
ಮಡಿಕೇರಿ NEWS DESK ಸೆ.16 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 2024-25ನೇ ಸಾಲಿನಲ್ಲಿ 78 ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ಮುಂದೆಯೂ ಹಲವು ಕಾರ್ಯಕ್ರಮಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 2024-25ನೇ ಸಾಲಿನಲ್ಲಿ ಎಂಟು ಜಿಲ್ಲಾ ಸಮಿತಿ ಹಾಗೂ ತಾಲ್ಲೂಕು, ಹೋಬಳಿ ಮಟ್ಟದಲ್ಲಿಯೂ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿದೆ ಎಂದರು. ಕೊಡಗಿನ ದಾನಿಗಳು ನೀಡಿದ ದತ್ತಿನಿಧಿಯಿಂದ 51 ಕಾರ್ಯಕ್ರಮಗಳನ್ನು ನಡೆಸಲಾಗಿದ್ದು, ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ.ವಿಶ್ವೇಶ್ವರಯ್ಯ, ಸರ್ ಮಿರ್ಜಾ ಇಸ್ಮಾಯಿಲ್ ದಿನಾಚರಣೆ ಅಲ್ಲದೆ ಜಿಲ್ಲೆಯ ತಾಲ್ಲೂಕು, ಹೋಬಳಿ ಸಮಿತಿಗಳು ಸೇರಿ ಹತ್ತಕ್ಕೂ ಹೆಚ್ಚು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳನ್ನು ನಡೆಸಿದೆ ಎಂದು ತಿಳಿಸಿದರು. ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಬಂದ ಕನ್ನಡ ಜೋತಿಹೊತ್ತ ರಥವನ್ನು ಜಿಲ್ಲೆಯ ಗಡಿಭಾಗ ಸಂಪಾಜೆಯಲ್ಲಿ ಸ್ವಾಗತಿಸಿ, ಮಡಿಕೇರಿ, ವಿರಾಜಪೇಟೆ, ಪೊನ್ನಂಪೇಟೆ ಕುಶಾಲನಗರ ಹಾಗೂ ಸೋಮವಾರಪೇಟೆ ತಾಲ್ಲೂಕುಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ನಡೆಸಿ ಬೀಳ್ಕೊಡಲಾಯಿತು. ಕುಶಾಲನಗರದಲ್ಲಿ 5 ಸಾವಿರ ಮಂದಿ ಕನ್ನಡ ನಾಡಗೀತೆ, ರೈತ ಗೀತೆ ಮತ್ತು ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡನ್ನು ಏಕಕಂಠದಲ್ಲಿ ಹಾಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು. ಜಿಲ್ಲೆಯ ಪೊಲೀಸ್ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಜಾನಪದ, ಭಾವಗೀತೆ ಮತ್ತು ಹಳೆಯ ಕನ್ನಡ ಚಿತ್ರಗೀತೆಗಳ ಸ್ಪರ್ಧೆ ಆಯೋಜಿಸಲಾಗಿತ್ತು. ಜಿಲ್ಲೆಯ ಕವಿ ಮತ್ತು ಸಾಹಿತಿಗಳ ಹತ್ತಕ್ಕೂ ಹೆಚ್ಚು ಪುಸ್ತಕಗಳನ್ನು ಬಿಡುಗಡೆಗೊಳಿಸಲಾಗಿದ್ದು, ಮಡಿಕೇರಿಯ ಸುದರ್ಶನ ವೃತ್ತದ ಬಳಿಯಲ್ಲಿರುವ ಸಾಹಿತ್ಯ ಪರಿಷತ್ತಿಗೆ ಸೇರಿದ 60 ಸೆಂಟು ಜಾಗದಲ್ಲಿ ಕನ್ನಡ ಸಾಹಿತ್ಯ ಭವನ ರಚಿಸುವ ನಿಟ್ಟಿನಲ್ಲಿ ಸಚಿವರು, ಶಾಸಕರು, ಮಾಜಿ ಶಾಸಕರು ಹಾಗೂ ಪ್ರತಿನಿಧಿಗಳು, ಸಾಹಿತ್ಯ ಪರಿಷತ್ತು ಪದಾಧಿಕಾರಿಗಳು ಸೇರಿದಂತೆ ಕನ್ನಡ ನಿರ್ಮಾಣ ಸಮಿತಿ ರಚಿಸಲಾಗಿದೆ ಎಂದರು. ದತ್ತಿನಿಧಿಗಳನ್ನು ಶಾಲಾ ಕಾಲೇಜುಗಳಲ್ಲಿಯೇ ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ಪಾಠ ಪ್ರವಚನದೊಂದಿಗೆ ಕನ್ನಡ ನಾಡಿನ ನಾಡು, ನುಡಿ, ಆಚಾರ, ವಿಚಾರ, ಪರಂಪರೆ, ಸಾಹಿತ್ಯ, ಸಂಸ್ಕೃತಿಯನ್ನು ಪರಿಚಯಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಸಾಹಿತಿಕ ಬೆಳವಣಿಗೆಗೆ ಪ್ರಬಂಧ ಸ್ಪರ್ಧೆಗಳು, ಭಾಷಣ, ಕವಿಗೋಷ್ಠಿ, ಜಾನಪದ ನೃತ್ಯ ಕಾರ್ಯಕ್ರಮ, ಜಾನಪದ ಗೀತೆ ಗಾಯನ, ಕನ್ನಡ ಗೀತಗಾಯನ ನಡೆಸಲಾಗಿದೆ. ಈಗಿನ ಸಮಿತಿ ಅಧಿಕಾರ ವಹಿಸಿಕೊಳ್ಳುವ ಸಮಯದಲ್ಲಿ 19 ದತ್ತಿನಿಧಿಗಳು ಜಿಲ್ಲಾ ಸಮಿತಿಯಲ್ಲಿದ್ದು, ಈಗ ಎಲ್ಲರ ಸಹಕಾರದೊಂದಿಗೆ ದತ್ತಿನಿಧಿಯನ್ನು 42ಕ್ಕೆ ಏರಿಕೆ ಮಾಡಲಾಗಿದೆ ಎಂದು ಹೇಳಿದರು. ಕನ್ನಡ ಮಾಧ್ಯಮದಲ್ಲಿ 10ನೇ ತರಗತಿ ಮತ್ತು ಪದವಿಪೂರ್ವ ಪರೀಕ್ಷೆಗಳಲ್ಲಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಿ ಸನ್ಮಾನಿಸಲಾಗಿದೆ. ಮುಂದಿನ ಸಾಲಿನಲ್ಲಿ ಈ ಎಲ್ಲಾ ಪ್ರತಿನಿಧಿ ಕಾರ್ಯಕ್ರಮಗಳೊಂದಿಗೆ ವಿಶೇಷವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಥೆ, ನಾಟಕ ಸ್ಪರ್ಧೆ, ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪ್ರಬಂಧ, ಕವಿ ಗೋಷ್ಠಿ ಸ್ಪರ್ಧೆ ಏರ್ಪಡಿಸಲಾಗುವುದು. ಈ ವರ್ಷ ನವೆಂಬರ್ ನಲ್ಲಿ ಜಿಲ್ಲಾ ತಾಲ್ಲೂಕು ಮತ್ತು ಹೋಬಳಿಗಳಲ್ಲಿ ರಾಜ್ಯೋತ್ಸವ ಕಾರ್ಯಕ್ರಮವನ್ನು ತಿಂಗಳು ಪೂರ್ತಿ ನಡೆಸುವಂತೆ ಕಾರ್ಯಕ್ರಮ ರೂಪಿಸಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಸಮ್ಮೇಳನಗಳನ್ನು ಕೂಡ ನಡೆಸುವಂತೆ ತೀರ್ಮಾನಿಸಲಾಗಿದೆ ಎಂದು ಕೇಶವ ಕಾಮತ್ ತಿಳಿಸಿದರು. ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಸರ್ಕಾರಿ ಶಾಲೆಗಳ ಮಕ್ಕಳನ್ನು ಯಾವುದೇ ಹೊರಗಿನ ಕಾರ್ಯಕ್ರಮಗಳಿಗೆ ಪ್ರೇಕ್ಷಕರಾಗಿ ಕರೆದುಕೊಂಡು ಹೋಗುವಂತ್ತಿಲ್ಲ ಎಂಬ ಸರ್ಕಾರದ ಸುತ್ತೋಲೆ ಹೋರಡಿಸಿರುವುದು ಸರಿಯಾದ ಕ್ರಮವಲ್ಲ. ವಿದ್ಯಾರ್ಥಿಗಳಿಗೆ ಸಾಹಿತ್ಯ ಕಲಿಕೆಯ ಒಂದು ಭಾಗವಾಗಿರುವುದರಿಂದ ಕನ್ನಡ ಪರ ಕಾರ್ಯಕ್ರಮಗಳಿಗೆ ಭಾಗವಹಿಸಲು ಸರ್ಕಾರ ಒತ್ತು ನೀಡಬೇಕು ಎಂದರು. ಸಾಹಿತ್ಯದಿಂದ ಯುವ ಪೀಳಿಗೆ ದೂರವಾಗುತ್ತಿದೆ ಎಂದ ಟಿ.ಪಿ.ರಮೇಶ್, ಯುವ ಪೀಳಿಗೆಗೆ ಸಂಬಂಧಿಸಿದಂತೆ ಸಮ್ಮೇಳ, 50 ವರ್ಷ ಮೇಲ್ಪಟ್ಟವರಿಗೆ ಕವಿಗೋಷ್ಠಿ, ಲೇಖಕರು ಮತ್ತು ಬರಹಗಾರರಿಗೆ ಜಿಲ್ಲಾಮಟ್ಟದ ಕಾರ್ಯಾಗಾರ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಜಿಲ್ಲಾ ಮಟ್ಟದ ಸಮ್ಮೇಳವನ್ನು ನಡೆಸಲು ನಿರ್ಧರಿಸಲಾಗಿದೆ. ಸಾರ್ವಜನಿಕರು ಸಾಹಿತ್ಯ ಪರ ಕೆಲಸಕ್ಕೆ ಸಹಕಾರ ನೀಡಬೇಕು ಎಂದರು. ಈಗಾಗಲೇ ಐಗೂರಿನಲ್ಲಿ ಜಿಲ್ಲಾ ಸಮ್ಮೇಳವನ್ನು ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಸರ್ಕಾರ ಸಮ್ಮೇಳನಕ್ಕೆ ಅನುದಾನ ಬಿಡುಗಡೆಗೆ ವಿಳಂಬ ಮಾಡುತ್ತಿರುವುದರಿಂದ ಕಳೆದ ಎರಡು ವರ್ಷಗಳಿಂದ ತಾಲ್ಲೂಕು ಹಾಗೂ ಜಿಲ್ಲಾ ಸಮ್ಮೇಳವನ್ನು ನಡೆಸಲು ಸಾಧ್ಯವಾಗಿಲ್ಲ. ಆದ್ದರಿಂದ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಈ ಬಗ್ಗೆ ಗಮನ ಹರಿಸಿ, 2025-26ನೇ ಸಾಲಿನ ಅನುದಾನವನ್ನು ಶೀಘ್ರ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಗೌರವ ಕಾರ್ಯದರ್ಶಿ ಎಸ್.ಐ.ಮುನೀರ್ ಅಹ್ಮದ್ ಮಾತನಾಡಿ, ಈ ವರ್ಷ ವಿಶೇಷವಾಗಿ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗಿದ್ದು, ಅದರಲ್ಲಿ ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ ವಿಶೇಷವಾಗಿದೆ. ಅಲ್ಲದೆ ಡಾ. ಎಂ.ಜಿ.ನಾಗರಾಜ್ ಮತ್ತು ಸುಲೋಚನಾ ದಂಪತಿಗಳ ಸಾಹಿತ್ಯಕ ಕಾರ್ಯಕ್ರಮದಲ್ಲಿ ಕೊಡಗಿನ ದೇವರ ಕಾಡು, ಪುರಾತತ್ವ ವಿಚಾರಗಳು, ಸಾಹಿತ್ಯ, ಕಲೆ, ಜಾನಪದ, ಪರಿಸರ ಕುರಿತು ವಿಚಾರಗೋಷ್ಠಿ, ಕವಿಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ರೇವತಿ ರಮೇಶ್ ಹಾಗೂ ಸಂಘಟನಾ ಕಾರ್ಯದರ್ಶಿ ವಾಸು ರೈ ಉಪಸ್ಥಿತರಿದ್ದರು.








