ಹೇಳಿದ ಮೌಲ್ಯಗಳನ್ನೇ ಗಾಂಧಿ, ಅಂಬೇಡ್ಕರ್ ಅವರೂ ಹೇಳಿದ್ದಾರೆ. ಈ ಮೌಲ್ಯಗಳಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು ಎಲ್ಲರಿಗೂ ಸಮಾನ ರಕ್ಷಣೆ ನೀಡುತ್ತದೆ ಎಂದರು. ಇದೇ ಸಂದರ್ಭ ಮಹಾಧರ್ಮಾಧ್ಯಕ್ಷರಾದ ಪೀಟರ್ ಮಚಾಡೋ ಅವರು ಮುಂದಿಟ್ಟಿರುವ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು ಎಂದು ಹೇಳಿದರು. ಮಹಾಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪೀಟರ್ ಮಚಾಡೋ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಉಪಸ್ಥಿತರಿದ್ದರು.











