
ಪುತ್ತೂರು ಅ.21 NEWS DESK : ಆರ್ಥಿಕವಾಗಿ ಸದೃಢರಾದವರು ಸಮಾಜದಲ್ಲಿನ ದುರ್ಬಲರಿಗೆ ತಮ್ಮ ಗಳಿಕೆಯ ಒಂದು ಭಾಗವನ್ನು ನೀಡುವುದು ಒಳ್ಳೆಯ ಕೆಲಸ. ಸಂವಿಧಾನದ ಸಮ ಸಮಾಜ ಉದ್ದೇಶ, ಬಸವಣ್ಣನ ಕಾಯಕ ಮತ್ತು ದಾಸೋಹ ತತ್ವ ಎಲ್ಲವೂ ಇದೇ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಪುತ್ತೂರಿನಲ್ಲಿ ಆಯೋಜಿಸಿದ್ದ “ಅಶೋಕ ಜನ-ಮನ 2025” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಶೋಕ್ ರೈ ಅವರು ನಮ್ಮ ಶಾಸಕರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಟ್ರಸ್ಟ್ ವತಿಯಿಂದ ವಸ್ತ್ರದಾನ ಕಾರ್ಯವನ್ನು13 ವರ್ಷಗಳಿಂದ ಮಾಡುತ್ತಾ ಬರುತ್ತಿದ್ದಾರೆ. ಒಂದು ಲಕ್ಷ ಜನರಿಗೆ ಇಂದು ವಸ್ತ್ರದಾನ ಮಾಡುತ್ತಿದ್ದಾರೆ. ಅವರ ಈ ಕಾರ್ಯ ಇತರರಿಗೆ ಅವರು ಸ್ಫೂರ್ತಿಯಾಗಲಿ. ನಮ್ಮ ನಾಡು ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕು. ಸರ್ವಜನಾಂಗದ ಶಾಂತಿಯ ತೋಟವಾಗಬೇಕು. ಪರಸ್ಪರ ಕಚ್ಚಾಡುವ, ಅಸಮಾನತೆವುಳ್ಳ ಸಮಾಜ ನಿರ್ಮಾಣವಾಗಬಾರದು. ಇತರೆ ಧರ್ಮಗಳ ಬಗ್ಗೆ ಸಹಿಷ್ಣುತೆ ಅಗತ್ಯ. ಸಹಬಾಳ್ವೆ ಇರಬೇಕು. ಇದನ್ನು ಎಲ್ಲರೂ ಪಾಲಿಸಿದಾಗ ಸಂವಿಧಾನದ ಧ್ಯೇಯೋದ್ದೇಶಗಳನ್ನು ಪಾಲಿಸಿದಂತಾಗುತ್ತದೆ ಎಂದರು. ಶಕ್ತಿ ಯೋಜನೆ ಜಾರಿಯಾದ ನಂತರ ತಲಾ ಆದಾಯದಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಸರ್ಕಾರ ದಿವಾಳಿಯಾಗಿದೆ ಎಂದು ಟೀಕಿಸುತ್ತಾರೆ. ಸರ್ಕಾರದ ಬಳಿ ಹಣವಿಲ್ಲದಿದ್ದರೆ ಕಾಂಗ್ರೆಸ್ ಸರ್ಕಾರ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 2,500 ಕೋಟಿ ರೂ. ಗಳ ಅನುದಾನ ಕೊಡಲು ಸಾಧ್ಯವಾಗುತ್ತಿತ್ತೆ? ಟೀಕೆ ಮಾಡುವವರು ಸುಮ್ಮನೆ ಟೀಕೆ ಮಾಡುತ್ತಾರೆ. ಏಕೆಂದರೆ ಜಾತಿ ಧರ್ಮದ ಹೆಸರಿನಲ್ಲಿ ಜಗಳ ತರುವುದರಲ್ಲಿ ಜಿಲ್ಲೆ ನಂಬರ್ ಒನ್ ಸ್ಥಾನದಲ್ಲಿತ್ತು. ಅದಕ್ಕೆಲ್ಲಾ ನಮ್ಮ ಸರ್ಕಾರ ಕಡಿವಾಣ ಹಾಕಿದೆ. ಜಾತಿ ಧರ್ಮ ಎಂದು ಜಗಳ ತರುವವರ ಮಕ್ಕಳನ್ನು ಇದಕ್ಕೆ ಕಳಿಸುವುದಿಲ್ಲ. ಬಡವರ ಮಕ್ಕಳನ್ನು, ಅಮಾಯಕರನ್ನು ಕಳಿಸುತ್ತಾರೆ. ದಕ್ಷ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪೋಲಿಸ್ ಅಧಿಕಾರಿಗಳು ದಕ್ಷರಾಗಿದ್ದರೆ ಬದಲಾವಣೆ ತರಲು ಸಾಧ್ಯ. ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳು ಅನ್ಯೋನ್ಯತೆಯಿಂದ ಕೆಲಸ ಮಾಡಬೇಕು. ಬಜೆಟ್ ನಲ್ಲಿ ಘೋಷಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವೈದ್ಯಕೀಯ ಕಾಲೇಜು ಪುತ್ತೂರಿನಲ್ಲಿಯೇ ನಿರ್ಮಾಣವಾಗಲಿದೆ. ಈ ಬಗ್ಗೆ ಯಾರಿಗೂ ಅನುಮಾನ ಪಡುವುದು ಬೇಡ ಎಂದು ಹೇಳಿದರು. ವೈದ್ಯಕೀಯ ಕಾಲೇಜು ನಿರ್ಮಾಣವನ್ನು ಸರ್ಕಾರ ಮಾಡಿಯೇ ಮಾಡಲಿದೆ. ಎಲ್ಲಾ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ನಮ್ಮ ಬದ್ಧತೆಯಾಗಿದೆ. ಇಲ್ಲಿಯವರೆಗೆ 22 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ನಿರ್ಮಾಣವಾಗಿದೆ. ಕೋಮು ಸೌಹಾರ್ದತೆ ಇದ್ದರೆ ಯಾವುದೇ ರಾಜ್ಯ, ಜಿಲ್ಲೆ ಬೆಳವಣಿಗೆಯಾಗಲು ಸಾಧ್ಯ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಗ್ಗೆ ವಿಶೇಷ ಗಮನ ಹರಿಸಬೇಕು. ಕೋಮು ಸೌಹಾರ್ದತೆಗೆ ಧಕ್ಕೆ ತರುವವರ ಮೇಲೆ ಹಾಗೂ ಸುಳ್ಳು ಸುದ್ದಿ ಹಬ್ಬಿಸಿದವರ ಮೇಲೆ ಪ್ರಕರಣ ದಾಖಲು ಮಾಡಲಾಗುವುದು. ಈ ಬಗ್ಗೆ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಹೆಚ್.ಕೆ ಪಾಟೀಲ್ ಅವರು ಕಾನೂನು ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಜಿಲ್ಲೆಯಲ್ಲಿ ಜೇನು ಕಚ್ಚಿ ಮೃತಪಟ್ಟ ವ್ಯಕ್ತಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಐದು ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.









