
ಕುಶಾಲನಗರ ಅ.17 NEWS DESK : ಕೊಡಗು ಜಿಲ್ಲೆಯನ್ನು ಸ್ವಚ್ಛವಾಗಿಡಲು ಎಲ್ಲರೂ ಬದ್ಧರಾಗಬೇಕು ಎಂದು ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಕರೆ ನೀಡಿದರು. ಜಿಲ್ಲೆಯ ವಿವಿಧ ಸಂಘಟನೆಗಳು ಸೇರಿ ಜಿಲ್ಲೆಯಾದ್ಯಂತ ಸ್ವಚ್ಛ ಕೊಡಗು, ಸುಂದರ ಕೊಡಗು ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೊಡಗು ಜಿಲ್ಲೆಯ ಪ್ರಕೃತಿ ಸೌಂದರ್ಯಕ್ಕೆ ಧಕ್ಕೆಯಾಗದ ರೀತಿಯಲ್ಲಿ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. ಅದನ್ನು ಉಳಿಸುವ ನಿಟ್ಟಿನಲ್ಲಿ 250 ಕ್ಕೂ ಹೆಚ್ಚು ಸಂಘಟನೆಗಳು ಪಾಲ್ಗೊಂಡು ಸ್ವಚ್ಛತೆಗಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು. ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಕುಶಾಲನಗರ ಸ್ಥಾನೀಯ ಸಮಿತಿಯ ಅಧ್ಯಕ್ಷ ಕೆ.ಎಸ್.ನಾಗೇಶ್ ಮಾತನಾಡಿ, ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವುದು ಎಲ್ಲರ ಕರ್ತವ್ಯ. ಇಂತಹ ಅಭಿಯಾನ ನಿತ್ಯ ನಿರಂತರವಾಗಿ ನಡೆಯಬೇಕೆಂದು ತಿಳಿಸಿದರು.
ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಪುರಸಭೆ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರು ಮಾತನಾಡಿ, ಕುಶಾಲನಗರ ಪಟ್ಟಣ ಸೇರಿದಂತೆ ಜಿಲ್ಲೆಯಲ್ಲಿ ಸ್ವಚ್ಚತೆ ಕಾಪಾಡಲು ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಎಂದರು. ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಮಾಜಿ ಅಧ್ಯಕ್ಷ ಬಿ.ಜಿ.ಮಂಜುನಾಥ್ ಗುಂಡೂರಾವ್, ಪುರಸಭೆಯ ಮುಖ್ಯಾಧಿಕಾರಿ ಟಿ.ಜೆ.ಗಿರೀಶ್, ಕುಶಾಲನಗರದ ವೃತ್ತ ನಿರೀಕ್ಷಕ ದಿನೇಶ್ ಕುಮಾರ್, ಹಿರಿಯ ಆರೋಗ್ಯ ನಿರೀಕ್ಷಕ ಉದಯ್ ಕುಮಾರ್, ಟ್ರಾವೆಲ್ಸ್ ಅಸೋಸಿಯೇಷನ್ ನ ಪ್ರಮುಖರಾದ ಜನಾರ್ದನ ಪ್ರಭು, ಡಿ.ಕೆ.ಮಂಜುನಾಥ್, ಹೆಚ್.ಎಂ.ಚಂದ್ರು, ವಿವಿಧ ಸಂಘಟನೆಗಳ ಪ್ರಮುಖರಾದ ಜೋಸೆಫ್ ವಿಕ್ಟರ್ ಸೋನ್ಸ್, ಎಂ.ಡಿ.ರಂಗಸ್ವಾಮಿ, ಚಿತ್ರಾ ರಮೇಶ್, ಕೆ.ಎಸ್.ರಾಜಶೇಖರ್, ಕೆ.ಜಿ.ಸತೀಶ್, ಕೆ.ಬಿ.ರಾಜು, ಟಿ.ಜಿ.ಪ್ರೇಮಕುಮಾರ್ ಸೇರಿದಂತೆ ನಾಗರಿಕರು ಪಾಲ್ಗೊಂಡಿದ್ದರು. ಪಟ್ಟಣದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಿಂದ ಆರಂಭಗೊಂಡ ಸ್ವಚ್ಚತಾ ಕಾರ್ಯವು ಪಟ್ಟಣದ ಪ್ರಮುಖ ಬೀದಿ, ಅಯ್ಯಪ್ಪ ಸ್ವಾಮಿ ರಸ್ತೆ, ರಥಬೀದಿ, ಖಾಸಗಿ ಬಸ್ ನಿಲ್ದಾಣದ ಬಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಚತೆ ನಡೆಸಲಾಯಿತು. ಪಟ್ಟಣದ ಪ್ರಮುಖ ರಸ್ತೆ, ರಥಬೀದಿ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಪುರಸಭೆಯ ಪೌರ ಕಾರ್ಮಿಕರು ಕಸ,ಕಡ್ಡಿ ಮತ್ತಿತರ ತ್ಯಾಜ್ಯವನ್ನು ತೆಗೆದು ಸ್ವಚ್ಚಗೊಳಿಸಿದ್ದು ಗಮನ ಸೆಳೆಯಿತು.









