ಮೈಸೂರು ಅ.6 NEWS DESK : ಇತ್ತೀಚೆಗೆ ನಿಧನರಾದ ಸಾರಸ್ವತ ಲೋಕದ ಧ್ರುವತಾರೆ ಡಾ. ಎಸ್.ಎಲ್. ಭೈರಪ್ಪನವರ ನಿವಾಸಕ್ಕೆ ಮೈಸೂರು-ಕೊಡಗು ಸಂಸದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ, ಪತ್ನಿ, ಪುತ್ರರಿಗೆ ಸಾಂತ್ವನ ಹೇಳಿದರು. ಮೈಸೂರಿನ ಕುವೆಂಪು ನಗರದಲ್ಲಿರುವ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ ಸಂಸದ ಯದುವೀರ್, ಭೈರಪ್ಪ ಅವರ ಪತ್ನಿ ಸರಸ್ವತಮ್ಮ ಹಾಗೂ ಪುತ್ರ ರವಿಶಂಕರ್ರೊಂದಿಗೆ ಸಂವಾದ ನಡೆಸಿದರು. ಇದೇ ಸಂದರ್ಭದಲ್ಲಿ ಸಾಂತ್ವನ ಕೂಡ ಹೇಳಿದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್ ಒಡೆಯರ್, ದಸರಾ ಹಾಗೂ ಕೆಲವು ಧಾರ್ಮಿಕ ವಿಧಿ-ವಿಧಾನಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ನಮ್ಮ ಮೈಸೂರಿನ ಸಾಹಿತ್ಯ ರತ್ನ ಡಾ. ಎಸ್.ಎಲ್. ಭೈರಪ್ಪ ಅವರ ನಿವಾಸಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ. ಈಗ ಎಲ್ಲ ಪ್ರಕ್ರಿಯೆ ಪೂರ್ಣಗೊಂಡ ನಂತರ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ತಿಳಿಸಿದ್ದೇವೆ ಎಂದು ಹೇಳಿದ್ದಾರೆ. ಕರ್ನಾಟಕಕ್ಕೆ ಮತ್ತು ವಿಶೇಷವಾಗಿ ಮೈಸೂರು ಭಾಗಕ್ಕೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರಕಿಸಿಕೊಟ್ಟಿರುವ ಎಸ್.ಎಲ್. ಭೈರಪ್ಪನವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಯಿತು ಎಂದು ಯದುವೀರ್ ತಿಳಿಸಿದ್ದಾರೆ. ಮೈಸೂರಿನ ನಗರ ಕೇಂದ್ರ ಗ್ರಂಥಾಲಯಕ್ಕೆ ಡಾ. ಎಸ್.ಎಲ್. ಭೈರಪ್ಪ ಅವರ ಹೆಸರು ಮರು ನಾಮಕರಣ ಮಾಡಲು ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದೆ ಎಂದು ಸಂಸದರು ತಿಳಿಸಿದ್ದಾರೆ. ಗ್ರಂಥಾಲಯದ ಆವರಣದಲ್ಲಿ ಭೈರಪ್ಪನವರ ಜೀವನ ಚರಿತ್ರೆ, ಸಾಹಿತ್ಯ ಕೃತಿಗಳನ್ನು ಪ್ರತಿಬಿಂಬಿಸುವ ಶಾಶ್ವತ ಸ್ಮಾರಕವನ್ನು ನಿರ್ಮಿಸಬೇಕು ಎಂದು ಕೂಡ ಕರ್ನಾಟಕ ಸರ್ಕಾರಕ್ಕೆ ವಿನಂತಿಸಿದ್ದೇವೆ ಎಂದು ಭೈರಪ್ಪನವರ ಪತ್ನಿ ಹಾಗೂ ಪುತ್ರರಿಗೆ ಮಾಹಿತಿ ನೀಡಲಾಯಿತು ಎಂದು ಸ್ಪಷ್ಟಪಡಿಸಿದ್ದಾರೆ. ಎಸ್.ಎಲ್. ಭೈರಪ್ಪ ಅವರ ಅಗಲಿಕೆ ಇಡೀ ನಾಡಿಗೆ ತೀವ್ರ ನೋವುಂಟು ಮಾಡಿದೆ. ಅವರು ನಮ್ಮನ್ನು ಭೌತಿಕವಾಗಿ ಅಗಲಿದ್ದರು, ಅವರ ಅಕ್ಷರಗಳ ಮೂಲಕ ಅಮರರಾಗಿದ್ದಾರೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.











