ವಿರಾಜಪೇಟೆ ಸೆ.11 NEWS DESK : ವಿರಾಜಪೇಟೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಮೂರ್ನಾಡು ವಲಯದ ಮರಗೊಡು ಕಾರ್ಯಕ್ಷೇತ್ರದ ಅರೆಕಾಡು ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕಿ ಲತಾ ಮಾತನಾಡಿ, ಹದಿಹರೆಯದ ಮಕ್ಕಳು ದುಶ್ಚಟಕ್ಕೆ ಬಲಿಯಾಗುತ್ತಿದ್ದು, ಮಾದಕ ವಸ್ತುಗಳ ಸೇವನೆಯಿಂದ ಕಾಯಿಲೆಗೆ ಒಳಗಾಗುತ್ತಿದ್ದಾರೆ ಹಾಗೂ ತಮ್ಮ ಓದಿನ ಗುಣಮಟ್ಟವನ್ನು ಕಳೆದುಕೊಳ್ಳುತ್ತಿದ್ದಾರೆ. ಮಾದಕ ವಸ್ತುಗಳಾದ ಗುಟ್ಕಾ ಸೇವನೆ ಮಧ್ಯಪಾನ, ಅಮಲು ಪದಾರ್ಥಗಳ ಸೇವನೆಯಿಂದ ಆರೋಗ್ಯಕ್ಕೆ ಮಾತ್ರ ಹಾನಿಕಾರವಲ್ಲದೆ ನಮ್ಮ ಪರಿವಾರಕ್ಕೂ ಹಾನಿಯನ್ನು ಉಂಟುಮಾಡುತ್ತದೆ. ಈ ರೀತಿಯ ಮಾದಕ ವಸ್ತುಗಳ ಸೇವನೆಯಿಂದ ಕ್ಯಾನ್ಸರ್ ಕಾಯಿಲೆಗಳು ಬರಬಹುದು. ಒಂದು ವೇಳೆ ಯಾರಾದರೂ ವ್ಯಸನಕ್ಕೆ ಒಳಗಾದಲ್ಲಿ ಅಥವಾ ಈ ರೀತಿಯ ಅಮಲು ಪದಾರ್ಥಗಳ ಸೇವನೆಯನ್ನು ಕಂಡಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮಕ್ಕಳಿಗೆ ಮನವರಿಕೆ ಮಾಡಿದರು. ವಲಯ ಮೇಲ್ವಿಚಾರಕರಾದ ಪ್ರತಾಪ್ ದೇವಾಡಿಗ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆಯಿಂದ ವಿದ್ಯಾರ್ಥಿಗಳು ಆಗುತ್ತಿರುವ ಆರೋಗ್ಯ ಸಮಸ್ಯೆ ಕುರಿತು ಜಾಗೃತಿ ಮೂಡಿಸಿದರು. ಮಾದಕ ವಸ್ತು ಸೇವನೆಯಿಂದ ಆಗುವ ಆರೋಗ್ಯ ಸಮಸ್ಯೆ, ಕ್ಯಾನ್ಸರ್ ಒಳಗದ ಜನಗಳ ಪರಿಸ್ಥಿತಿಯನ್ನು ವಿವರಣೆ ನೀಡುವ ಮೂಲಕ ಮಾದಕ ವಸ್ತು ಮುಕ್ತ ವಿದ್ಯಾರ್ಥಿ ಜೀವನ ನಮ್ಮದಾಗಲಿ ಎಂದು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ನಂತರ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪದ್ಮಾವತಿ, ಯೋಜನೆ ಕಾರ್ಯಕ್ರಮಗಳು ಹಾಗೂ ಜನ ಮಂಗಳ ಕಾರ್ಯಕ್ರಮಗಳ ಬಗ್ಗೆ ಉತ್ತಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು, ಯೋಜನೆಯ ಎಲ್ಲಾ ಕಾರ್ಯಕ್ರಮಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸೇವಾ ಪ್ರತಿನಿಧಿ ಲತಾ ಬಿ.ಎಸ್. ಶಾಲೆಯ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.











