
ಮಡಿಕೇರಿ ಅ.15 NEWS DESK : ಕೊಡಗು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಸಹಯೋಗದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಆರ್ ಆರ್ ಸಿ ಘಟಕದ ವತಿಯಿಂದ ಮಡಿಕೇರಿಯಲ್ಲಿ ಹೆಚ್ಐವಿ ಏಡ್ಸ್ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಎಚ್ಐವಿ ಏಡ್ಸ್ ಹರಡುವಿಕೆ, ಅದರ ಪರೀಕ್ಷೆ ಮತ್ತು ಚಿಕಿತ್ಸೆ ಸೇವೆಗಳು ಹಾಗೂ ಸರ್ಕಾರವು ಹಮ್ಮಿಕೊಂಡಿರುವ ವಿಶೇಷ ಕಾರ್ಯಕ್ರಮಗಳ ಬಗ್ಗೆ ಬೀದಿ ನಾಟಕ ಪ್ರದರ್ಶಿಸುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆಸ್ಪತ್ರೆ ಮಡಿಕೇರಿಯ ಆಪ್ತ ಸಮಾಲೋಚಕಿ ಅನಿತಾ ಕುಮಾರಿ, ಎನ್ ಎಸ್ ಎಸ್ ಯೋಜನಾಧಿಕಾರಿಗಳಾದ ಡಾ.ಕೆ.ಶೈಲಶ್ರೀ, ಅಲೋಕ್ ಬಿ.ಜೈ , ವಿದ್ಯಾರ್ಥಿ ನಾಯಕರು ಹಾಗೂ ಸ್ವಯಂಸೇವಕರು ಭಾಗವಹಿಸಿದರು. ಸ್ವಯಂಸೇವಕರು ಬಿತ್ತಿ ಪತ್ರಗಳು ಹಾಗೂ ಪೋಸ್ಟರ್ ಗಳೊಂದಿಗೆ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡರು.









