ಮಡಿಕೇರಿ NEWS DESK ಅ.18 : ಜಿಲ್ಲಾಡಳಿತವು 2025 ನೇ ಸಾಲಿನ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ, ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಅರೋಗ್ಯ ಸಂರಕ್ಷಣೆಯ ಹಿತದೃಷ್ಟಿಯಿಂದ ಭಾರತ ಸರ್ಕಾರದ ಪರಿಸರ (ಸಂರಕ್ಷಣಾ) ನಿಯಮಾವಳಿ 1986 ತಿದ್ದುಪಡಿ 1999 ಮತ್ತು 2000 ಅಡಿಯಲ್ಲಿ ನಿಗಧಿಪಡಿಸಿರುವ ಮಾನಕಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೋರಿದ್ದಾರೆ. ಸರ್ವೋಚ್ಚ ನ್ಯಾಯಾಲಯವು ನೀಡಿದ ನಿರ್ದೇಶನದಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಿರುತ್ತದೆ. ಪಟಾಕಿ ಮಾರಾಟ ಮಾಡುವವರು ಹಾಗೂ ಪಟಾಕಿ ಸಂಗ್ರಹಿಸುವ ಗೋದಾಮುಗಳನ್ನು ಸಂಬಂಧ ಪಟ್ಟ ಎಲ್ಲಾ ಇಲಾಖೆಯ ಅನುಮತಿ ಪಡೆಯತಕ್ಕದ್ದು.
125 ಡೆಸಿಬಲ್ಗಳಿಗಿಂತ ಹೆಚ್ಚು ಶಬ್ಧ ಉಂಟುಮಾಡುವ ಪಟಾಕಿಗಳ ದಾಸ್ತಾನು, ಮಾರಾಟ ಹಾಗೂ ಉಪಯೋಗಿಸುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ. ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ಸಮಯ ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಿದೆ.
ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯ ಹಾಗೂ ಮಾನ್ಯ ಹಸಿರು ನ್ಯಾಯ ಪೀಠ, ನವದೆಹಲಿ ರವರ ಆದೇಶದಂತೆ ಎಲ್ಲಾ ಹಸಿರು ಪಟಾಕಿಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂ.ಆರ್ ಕೋಡ್ ಇರುವ ಹಸಿರು ಪಟಾಕಿ (ಕಡಿಮೆ ಮಾಲಿನ್ಯ ಉಂಟುಮಾಡುವ) ಗಳನ್ನು ಮಾತ್ರ ಮಾರಾಟ ಮಾಡುವುದು. ದಿನದ ಯಾವುದೇ ಸಮಯದಲ್ಲಿ ನಿಶಬ್ಧವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳಲ್ಲಿ (ಆಸ್ಪತ್ರೆ, ಶಾಲೆ, ಪ್ರಾರ್ಥನಾಮಂದಿರ, ವೃದ್ಧಾಶ್ರಮ ಇತ್ಯಾದಿಗಳು) ಸುತ್ತ ಮುತ್ತ ಯಾವುದೇ ರೀತಿಯ ಶಬ್ದ ಉಂಟುಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳ ಬಳಕೆಯನ್ನು ನಿಷೇಧಿಸಲಾಗಿದೆ. ಯಾವುದೇ ಕ್ರಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಲ್ಲಿ, ಅದಕ್ಕೆ ಕಾರಣರಾದವರ ಮೇಲೆ ಕಾಯ್ದೆಯನುಸಾರ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗುವುದು. ಆದುದರಿಂದ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ಧ ಹಾಗೂ ವಾಯು ಮಾಲಿನ್ಯ ನಿಯಂತ್ರಣದಲ್ಲಿಟ್ಟು ಹಬ್ಬವನ್ನು “ಹಸಿರು ದೀಪಾವಳಿ-ಸ್ವಸ್ಥ ದೀಪಾವಳಿ: ಪರಿಸರ ಸ್ನೇಹಿ ದೀಪಾವಳಿ” ಯನ್ನಾಗಿ ಆಚರಿಸಲು ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.










