
ಮಡಿಕೇರಿ ಅ.20 NEWS DESK : ಮಡಿಕೇರಿ ಹಿಂದೂ ಮಲಯಾಳಿ ಸಂಘದ ವತಿಯಿಂದ ಓಣಾ ಘೋಷಂ ಹಾಗೂ ಓಣಾಂ ಸಧ್ಯ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ನಗರದ ಕಾವೇರಿ ಹಾಲ್ನಲ್ಲಿ ತಿರುವಾದಿರ ನೃತ್ಯದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕ ಕೆ.ಜಿ.ಬೋಪಯ್ಯ ಓಣಂ ಕೇರಳದ ಪವಿತ್ರವಾದ ಹಬ್ಬವಾಗಿದ್ದು, ಕೊಡಗಿನಲ್ಲೂ ಕೂಡ ತಲತಲಾಂತರದಿಂದ ಈ ಹಬ್ಬವನ್ನು ಹಿಂದೂ ಮಲಯಾಳಿ ಸಮುದಾಯ ಆಚರಿಸುತ್ತಾ ಬಂದಿದೆ. ಆ ಮೂಲಕ ಹಿಂದೂ ಮಲಯಾಳಿ ಸಮುದಾಯವನ್ನು ಸಂಘಟಿಸುವ ಕಾರ್ಯವೂ ನಡೆಯುತ್ತಿದೆ ಎಂದರು. ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ಸಾಧಕರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ನೆರವೇರಿಸಿ ಮಾತನಾಡಿ, ಹಿಂದೂ ಮಲಯಾಳಿ ಸಮುದಾಯಕ್ಕೂ ಮೈಸೂರು ಅರೆಮನೆಗೂ ಅವಿನಾಭಾವ ಸಂಬಂಧವಿದೆ. ಅರಮನೆಯಲ್ಲೂ ಬಲಿಪಾಡ್ಯಮಿ ಆಚರಿಸಲ್ಪಡುತ್ತದೆ. ಇಲ್ಲಿನ ಸಂಸ್ಕೃತಿ, ಪರಂಪರೆಯನ್ನು ಸಂರಕ್ಷಿಸಲು ಪ್ರತಿಯೊಬ್ಬರು ಪಣತೊಡಬೇಕು. ನಮ್ಮ ಧರ್ಮವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಿ ಗೌರವಿಸಲಾಯಿತು. ಮಡಿಕೇರಿ ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ.ವಿ.ಧರ್ಮೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಡಾ ಅಧ್ಯಕ್ಷ ಬಿ.ವೈ.ರಾಜೇಶ್, ಹಿಂದೂ ಮಾಲಯಾಳಿ ಸಮಾಜದ ಜಿಲ್ಲಾಧ್ಯಕ್ಷ ವಿ.ಎಂ.ವಿಜಯ, ಓಣಂ ಆಚರಣಾ ಸಮಿತಿ ಅಧ್ಯಕ್ಷ ಟಿ.ಕೆ.ಸುಧೀರ್, ಮಡಿಕೇರಿ ಹಿಂದೂ ಮಲಯಾಳೆ ಸಂಘದ ಸ್ಥಾಪಕಾಧ್ಯಕ್ಷ ಕೆ.ಎಸ್.ರಮೇಶ್, ಗೌರವ ಸಲಹೆಗಾರ ಪಿ.ಟಿ.ಉಣ್ಣಿಕೃಷ್ಣ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಸಂಧ್ಯಾಮಣಿ ಪ್ರಾರ್ಥಿಸಿದರು, ಶಶಿ ನಿರೂಪಿಸಿದರು, ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಪಿ.ಅಶೋಕ್ ಸ್ವಾಗತಿಸಿದರು, ಜಂಟಿ ಕಾರ್ಯದರ್ಶಿ ಟಿ.ಬಿ.ಪ್ರಭಾಕರ್ ವಂದಿಸಿದರು.









