
ಮಡಿಕೇರಿ NEWS DESK ಅ.15 : ಪಂಚಾಯತ್ ರಾಜ್, ಗ್ರಾಮೀಣ ಅಭಿವೃದ್ಧಿ ಮತ್ತು ಐಟಿ, ಬಿಟಿ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಇಲಾಖೆಯ ವೈಫಲ್ಯಗಳನ್ನು ಮರೆಮಾಚಲು ಹಾಗೂ ಕಾಂಗ್ರೆಸ್ ಹೈಕಮಾಂಡ್ ನ್ನು ಮೆಚ್ಚಿಸಲು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿರುದ್ಧ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಅವರು ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಆರ್ಎಸ್ಎಸ್ ವಿರುದ್ಧ ಪ್ರಿಯಾಂಕ್ ಖರ್ಗೆ ಅವರು ನೀಡಿರುವ ಹೇಳಿಕೆಯನ್ನು ತೀವ್ರವಾಗಿ ಖಂಡಿಸುವುದಾಗಿ ತಿಳಿಸಿದ್ದಾರೆ. ಅತ್ಯಂತ ಪ್ರಮುಖ ಖಾತೆಗಳನ್ನು ಹೊಂದಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಮರ್ಪಕವಾಗಿ ಕಾರ್ಯನಿರ್ವಹಿಸಲಾಗದೆ ವೈಫಲ್ಯವನ್ನು ಕಾಣುತ್ತಿದ್ದಾರೆ. ತಮ್ಮ ಇಲಾಖೆಗಳ ನ್ಯೂನತೆಯನ್ನು ಮರೆಮಾಚಲು ಮತ್ತು ಚರ್ಚೆಯ ದಿಕ್ಕನ್ನು ಬದಲಾಯಿಸುವ ಉದ್ದೇಶದಿಂದ ಆರ್ಎಸ್ಎಸ್ ವಿರುದ್ಧ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ, ಅಲ್ಲದೆ ಕಾಂಗ್ರೆಸ್ ನಾಯಕರನ್ನು ಮೆಚ್ಚಿಸುವುದಕ್ಕೋಸ್ಕರ ಅದನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಇವರು ಆರ್ಎಸ್ಎಸ್ ವಿರುದ್ಧ ಹಲವು ಬಾರಿ ದ್ವೇಷ ಕಾರಿದ್ದಾರೆ. ಆರ್ಎಸ್ಎಸ್ ಏನು ಮಾಡಿದೆ ಮತ್ತು ಏನು ಮಾಡುತ್ತಿದೆ ಎನ್ನುವ ಬಗ್ಗೆ ತಿಳಿದುಕೊಳ್ಳುವ ನೈಜ ಕಾಳಜಿ ಇದ್ದರೆ ಸಂಘದ ಶಾಖೆಗೆ ಬರಲಿ ಎಂದು ಸವಾಲು ಹಾಕಿರುವ ರಾಕೇಶ್ ದೇವಯ್ಯ, ಕಳೆದ 25 ತಿಂಗಳ ಅವಧಿಯಲ್ಲಿ ಪ್ರಿಯಾಂಕ್ ಖರ್ಗೆ ಅವರು ತಮ್ಮ ಇಲಾಖೆಯ ಮೂಲಕ ಮಾಡಿರುವ ಸಾಧನೆಯನ್ನು ಸಾರ್ವಜನಿಕರ ಮುಂದಿಡಬೇಕು ಎಂದು ಒತ್ತಾಯಿಸಿದ್ದಾರೆ. *ಪಂಚಾಯ್ತಿಗಳಲ್ಲಿ ಹಿನ್ನಡೆ* ಪಂಚಾಯತ್ ರಾಜ್ ಇಲಾಖೆಯ ಜವಾಬ್ದಾರಿ ತೆಗೆದುಕೊಂಡ ನಂತರ ಕೊಡಗಿನ ಹಲವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಬೇರೆಕಡೆಗೆ ವರ್ಗಾವಣೆ ಮಾಡಿದ್ದಾರೆ. ಹೊಸದಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ನೇಮಕ ಮಾಡದೆ ಇರುವುದರಿಂದ ಸಾರ್ವಜನಿಕರ ಕೆಲಸ, ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತಿದೆ. ಎರಡು, ಮೂರು ಪಂಚಾಯ್ತಿಗಳಿಗೆ ಓರ್ವ ಅಭಿವೃದ್ಧಿ ಅಧಿಕಾರಿಯನ್ನು ನಿಯೋಜಿಸಲಾಗುತ್ತಿದ್ದು, ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದಾರೆ. ಇದರ ನಡುವೆಯೇ ಮತ್ತೆ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಪ್ರಕ್ರಿಯೆ ನಡೆದಿದೆ. ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದ ಯಾವ ಹೊಸ ಯೋಜನೆಗಳು ಕೂಡ ಕೊಡಗಿನ ಗ್ರಾಮಗಳಿಗೆ ತಲುಪಿಲ್ಲ ಎಂದು ಆರೋಪಿಸಿದ್ದಾರೆ. *ಐಟಿ ಬಿಟಿ ಸಮಸ್ಯೆ* ಬೆಂಗಳೂರಿನಲ್ಲಿರುವ ಐಟಿ, ಬಿಟಿ ಸಂಸ್ಥೆಗಳು ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದು, ಹೂಡಿಕೆದಾರರು ರಾಜ್ಯದಿಂದ ಹೊರಹೋಗಬೇಕಾಗುತ್ತದೆ ಎನ್ನುವ ಮುನ್ಸೂಚನೆ ನೀಡುತ್ತಿದ್ದಾರೆ. ತಮ್ಮ ಇಲಾಖೆಗಳ ತುಂಬಾ ವೈಫಲ್ಯಗಳನ್ನೇ ತುಂಬಿಕೊಂಡಿರುವ ಪ್ರಿಯಾಂಕ್ ಖರ್ಗೆ ಅವರು ಜನರ ಹಾದಿ ತಪ್ಪಿಸುವ ಉದ್ದೇಶದಿಂದ ದೇಶಭಕ್ತ ಸಂಘಟನೆ ಆರ್ಎಸ್ಎಸ್ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆ ಮೂಲಕ ಕ್ಷುಲ್ಲಕ ರಾಜಕಾರಣವನ್ನು ಪ್ರದರ್ಶಿಸಿದ್ದಾರೆ ಎಂದು ಟೀಕಿಸಿರುವ ರಾಕೇಶ್ ದೇವಯ್ಯ ಅವರು, ತಮ್ಮ ಇಲಾಖೆಗಳ ನ್ಯೂನತೆಯನ್ನು ಮೊದಲು ಸರಿಪಡಿಸಲಿ ಎಂದು ಒತ್ತಾಯಿಸಿದ್ದಾರೆ.








