
ಮಡಿಕೇರಿ ಅ.8 NEWS DESK : ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರ ಮೇಲೆ ಪಾದರಕ್ಷೆ ಎಸೆಯಲು ಪ್ರಯತ್ನಿಸಿದ ಪ್ರಕರಣವನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಬೇಕು ಮತ್ತು ಕೃತ್ಯವೆಸಗಿದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರ ಮೇಲಿನ ದಾಳಿ ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವ ಮೂಲಕ ದಾಳಿಯ ಪ್ರಯತ್ನದ ಹಿಂದಿರುವ ಹುನ್ನಾರವನ್ನು ಬಯಲಿಗೆಳೆಯಬೇಕು ಮತ್ತು ಕೃತ್ಯವೆಸಗಿದ ವಕೀಲನನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದು ಮುಖ್ಯ ನ್ಯಾಯಮೂರ್ತಿಯವರ ಮೇಲೆ ನಡೆದ ದಾಳಿಯಲ್ಲ, ಬದಲಾಗಿ ಭಾರತದ ಸಂವಿಧಾನದ ಮೇಲೆ ನಡೆದ ದಾಳಿಯಾಗಿದೆ. ದೇಶದಲ್ಲಿ ಸಂವಿಧಾನ ಜಾರಿಯಾದಾಗ ಕೆಲವು ಸನಾತನವಾದಿಗಳು ಇದನ್ನು ವಿರೋಧಿಸಿದ್ದರು. ದಲಿತನೊಬ್ಬ ಮುಖ್ಯ ನ್ಯಾಯಮೂರ್ತಿಯ ಪೀಠದಲ್ಲಿ ಕುಳಿತು ನ್ಯಾಯ ನೀಡುವುದನ್ನು ಒಪ್ಪದ ಮನೋಸ್ಥಿತಿಗಳು ಇಂದಿಗೂ ಇರುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಯ ದೇಶದ ಕಾನೂನಿನ ಮೇಲೆ ಅಪಾರ ಗೌರವ ಹೊಂದಿರುವ ನ್ಯಾಯಮೂರ್ತಿ ಗವಾಯಿ ಅವರು ಉತ್ತರ ಪ್ರದೇಶ ಸರಕಾರದ ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ನೀಡಿದ್ದರು. ಅಲ್ಲದೆ ಯಾವುದೇ ಪ್ರಕರಣವಿದ್ದರೂ ಸಂವಿಧಾನದಡಿ ಆದೇಶ ನೀಡುತ್ತಿದ್ದರು. ಇದನ್ನು ಸಹಿಸದ ವ್ಯಕ್ತಿಗಳು ದಾಳಿ ನಡೆಸುವಂತಹ ಹೇಡಿತನದ ಕೃತ್ಯಕ್ಕೆ ಕೈ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ದೇಶದ ಸಂವಿಧಾನ ಈ ರೀತಿಯ ಬೆಳವಣಿಗೆಗಳಿಗೆ ಎಲ್ಲೂ ಅವಕಾಶ ನೀಡಿಲ್ಲ. ತಪ್ಪೆಸಗಿದವರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಮುಂದಿನ ದಿನಗಳಲ್ಲಿ ಈ ರೀತಿಯ ಕೃತ್ಯಗಳು ನಡೆಯದಂತೆ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗಾಯತ್ರಿ ನರಸಿಂಹ ಒತ್ತಾಯಿಸಿದ್ದಾರೆ.








